ಎಚ್‌ಡಿಕೆ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವ ಡಿಕೆಶಿಗೆ ಮಾತನಾಡುವ ನೈತಿಕತೆ ಇಲ್ಲ: ಎಚ್.ವಿಶ್ವನಾಥ್

By Govindaraj SFirst Published Apr 20, 2024, 7:43 AM IST
Highlights

ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆ ಮಾತನಾಡುವ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. 

ಕೆ.ಆರ್.ನಗರ (ಏ.20): ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆ ಮಾತನಾಡುವ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಪಟ್ಟಣದ ಶ್ರೀರಾಮ ಬಡಾವಣೆಯಲ್ಲಿರುವ ತಾಲೂಕು ಕಸಾಪ ಅಧ್ಯಕ್ಷ ಡಿಂಡಿಮ ಶಂಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಎನ್.ಡಿಎ ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೇರೆಯವರ ಬಗ್ಗೆ ಮಾತನಾಡುವ ನೀವು ನಿಮ್ಮ ಪಕ್ಷದ ಮುಖಂಡರ ಹಗುರ ಮಾತುಗಳನ್ನು ಕೇಳಬೇಕು ಎಂದರು. ದೇಶದ ಹಿರಿಯ ಕಲಾವಿದೆಯಾಗಿರುವ ಖ್ಯಾತ ನಟಿ ಮತ್ತು ಸಂಸದೆ ಹೇಮಾಮಾಲಿನಿ ಅವರ ಬಗ್ಗೆ ಕೀಳು ಹೇಳಿಕೆ ನೀಡಿದ ಪರಿಣಾಮ ರಾಜ್ಯ ಕಾಂಗ್ರೆಸ್ ಉಸ್ತುವಾರಿಯು ಆಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರಿಗೆ ಕೇಂದ್ರ ಚುನಾವಣಾ ಆಯೋಗ ಎರಡು ದಿನಗಳ ಕಾಲ ಮಾಧ್ಯಮ ಹೇಳಿಕೆ ಮತ್ತು ಚುನಾವಣಾ ಪ್ರಚಾರ ನಿರ್ಬಂಧಿಸಿದ್ದು, ಇದಕ್ಕೆ ಡಿ.ಕೆ. ಶಿವಕುಮಾರ್ ಉತ್ತರ ನೀಡಬೇಕು ಎಂದರು. 

ಎದುರಾಳಿ ಯಾರೆಂಬುದು ಮುಖ್ಯವಲ್ಲ: ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಸಂದರ್ಶನ!

ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿ.ಕೆ. ಶಿವಕುಮಾರ್‌ ಅವರು ಮಾಜಿ ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪು ಹುಡುಕುತ್ತಿದ್ದು, ನಿಮ್ಮ ಪಕ್ಷದ ಹಿರಿಯ ನಾಯಕರೆ ಮಹಿಳೆಯ ಬಗ್ಗೆ ಕೀಳು ಹೇಳಿಕೆ ನೀಡಿ ಆಯೋಗದಿಂದ ಶಿಕ್ಷೆಗೆ ಒಳಗಾಗಿದ್ದರೂ ಸಹ ಯಾಕೆ ಖಂಡಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿಎ ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರು ಕನಿಷ್ಠ ಎರಡು ಲಕ್ಷ ಮತಗಳ ಅಂತರದಿಂದ ಜಯಶಾಲಿಯಾಗಲಿದ್ದು, ಇವರ ಜತೆಗೆ ಮೈಸೂರು-ಕೊಡಗು, ಚಾಮರಾಜನಗರ ಮತ್ತು ಹಾಸನ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿಗಳು ವಿಜಯ ಪತಾಕೆ ಹಾರಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

click me!