
ಬಾಗಲಕೋಟೆ (ಏ.20): ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಕೇವಲ ರಾಜಕೀಯ ಭಾಷಣಕ್ಕೆ ಮಾತ್ರ ಬಿಜೆಪಿ ಬಳಸಿಕೊಂಡಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಆರೋಪಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧಿಕರಣ-2ರ ವರದಿ ಕೇಂದ್ರಕ್ಕೆ ಸಲ್ಲಿಸಿ 13 ವರ್ಷಗಳು ಕಳೆದಿವೆ. ಆದರೂ, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಹಿಂದೇಟು ಹಾಕುತ್ತಿದೆ. ಅಧಿಸೂಚನೆ ಹೊರಡಿಸಲು ಅವರಿಗೆ ಏನು ತೊಂದರೆ ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.
ಪ್ರಧಾನಿ ಮೋದಿ ಮಹದಾಯಿಗೆ ಸಂಬಂಧಿಸಿದಂತೆ ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಐದು ವರ್ಷಗಳು ಕಳೆದಿವೆ. ಇನ್ನೂ ಸಭೆ ಕರೆದಿಲ್ಲ. ಕೃಷ್ಣಾ ಮತ್ತು ಮಹದಾಯಿ ವಿಷಯದಲ್ಲಿ ಬಿಜೆಪಿಗರು ಬರಿ ನ್ಯಾಯಾಲಯದ ನೆಪ ಹೇಳುವುದು ಸರಿಯಲ್ಲ. ಕಾವೇರಿ ವಿಷಯದಲ್ಲಿ ಕೈಗೊಂಡ ನಿರ್ಣಯದಂತೆ ಇಲ್ಲಿಯೂ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವರು ಆಗ್ರಹಿಸಿದರು.
ಕೃಷ್ಣಾ ಮತ್ತು ಮಹದಾಯಿ ವಿಷಯದಲ್ಲಿ ಬಿಜೆಪಿಗರು ರಾಜ್ಯದ ಜನತೆಗೆ ಅನ್ಯಾಯ ಮಾಡಿದ್ದಾರೆ. ಅವರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬರೀ ಸುಳ್ಳನ್ನೇ ಹೇಳಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆ ಭಾವನೆ ಮತ್ತು ಬದುಕಿನ ಸಂಘರ್ಷದ ಮೇಲೆ ನಡೆಯುತ್ತಿದೆ ಎಂದರು.
ಯಲಹಂಕದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ : ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್
ಬಿಜೆಪಿ ದೇವರ ಹೆಸರಿನಲ್ಲಿ ಪ್ರಮಾದ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪ್ರಿಯತೆ ಪಡೆದಿವೆ. ನಮ್ಮ ಸರ್ಕಾರ ಬಡವರ ಪರ, ಜನಪರ ಕೆಲಸ ಮಾಡಿದೆ. ಇದಕ್ಕೆ ಜನ ಬೆಂಬಲ ಕೂಡ ವ್ಯಕ್ತವಾಗಿದೆ. ಹಾಗಾಗಿ ಉತ್ತರ ಕರ್ನಾಟಕದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.