
ಬೆಂಗಳೂರು, (ಜುಲೈ.06): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸುಮಲತಾ ಅವರೇ ಫೇಸ್ಬುಕ್ ಮೂಲಕ ಖಚಿತಪಡಿಸಿದ್ದಾರೆ.
ಜುಲೈ 4ರಂದು ಸುಮಲತಾ ಅವರು ಕೋವಿಡ್19 ಪರೀಕ್ಷೆಗೆ ಮಾಡಿಸಿಕೊಂಡಿದ್ದರು. ಅದರ ವರದಿ ಇಂದು (ಸೋಮವಾರ) ಬಂದಿದ್ದು, ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.
ಈ ಹಿನ್ನೆಲೆಯಲ್ಲಿ ಇವರ ಸಂಪರ್ಕದಲ್ಲಿದ್ದ ಸರ್ಕಾರಿ ಅಧಿಕಾರಿಗಳು ಮತ್ತು ಇತರೆ ರಾಜಕೀಯ ನಾಯಕರಿಗೂ ಕೊರೋನಾ ಭೀತಿ ಶುರುವಾಗಿದ್ದು, ಅವರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅವರು ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕದ ಕಾಂಗ್ರೆಸ್-ಬಿಜೆಪಿ ಶಾಸಕರಿಗೂ ತಗುಲಿದ ಕೊರೋನಾ ಸೋಂಕು
ಇನ್ನು ಬಹುಮುಖ್ಯವಾಗಿ ದಿವಂಗತ ಅಂಬರೀಶ್ ಸ್ಮಾರಕ ವಿಚಾರವಾಗಿ ಮತ್ತು ಮಂಡ್ಯ ಜಿಲ್ಲೆಯ ಮೈಶುಗರ್ ಕಾರ್ಖಾನೆ ಬಗ್ಗೆ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಹ ಭೇಟಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇನ್ನು ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದು ಈ ಕೆಳಗಿನಂತಿದೆ ನೋಡಿ.
ಸುಮಲತಾ ಅಂಬರೀಶ್ ಮಾತು
ಆತ್ಮೀಯರೆ,
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.