
ಧಾರವಾಡ: ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವರ ಲಿಸ್ಟ್ ಪ್ರಕಟವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಮಧು ಬಂಗಾರಪ್ಪ ಅವರಿಗೆ ಮತ್ತೆ ಮಂತ್ರಿಯಾಗುವ ಅವಕಾಶ ಒದಗಿ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಅವರ ಸಹೋದರ ಹಾಗೂ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಕುಟುಂಬದ ಪರವಾಗಿ ತಮ್ಮನಿಗೆ ಶುಭ ಕೋರಿದ್ದಾರೆ.
ನಮ್ಮ ಕುಟುಂಬದ ಕಡೆಯಿಂದ ಮಧು ಬಂಗಾರಪ್ಪಗೆ ಧನ್ಯವಾದಗಳನ್ನು ಹೇಳುತ್ತೇನೆ. ಮಧು ಅವರು ಸೊರಬ ಕ್ಷೇತ್ರಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಯ ಪರವಾಗಿ ಉತ್ತಮ ಕೆಲಸ ಮಾಡಿದ್ದಾರೆ. ಈಗ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆ ಜವಾಬ್ದಾರಿಯನ್ನು ಅವರು ಚೆನ್ನಾಗಿ ನಿಭಾಯಿಸಿಕೊಂಡು ಹೋಗಲಿ ಎಂದು ನಾನು ಹಾರೈಸುತ್ತೇನೆ ಎಂದು ಕುಮಾರ್ ಬಂಗಾರಪ್ಪ ತಿಳಿಸಿದರು. ರಾಜಕೀಯವಾಗಿ ಬದ್ಧ ವೈರಿಗಳಂತೆ ಕಂಡರೂ, ತಮ್ಮನ ಮಂತ್ರಿ ಪದವಿಯ ಬಗ್ಗೆ ಅಣ್ಣ ಕುಮಾರ್ ಬಂಗಾರಪ್ಪ ಅವರು ತೋರಿರುವ ಈ ಸೌಜನ್ಯ ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಇದೇ ವೇಳೆ ರಾಜ್ಯ ಸರ್ಕಾರದ ಆಯಸ್ಸಿನ ಬಗ್ಗೆ ಮಾತನಾಡಿದ ಅವರು, ಈ ಕಾಂಗ್ರೆಸ್ ಸರ್ಕಾರ ಇನ್ನು ಕೇವಲ ಒಂದೂವರೆ ವರ್ಷ ಮಾತ್ರ ಅಧಿಕಾರದಲ್ಲಿ ಇರಲಿದೆ ಎಂದು ಭವಿಷ್ಯ ನುಡಿದರು. ಸರ್ಕಾರವನ್ನು ಉರುಳಿಸುವ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು. ಸರ್ಕಾರವನ್ನು ಬೀಳಿಸುವ ಯಾವುದೇ ಉದ್ದೇಶ ಅಥವಾ ಕಾರ್ಯಕ್ರಮ ಬಿಜೆಪಿ ಮುಂದಿಲ್ಲ. ನಾವು ಸದ್ಯ ಬರಗಾಲದ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಉತ್ತರ ಕರ್ನಾಟಕದಲ್ಲಿ ಬರಗಾಲ ತೀವ್ರವಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ನಾವು ಸರ್ಕಾರ ಬೀಳಿಸುವ ಕೆಲಸ ಮಾಡಲ್ಲ, ಬದಲಾಗಿ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತೇವೆ ಎಂದು ಕುಮಾರ್ ಬಂಗಾರಪ್ಪ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.