ದಳಪತಿಗಳಿಗೆ ಮತ್ತೊಂದು ಶಾಕ್, ಜೆಡಿಎಸ್‌ಗೆ ರಾಜೀನಾಮೆ ನೀಡಿ ಸಿದ್ದರಾಮಯ್ಯ ಮನೆಗೆ ಹೋದ ಮಾಜಿ MLC

By Suvarna NewsFirst Published Jun 14, 2022, 5:22 PM IST
Highlights

* ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ,
* ಜೆಡಿಎಸ್‌ಗೆ ರಾಜೀನಾಮೆ ನೀಡಿ ಸಿದ್ದರಾಮಯ್ಯ ಮನೆಗೆ ಹೋದ ಮಾಜಿ MLC
* ಕಾಂಗ್ರೆಸ್‌ನತ್ತ ಶ್ರೀನಾಥ್  ಚಿತ್ತ

ಕೊಪ್ಪಳ, (ಜೂನ್.14): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಶುರುವಾಗಿದೆ. ಅದರಲ್ಲೂ ಜೆಡಿಎಸ್‌ನಿಂದ ಒಬ್ಬರಿಂದೊಬ್ಬರು ನಾಯಕರು ಆಚೆ ಬರುತ್ತಿದ್ದಾರೆ. ಇದೀಗ ಅವರ ಪಟ್ಟಿಗೆ  ಜೆಡಿಎಸ್ ಕಲಬುರಗಿ ವಿಭಾಗದ ಕಾರ್ಯಾಧ್ಯಕ್ಷ ಎಚ್. ಆರ್. ಶ್ರೀನಾಥ್ ಸೇರಿದ್ದಾರೆ.

ಹೌದು...ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಜೆಡಿಎಸ್ ಕಲಬುರಗಿ ವಿಭಾಗದ ಕಾರ್ಯಾಧ್ಯಕ್ಷ ಎಚ್. ಆರ್. ಶ್ರೀನಾಥ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.  ಜೆಡಿಎಸ್ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರಿಗೆ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ . ಅಲ್ಲದೇ  ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರಲು ಸಿದ್ಧತೆ ನಡೆಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷವನ್ನು ಸೇರಿ ಕಲಬುರಗಿ ವಿಭಾಗದ ಕಾರ್ಯಾಧ್ಯಕ್ಷರಾಗಿದ್ದರು ಜತೆಗೆ ತಮ್ಮ ಆಪ್ತ ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರಿಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೊಡಿಸಿ ಅವರ ಗೆಲುವಿಗಾಗಿ ಶ್ರಮಿಸಿದ್ದರು. 

ಜೆಡಿಎಸ್‌ನ ಮತ್ತೊಂದು ವಿಕೆಟ್‌ ಪತನ: ಮಾಜಿ ಎಂಎಲ್‌ಸಿ ಶ್ರೀನಾಥ್‌ ಕಾಂಗ್ರೆಸ್‌ಗೆ?

ಕಳೆದ 6 ತಿಂಗಳಿಂದ ಜೆಡಿಎಸ್ ಪಕ್ಷದ ಯಾವುದೇ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಂಡಿರಲಿಲ್ಲ. ಜತೆಗೆ ಕಾಂಗ್ರೆಸ್ ನ ಪ್ರಮುಖ ಮುಖಂಡರನ್ನು ಬೆಂಗಳೂರು ಸೇರಿದಂತೆ ಗಂಗಾವತಿ ನಗರದಲ್ಲಿ ತಮ್ಮ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಎಚ್ ಆರ್ ಶ್ರೀನಾಥ್ ಅವರ ತಂದೆ ಮಾಜಿ ಸಂಸದ ಕಾಂಗ್ರೆಸ್ ಹಿರಿಯ ಮುಖಂಡ ಎಚ್ .ಜಿ. ರಾಮುಲು ಅವರು ಕಾಂಗ್ರೆಸ್ ಪಕ್ಷದಲ್ಲಿನ ಕೆಲ ಮುಖಂಡರ ನಡವಳಿಕೆಯಿಂದ ನೊಂದು ರಾಜಕೀಯವಾಗಿ ತಟಸ್ಥರಾಗಿದ್ದರು. ಶ್ರೀನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಕರಿಯಣ್ಣ ಸಂಗಟಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ 14 ಸಾವಿರ ಮತಗಳನ್ನು ಪಡೆದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸ್ವಲ್ಪ ಅಂತರದಲ್ಲಿ ಸೋಲನ್ನು ಕಂಡಿದ್ದರು .ಇದೀಗ ಎಚ್ ಆರ್ ಶ್ರೀನಾಥ್ ಅವರು ಕಾಂಗ್ರೆಸ್ ಪಕ್ಷ ಸೇರುವುದರಿಂದ ಪ್ಲಸ್ ಆಗಲಿದೆ.

ಸಿದ್ದರಾಮಯ್ಯನವರನ್ನ ಭೇಟಿಯಾದ ಶ್ರೀನಾಥ್
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರೊಂದಿಗೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಬಿ. ಕೆ.ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ಮುಖಂಡರನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಇಂದು(ಮಂಗಳವಾರ) ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಕುರಿತು ಮಾತುಕತೆ ನಡೆಸಿದ್ದಾರೆ.

ಟಿಕೆಟ್ ಆಕಾಂಕ್ಷಿಯಾಗಿದ್ದಾರಾ ಶ್ರೀನಿವಾಥ್?
ಯೆಸ್.....ಶ್ರೀನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಮುಂಬರುವ ಚುನಾವಣೆಗೆ ಗಂಗಾವತಿ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣೀಟ್ಟಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಈಗಾಗಲೇ ಗಂಗಾವತಿಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಅವರಿಗೆ ಟಿಕೆಟ್ ಎಂದು ಹೇಳಲಾಗುತ್ತಿದೆ.

ಆದ್ರೆ, ಗಂಗಾವತಿಯಲ್ಲಿ ಹಿಂದೂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಮಾತುಗಳು ಸಹ ಕೇಳಿರುತ್ತಿವೆ. ಈ ಬಗ್ಗೆ ಬಿಕೆ ಹರಿಪ್ರಸಾದ್ ಅವರಿಗೂ ಮುಖಂಡರು ಮನವಿ ಮಾಡಿದ್ದನ್ನು ಇಲ್ಲಿಸ್ಮರಿಸಬಹುದು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಘು ಗುಜ್ಜಲ್ ಹಾಗೂ ಎಚ್. ಆರ್. ಭರತ್ ಉಪಸ್ಥಿತರಿದ್ದರು.

click me!