
ಹುಮನಾಬಾದ್ (ಡಿ.7) : ಬಿಜೆಪಿಗೆ ಸೆಡ್ಡು ಹೊಡೆಯುವ ಶಕ್ತಿ ಕೇವಲ ಕಾಂಗ್ರೆಸ್ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಡಿ. 10ರಂದು ಶನಿವಾರ ಪ್ರಥಮ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಡಿ.10ಕ್ಕೆ ಕಲಬುರಗಿಯಲ್ಲಿ ಖರ್ಗೆ ಅಭಿನಂದನಾ ಸಮಾರಂಭ: ಈಶ್ವರ ಖಂಡ್ರೆ
ತಳಮಟ್ಟದಿಂದ ಬೆಳೆದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉಪಾಧ್ಯಕ್ಷರಾಗಿ, ಕಲಬುರಗಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ, ಕೇಂದ್ರ ಸಚಿವರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಈ ಭಾಗಕ್ಕೆ (371ಜೆ), ಇಎಸ್ಐ ಆಸ್ಪತ್ರೆ, ಬೀದರ್ ಕಲಬುರಗಿ ರೈಲು ಮಾರ್ಗ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಅವರಿಗೆ ಅಭಿನಂದನೆ ಸಲ್ಲಿಸುವುದು ಅವಶ್ಯಕವಾಗಿದೆ. ಈ ಕಾರ್ಯಕ್ರಮಕ್ಕೆ ಹುಮನಾಬಾದ ವಿಧಾನಸಭಾ ಕ್ಷೇತ್ರದಿಂದ 5 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ ಮಾತನಾಡಿ, ರಾಷ್ಟ್ರೀಯ ಅಧ್ಯಕ್ಷ ಪಟ್ಟರಾಜ್ಯಕ್ಕೆ 2ನೇ ಬಾರಿ ಒಲಿದು ಬಂದಿದೆ. ಈ ಹಿಂದೆ ಎಸ್. ನಿಜಲಿಂಗಪ್ಪ ಅವರು ಉನ್ನತ ಹುದ್ದೆಯನ್ನು ಅಲಂಕರಿಸಿದ ಬಳಿಕ ಅಭಿವೃದ್ಧಿಯ ಹರಿಕಾರ ಎಂದೇ ಪ್ರಸಿದ್ಧಿ ಹೊಂದಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಲಿದಿದ್ದು, ಈ ಅಭಿನಂದನಾ ಕಾರ್ಯಕ್ರಮ ಹಬ್ಬವಾಗಬೇಕು ಎಂದು ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷರಾದ ಗೀತಾ ಚಿದ್ರಿ ಮಾತನಾಡಿ, ಮಹಿಳಾ ಕೊಟಾದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಅಕಾಂಕ್ಷಿಯಾಗಿದ್ದು ನಾನು ಅರ್ಜಿ ಸಲ್ಲಿಸಿದ್ದೇನೆ. ಒಂದು ವೇಳೆ ಪಕ್ಷ ಟಿಕೆಟ್ ನೀಡಿದರೆ ಈ ಕ್ಷೇತ್ರದಿಂದ ಮೊದಲ ಬಾರಿಗೆ ಮಹಿಳೆಯಾಗಿ ಸ್ಪರ್ಧಿಸಲು ಸಿದ್ಧ ಎಂದು ತಮ್ಮ ಮನದ ಮಾತು ತಿಳಿಸಿದರು.
ಕೆಲಸ ಮಾಡಿ; ಇಲ್ಲಾ ಹುದ್ದೆ ಬಿಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ
ಕಾರ್ಯಕ್ರಮಕ್ಕೂ ಮುನ್ನ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಮಾಜಿ ಸಂಸದ ನರಸಿಂಗರಾವ್ ಸೋರ್ಯವಂಶಿ, ಟಿಎಪಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರಮಿಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಂಬಗಿ, ರೇವಪ್ಪ ಪಾಟೀಲ್, ದತ್ತಕುಮಾರ ಚಿದ್ರಿ, ಸುಮಿತ್ರಾ ಮಡಿವಾಳ, ಪ್ರಭು ತಾಳಮಡಗಿ, ದಿಲೀಪಕುಮಾರ ಬಗದಲಕರ್, ಸುಗಂಧಾ ಅಣ್ಣೆಪ್ಪ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.