
ಬೆಂಗಳೂರು (ಏ.18): ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ನೀಡಿ ರಾಜಕೀಯ ಪುನರ್ಜನ್ಮ ನೀಡಿದ ನೀಡಿದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಾಯಕ ಖಲೀಮುಲ್ಲಾ ಖಾನ್ಗೆ ಈವರೆಗೂ ಯಾವುದೇ ಸ್ಥಾನಮಾನವನ್ನೂ ನೀಡಿಲ್ಲ. ಹೀಗಾಗಿ, ಸಿದ್ದರಾಮಯ್ಯ ಒಂಚೂರು ಕೃತಜ್ಞತೆ ಇಲ್ಲದ ನಾಯಕರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವಾಗ್ದಾಳಿ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಹೊರಬಂದಿದ್ದ ಖಲೀಮುಲ್ಲಾ ಖಾನ್ 2006ರ ವಿಧಾನಸಭಾ ಚುನಾವನೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಖಲೀಮುಲ್ಲಾ ಖಾನ್ ಕನಿಷ್ಠ 10 ಸಾವಿರ ಮತಗಳನ್ನು ಪಡೆಯುವ ಸಾಧ್ಯತೆಯಿತ್ತು. ಹಾಗಾಗಿ, ಖಲೀಮುಲ್ಲಾ ಖಾನ್ ಅವರ ಬೆಂಬಲಕ್ಕಾಗಿ ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮನವಿ ಮಾಡಿದ ಮೇರೆಗೆ ಖಲೀಮುಲ್ಲಾ ಖಾನ್ ಅವರು ಕಾಂಗ್ರೆಸ್ ಬೆಂಬಲಿಸಿದರು.
ಅಚ್ಚೇ ದಿನ್ ಬೇಡ, ಹಳೇ ದಿನಗಳೇ ಸಾಕು ಸ್ವಾಮಿ: ಸಚಿವ ಜಮೀರ್ ಅಹ್ಮದ್ ಖಾನ್
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾತನ್ನೂ ಮೀರಿ ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಖಲೀಮುಲ್ಲಾ ಖಾನ್ ಅವರು ಕಾಂಗ್ರೆಸ್ಗೆ ಬೆಂಬಲಿಸಿದ ಪರಿಣಾಮವಾಗಿ ಅಂದು ಸಿದ್ದರಾಮಯ್ಯಗೆ ರಾಜಕೀಯ ಪುನರ್ಜನ್ಮ ಸಿಕ್ಕಿತು. ಆದರೆ, ಸಿದ್ದರಾಮಯ್ಯ ಅದಾದ ನಂತರ ಎರಡು ಬಾರಿ ಮುಖ್ಯಮಂತ್ರಿ ಆದರೂ ಕೂಡ ಅವರಿಗೆ ಈವರೆಗೂ ಯಾವುದೇ ಸ್ಥಾನಮಾನವನ್ನೂ ಕೊಟ್ಟಿಲ್ಲ. ಹಾಗಾಗಿ ಸಿದ್ದರಾಮಯ್ಯ ವಚನಭ್ರಷ್ಟ, ಕೃತಜ್ಞತೆ ಇಲ್ಲದ ನಾಯಕ, ಹತ್ತಿದ ಏಣಿಯನ್ನೇ ಒದೆಯುವ ಗುಂಪಿಗೆ ಸೇರಿದವರು ಎಂದು ಹೆಚ್. ವಿಶ್ವನಾಥ್ ವಾಗ್ದಾಳಿ ನಡೆಸಿದರು.
ಇನ್ನು ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿ ಅಧಿಕಾರಕ್ಕೆ ಬರಲಿದೆ, ಮೋದಿ ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ. ದೇಶದ ದೊಡ್ಡ ದೊಡ್ಡ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ. ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದೆ. ಇನ್ನೂ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ ಎಂದು ಹೇಳಿದರು.
ದೇವೇಗೌಡರಿಗಿಂತ ಎಚ್.ಡಿ.ಕುಮಾರಸ್ವಾಮಿ ದೊಡ್ಡವರಾ?: ಸಚಿವ ಚಲುವರಾಯಸ್ವಾಮಿ
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗ್ಯಾರಂಟಿ ಕುರಿತು ಮಹಿಳೆಯರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಕುರಿತು ಮಾತನಾಡುತ್ತಾ, ಈ ಹಿಂದೆ ನೀವು ಗರ್ಗೇಶ್ವರಿಯಲ್ಲಿ ಮಹಿಳೆಯ ಸೆರಗು ಎಳೆದಿದ್ದು ಮರೆತು ಹೋಯಿತಾ ಸಿದ್ದರಾಮಯ್ಯನವರೇ? ಆಗ ನೀವು ಮಾಡಿದ್ದು ಸರಿಯಾ? ಈಗ ಕುಮಾರಸ್ವಾಮಿ ಆಡಿದ್ದ ಮಾತಿಗೆ ಸ್ವತಃ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೂಡ ಯಾಚಿಸಿದ್ದಾರೆ. ಆದರೂ ಏಕೆ ಅದೇ ವಿಚಾರ ಮುಂದಿಟ್ಟುಕೊಂಡು ಗಾಯದ ಮೇಲೆ ಹೊಡೆದು ಹೊಡೆದು ದೊಡ್ಡದು ಮಾಡುತ್ತಿದ್ದೀರಾ? ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಇಲ್ವಾ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಪ್ರಶ್ನೆ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.