
ಸೊರಬ (ಏ.11): ಪ್ರಧಾನಿ ನರೇಂದ್ರ ಮೋದಿ ಮಹಾನ್ ಸುಳ್ಳುಗಾರ. ಅಭಿವೃದ್ಧಿಪರ ಚಿಂತನೆ ನಡೆಸದೇ ಧಾರ್ಮಿಕ ವಿಚಾರ ಮುಂದಿಟ್ಟುಕೊಂಡು ಸುಳ್ಳು ಭಾಷಣ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಜನಸಾಮಾನ್ಯರಿಗೆ ನಾಮ ಹಾಕುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಲೇವಡಿ ಮಾಡಿದರು. ತಾಲೂಕಿನ ಶಿಗ್ಗಾ ಗ್ರಾಮದಲ್ಲಿ ಲೋಕಸಭಾ ನಿಮಿತ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರ ಪರವಾಗಿ ಸಾರ್ವಜನಿಕ ಬಹಿರಂಗ ಸಭೆ ನಡೆಸಿ ಮತಯಾಚಿಸಿದರು.
ಕಾಂಗ್ರೆಸ್ ಜನಪರವಾದ ಕಾಳಜಿ ಹೊಂದಿ, ಸಮಾಜದಲ್ಲಿ ಅತ್ಯಂತ ಕೆಳಸ್ತರದಲ್ಲಿ ಬದುಕುತ್ತಿರುವವರಿಗೆ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದೆ. ಅಲ್ಲದೇ ರೈತರು ಮತ್ತು ಕೂಲಿ ಕಾರ್ಮಿಕರಿಗಾಗಿ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರ ರೂಪಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಸಲ್ಲದ ಹೇಳಿಕೆಗಳನ್ನು ನೀಡಿ ಮಸಿ ಬಳಿಯುವ ಕೆಲಸಕ್ಕೆ ಕೈಹಾಕಿದ್ದಾರೆ. ಜನತೆ ಇದಕ್ಕೆ ಆಸ್ಪದ ನೀಡಬಾರದು ಎಂದರು.
ಬಿಜೆಪಿ ಧರ್ಮ ರಾಜಕೀಯಕ್ಕೆ ಜನ ಬ್ರೇಕ್ ಹಾಕ್ತಾರೆ: ಸಚಿವ ಮಧು ಬಂಗಾರಪ್ಪ
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಅಯೋಧ್ಯೆ ರಾಮ ಮಂದಿರವನ್ನು ಚುನಾವಣೆಯ ದುರುದ್ದೇಶದಿಂದ ಉದ್ಘಾಟಿಸಲಾಗಿದೆ. ಇದಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ದೇವರು, ಧರ್ಮವೆಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದೇ ನೆಲದಲ್ಲಿ ಜನಿಸಿದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಆರಾಧನೆ ಯೋಜನೆಯಿಂದ ೨೧ ಸಾವಿರ ಮಂದಿರಗಳನ್ನು ಕಟ್ಟಿಸಿದ್ದರು. ಆದರೆ ಇದನ್ನು ಮರೆತು ಮಾತನಾಡುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರಳಾಗಿ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆಗಳಿಗೆ ಶಕ್ತಿ ತುಂಬಿದ್ದಾರೆ. ಸೊರಬ ತಾಲೂಕು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ದೇವರ ರೀತಿ ಕಾಣುತ್ತಿದ್ದ ನೆಲ. ಅದೇ ಬಂಗಾರಪ್ಪ ಅವರ ಮಗಳು ನಾನು. ನನಗೂ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಈಶ್ವರಪ್ಪರ ಬಂಡಾಯ ವಿಚಾರ ತಲೆಕೆಡಿಸಿಕೊಂಡಿಲ್ಲ: ಸಂಸದ ಬಿ.ವೈ.ರಾಘವೇಂದ್ರ
ಇದಕ್ಕೂ ಮೊದಲು ಸೊರಬ ಪಟ್ಟಣದ ಬಂಗಾರ ಧಾಮದಿಂದ ೧೫ ಕಿ.ಮೀ. ದೂರದಲ್ಲಿರುವ ಶಿಗ್ಗಾ ಗ್ರಾಮದ ವರೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಮಧು ಬಂಗಾರಪ್ಪ ಅಭಿಮಾನಿಗಳಿಂದ ೨ ಸಾವಿರಕ್ಕೂ ಅಧಿಕ ಬೈಕ್ ರ್ಯಾಲಿ ನಡೆಸಲಾಯಿತು. ವೇದಿಕೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಚ್. ಗಣಪತಿ, ಕೆ.ವಿ.ಗೌಡ, ತಾರಾ ಶಿವಾನಂದಪ್ಪ, ತಬಲಿ ಬಂಗಾರಪ್ಪ, ನಾಗರಾಜ ಚಿಕ್ಕಸವಿ, ಸುಮಾ, ಸುರೇಶ್ ಬಿಳವಾಣಿ, ಪ್ರಕಾಶ್, ಎಂ.ಡಿ. ಶೇಖರ್, ಪ್ರಭಾಕರ ಶಿಗ್ಗಾ, ಪ್ರವೀಣ್ ಶಾಂತಗೇರಿ, ಶಿವಲಿಂಗೇಗೌಡ ಮೊದಲಾದವರು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.