
ಬೆಂಗಳೂರು (ಮಾ.11) : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ.
ಚುನಾವಣೆಯ ಕಾವು ಆರಂಭವಾಗುವ ಮೊದಲು ಅನಂತಕುಮಾರ್ ಹೆಗಡೆ ಅವರು ಈ ಬಾರಿ ಸ್ಪರ್ಧಿಸುವುದಿಲ್ಲ ಎಂಬ ವದಂತಿ ಹಬ್ಬಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ದಿಢೀರನೆ ಕ್ರಿಯಾಶೀಲರಾದ ಅವರು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊರಹಾಕಿದರು.
ಪ್ರಧಾನಿ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ: ಚಕ್ರವರ್ತಿ ಸೂಲಿಬೆಲೆ
ಆದರೆ, ಪಕ್ಷದ ಸಂಘಟನೆಯಿಂದ ದೂರ ಇರುವುದಷ್ಟೇ ಅಲ್ಲದೆ ಸದಾ ಪಕ್ಷಕ್ಕೆ ಮುಜುಗರ ಉಂಟು ಮಾಡುವಂಥ ವಿವಾದಾಸ್ಪದ ಹೇಳಿಕೆಗಳನ್ನು ನೀಡುವ ಅನಂತಕುಮಾರ್ ಹೆಗಡೆ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವ ಬದಲು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂಬ ಕೂಗು ಬಿಜೆಪಿ ಆಂತರ್ಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಸಮರ್ಥ ಅಭ್ಯರ್ಥಿಯಾಬಹುದು ಎಂಬ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.
ಈ ಹಿಂದೆಯೂ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕೇಳಿಬಂದಿತ್ತು. ಆ ವೇಳೆ ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ನಿರಾಸಕ್ತಿ ತೋರಿದ್ದರು. ಕಳೆದ 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲೂ ಸೂಲಿಬೆಲೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಪರವಾಗಿ ರಾಜ್ಯಾದ್ಯಂತ ವೈಯಕ್ತಿಕವಾಗಿ ಸಂಚರಿಸಿ ಪ್ರಚಾರ ಮಾಡಿದರು. ಮೋದಿ ಅವರ ನಾಯಕತ್ವ ಯಾಕೆ ಬೆಂಬಲಿಸಬೇಕು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರು.
ಭವಿಷ್ಯದ ಭಾರತಕ್ಕೆ ಮೋದಿ ಮತ್ತೊಮ್ಮೆ ಅವಶ್ಯಕ: ಚಕ್ರವರ್ತಿ ಸೂಲಿಬೆಲೆ
ಈ ಚುನಾವಣೆಯಲ್ಲೂ ಸೂಲಿಬೆಲೆ ಮೋದಿ ಪರ ತಮ್ಮ ಪ್ರಚಾರವನ್ನು ಮುಂದುವರೆಸಿದ್ದಾರೆ. ಆದರೆ, ಈ ಬಾರಿ ಚಕ್ರವರ್ತಿ ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ಇದ್ದ ತಮ್ಮ ಕಠಿಣ ನಿಲುವನ್ನು ಸಡಿಲಗೊಳಿಸಿದ್ದಾರೆ. ಹೀಗಾಗಿಯೇ ಅವರನ್ನು ಕರೆತರುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಬಲವಾದ ಚರ್ಚೆ ಆರಂಭವಾಗಿದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.