ಜೆಡಿಎಸ್-ಬಿಜೆಪಿ ಮೈತ್ರಿ ಹಾಲು-ಜೇನಿನಂತೆ: ಎಚ್.ಡಿ.ಕುಮಾರಸ್ವಾಮಿ

By Govindaraj SFirst Published Mar 29, 2024, 4:23 AM IST
Highlights

ನಾನು ಪಲಾಯನವಾದಿಯಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು, ಜನರ ಅಪೇಕ್ಷೆಗೆ ತಲೆಬಾಗಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸಲು ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. 

ಮಂಡ್ಯ/ಮೈಸೂರು (ಮಾ.29): ನಾನು ಪಲಾಯನವಾದಿಯಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು, ಜನರ ಅಪೇಕ್ಷೆಗೆ ತಲೆಬಾಗಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸಲು ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಗುರುವಾರ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಆರಂಭದಲ್ಲಿ ಡಿ.ಸಿ.ತಮ್ಮಣ್ಣ ಹಾಗೂ ಪುಟ್ಟರಾಜು ಸ್ಪರ್ಧೆ ಮಾಡಬೇಕೆಂದು ಚರ್ಚೆ ನಡೆದಿದ್ದು ನಿಜ. ಆದರೆ, ಎರಡೂ ಪಕ್ಷದ ಕಾರ್ಯಕರ್ತರು, ನಾಯಕರು ನಿಮ್ಮ ಅವಶ್ಯಕತೆ ಇದೆ, ಬರಲೇಬೇಕೆಂದು ಆದೇಶ ಮತ್ತು ಸಲಹೆ ಕೊಟ್ಟಿದ್ದರು. 

ಸ್ಪರ್ಧಿಸುವ ಆದೇಶ ಕಾರ್ಯಕರ್ತರಿಂದ ಬಂದಿದೆ. ಹಾಗಾಗಿ ಜನರ ನಿರೀಕ್ಷೆಯನ್ನು ಹುಸಿಗೊಳಿಸದೆ, ಅವರ ಭಾವನೆಗಳಿಗೆ ಧಕ್ಕೆ ತರದೆ ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಜವಾದ ಮೈತ್ರಿ. ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿ ನಿರ್ಧಾರ ಮಾಡಲಾಗಿದೆ. ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆ ಹಾಲು-ಜೇನಿನಂತೆ ಮಧುರವಾಗಿದೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದು ದೇವೇಗೌಡರು ಹೇಳಿರಲಿಲ್ಲ. ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದರು ಎಂದರು. ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳೊಳಗೆ ಸರ್ಕಾರ ಪತನವಾಗಲಿದೆ. 

ಸರ್ಕಾರ ಬೀಳಿಸುವುದಕ್ಕೆ ನಾವು, ವಿಜಯೇಂದ್ರ ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದು ಭವಿಷ್ಯ ನುಡಿದರು. ಸಂಸದೆ ಸುಮಲತಾ ಬಗ್ಗೆ ಮಾತನಾಡಿ, ಅವರು ನನಗೆ ಶಾಶ್ವತ ಶತ್ರುವೇನಲ್ಲ. ನಾನು ಹಾಗೂ ಅಂಬರೀಶ್ ಹಲವು ವರ್ಷದ ಸ್ನೇಹಿತರು. ಸುಮಲತಾ ಅವರೂ ಕೂಡ ನನಗೆ ಊಟ ಬಡಿಸಿದ್ದಾರೆ. ಅವರೂ ಸಹ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಸುಮಲತಾ ಅವರೂ ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಮಾಡಿ ನನಗೆ ಬೆಂಬಲ ಘೋಷಣೆ ಮಾಡುತ್ತಾರೆ. ಅಗತ್ಯವಿದ್ದರೆ ಅವರನ್ನು ಭೇಟಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದುರಂಕಾರದ ಮಾತು ಬಿಟ್ಟು, ಕೊಡುಗೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸಲಹೆ

ಡಿಕೆಶಿ ಟೆಂಪಲ್‌ ರನ್‌: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗುರುವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನಂಜಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಅಕ್ಕಿ, ಬೆಲ್ಲದ ಮೂಲಕ ತುಲಾಭಾರ ಸೇವೆ ಸಮರ್ಪಿಸಿದರು. ನಂತರ, ಪಾರ್ವತಿದೇವಿ, ಸುಬ್ರಹ್ಮಣ್ಯ, ನಾರಾಯಣಸ್ವಾಮಿ ದೇವಾಲಯಗಳಿಗೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು.

click me!