ಬಿಜೆಪಿ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಅವರು ಟಿಪ್ಪುವನ್ನು ಹಾಡಿ ಹೊಗಳಿದಕ್ಕೆ ರಾಜ್ಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್ ಚರ್ಚೆ ಶುರುವಾಗಿದೆ
ಬೆಂಗಳೂರು, ಆ.26): ಟಿಪ್ಪು ಇತಿಹಾಸವನ್ನು ಶಾಲಾ ಪಠ್ಯದಿಂದ ಕೈಬಿಡುವ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಟಿಪ್ಪುವನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್ ವಿಶ್ವಾನಾಥ್ ಹಾಡಿ ಹೊಗಳಿದ್ದಾರೆ. ಇತ್ತ ಹಳ್ಳಿ ಹಕ್ಕಿ ವಿಶ್ವನಾಥ್ ಸತ್ಯವನ್ನೇ ಹೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳುವ ಮೂಲಕ ಧ್ವನಿಗೂಡಿಸಿದ್ದಾರೆ
ಟಿಪ್ಪು ಸುಲ್ತಾನ್ ಈ ನೆಲದ ಮಣ್ಣಿನ ಮಗ. ಅವರು ಯಾವುದೇ ಪಕ್ಷ, ಜಾತಿ ಧರ್ಮಕ್ಕೆ ಸೇರಿದವರಲ್ಲ. ಟಿಪ್ಪುವನ್ನು ಯಾವುದೇ ಪಕ್ಷಕ್ಕೆ ಜಾತಿ ಧರ್ಮಕ್ಕೆ ಸೇರಿಸಿ ಸಣ್ಣವನು ಮಾಡಬಾರದು ಎಂದಿದ್ದಾರೆ.
ಟಿಪ್ಪು ಸುಲ್ತಾನ್ ಬಗ್ಗೆ ಹಾಡಿ ಹೊಗಳಿ ಎಲ್ಲರ ಹುಬ್ಬೇರುವಂತೆ ಮಾಡಿದ ಬಿಜೆಪಿ ನಾಯಕ
ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರ್ ಖಂಡ್ರೆ ಟಿಪ್ಪು ಈ ನೆಲದ ಮಣ್ಣಿನ ಮಗ ಎಂದು ಹೇಳುವ ಮೂಲಕ ವಿಶ್ವನಾಥ್ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಕುರಿತ ಪಠ್ಯವನ್ನು ಪಠ್ಯ ಪುಸ್ತಕದಿಂದ ತೆಗೆಯುವ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿ ಪಕ್ಷದ ನಾಯಕ ಎಚ್.ವಿಶ್ವನಾಥ್ ಟಿಪ್ಪು ಈ ದೇಶ ಹಾಗೂ ಈ ನೆಲದ ಮಣ್ಣಿನ ಮಗ ಎನ್ನುತ್ತಾರೆ. ಬ್ರಿಟೀಷರ ವಿರುದ್ಧ ಹೋರಾಡಿದ ಹೋರಾಟಗಾರ ಎಂದು ಸರ್ಟಿಫಿಕೇಟ್ ಕೊಟ್ಟಿದ್ದು, ಬಿಜೆಪಿ ನಾಯಕರೇ ಈಗಲಾದರೂ ಸತ್ಯ ಅರ್ಥವಾಯಿತೆ? ಎಂದು ಟಾಂಗ್ ಕೊಟ್ಟರು.
ಬಿಜೆಪಿಯವರು ಸತ್ಯ ಮರೆಮಾಚುವ ಕೆಲಸವನ್ನು ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ದೇಶ ಭಕ್ತ , ವೀರ ಸೇನಾನಿ. ಟಿಪ್ಪು ನಿರ್ಮಾಣ ಮಾಡಿರುವ ದೇವಸ್ಥಾನ ಮತ್ತು ಕೋಟೆಗಳನ್ನುಗಳನ್ನು ನಾಶಮಾಡಲು ಆಗುತ್ತಾ? ಎಂದು ಪ್ರಶ್ನಿಸಿದ ಖಂಡ್ರೆ ಬಿಜೆಪಿ ಇತಿಹಾಸ ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ವಿಶ್ವನಾಥ್ ಸತ್ಯವನ್ನು ಹೇಳಿದ್ದಾರೆ ಹಾಗಾಗಿ ನಾನು ವಿಶ್ವನಾಥ್ ಹೇಳಿಕೆಯನ್ನು ಬೆಂಬಲಿಸುವೆ ಎಂದರು.