
ಬೆಂಗಳೂರು (ಜೂ.14): ಕಾಂಗ್ರೆಸ್ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣದ ತಪ್ಪಿನಿಂದ ರಕ್ಷಣೆ ಪಡೆಯಲು ಜಾರಿ ನಿರ್ದೇಶನಾಲಯ (ಇಡಿ) ವಿರುದ್ಧ ಆಂದೋಲನ, ಹೋರಾಟ ಮಾಡುತ್ತಿದೆ. ಈ ಬ್ಲ್ಯಾಕ್ಮೇಲ್ ತಂತ್ರವು ಖಂಡನೀಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮತ್ತು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಸೋಮವಾರ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಈ ವಿಚಾರದಲ್ಲಿ ಅನುಭವ ಉಳ್ಳವರು. ಇ.ಡಿ.ಯಿಂದ ತನಿಖೆಗೊಳಗಾದವರು. ಇ.ಡಿ. ತನಿಖೆಗೆ ಕಾಂಗ್ರೆಸ್ ಸಹಕರಿಸಬೇಕು.
ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ. ನಮ್ಮನ್ನು ಪ್ರಶ್ನಿಸಬೇಡಿ, ವಿಚಾರಣೆಗೆ ಕರೆಯಬೇಡಿ ಎಂದರೆ ಹೇಗೆ? 60 ವರ್ಷ ಆಡಳಿತ ನಡೆಸಿದವರಿಗೆ ಕಾನೂನಿನ ಅರಿವಿಲ್ಲವೇ? ಪ್ರತಿಭಟನೆ ನಡೆಸುವವರು ಮುಂದೆ ತಿಹಾರ್ ಜೈಲು ಸೇರಬೇಕಾಗುತ್ತದೆ. ಇ.ಡಿ. ಸ್ವಾಯತ್ತತೆ ಹೊಂದಿದ ಸಂಸ್ಥೆ. ಅದಕ್ಕೆ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಕ್ಷವಾಗಿರುವುದರಿಂದ ಅವರಲ್ಲಿ ಪ್ರಾಮಾಣಿಕತೆ, ನೈತಿಕತೆ, ರಾಷ್ಟ್ರೀಯತೆ, ದೇಶಪ್ರೇಮ ಇಲ್ಲ. ಸಮನ್ಸ್ ವಿರುದ್ಧ ಬೀದಿಯಲ್ಲಿ ಪ್ರತಿಭಟನೆ ಮಾಡಿ ಯಾವ ಸಂದೇಶ ನೀಡುತ್ತಿದ್ದಾರೆ? ನಾವು ಭ್ರಷ್ಟಾಚಾರ ಮಾಡಿದರೂ ನಮಗೇನೂ ಮಾಡಬಾರದು, ನಾವು ಕಾನೂನಿಗಿಂತ ದೊಡ್ಡವರು ಎಂಬ ಧೋರಣೆ ಸರಿಯೇ?
ಆನ್ ಲೈನ್ ಮೂಲಕವೇ ಪದವಿ ಪ್ರವೇಶ ಪ್ರಕ್ರಿಯೆ, ಸಚಿವ ಡಾ. ಅಶ್ವಥ್ ನಾರಾಯಣ
ಆಂದೋಲನಗಳು ರಾಜಕೀಯ ಪ್ರೇರಣೆಯಿಂದ ಕೂಡಿರಬಾರದು ಎಂದ ಅವರು, ನಾವು ಭ್ರಷ್ಟಾಚಾರದ ವಿರುದ್ಧ ಇದ್ದೇವೆ. ಯಾವುದೇ ಪಕ್ಷದ ಭ್ರಷ್ಟಾಚಾರಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆರಂಭಕ್ಕೆ ಸಂಬಂಧಿಸಿದಂತೆ ಅಸೋಸಿಯೇಟೆಡ್ ಜನರಲ್ಸ್ ಲಿಮಿಟೆಡ್ (ಎಜೆಎಲ್) ಸಂಸ್ಥೆಯನ್ನು ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪಿಸಲಾಗಿತ್ತು. ಐದು ಸಾವಿರಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಇದಕ್ಕೆ ಬಂಡವಾಳ ಹೂಡಿ ಷೇರು ಖರೀದಿಸಿದ್ದರು. 2008ರಲ್ಲಿ ಪತ್ರಿಕೆಯನ್ನು ಮುಚ್ಚಲಾಗಿತ್ತು. 2010ರಲ್ಲಿ ಯಂಗ್ ಇಂಡಿಯನ್ ಸಂಸ್ಥೆಯ ಮೂಲಕ ನ್ಯಾಷನಲ್ ಹೆರಾಲ್ಡ್ ಮತ್ತು ಎಜೆಎಲ್ ಕೊಂಡುಕೊಳ್ಳಲಾಗಿತ್ತು. ಎರಡು ಸಾವಿರ ಕೋಟಿ ರು.ಗಿಂತ ಹೆಚ್ಚು ಮೌಲ್ಯದ ಸಂಸ್ಥೆಯನ್ನು ಕೇವಲ 50 ಲಕ್ಷ ರು.ಗೆ ಯಂಗ್ ಇಂಡಿಯನ್ ಸಂಸ್ಥೆಗೆ ಹಸ್ತಾಂತರ ಮಾಡಲಾಗಿತ್ತು.
ಕರ್ನಾಟಕದಲ್ಲಿ ಮತ್ತೆ ಆಪರೇಷನ್ ಕಮಲ, ಸುಳಿವು ಕೊಟ್ಟ ಸಚಿವ
ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಶೇ.74ರಷ್ಟುಷೇರುಗಳನ್ನು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೊಂದಿದ್ದರೆ, ಉಳಿದ ಶೇ.26ರಷ್ಟುಷೇರುಗಳನ್ನು ಮೋತಿಲಾಲ್ ವೋರಾ, ಸ್ಯಾಮ್ ಪಿತ್ರೋಡಾ ಮತ್ತು ಅಸ್ಕರ್ ಫರ್ನಾಂಡಿಸ್ ಹೊಂದಿದ್ದರು. ಕಂಪನಿಯನ್ನು ಲಪಟಾಯಿಸುವ ಪ್ರಯತ್ನ ನಡೆಯಿತು. ಇದರು ವಿರುದ್ಧ ಸುಬ್ರಹ್ಮಣ್ಯನ್ ಸ್ವಾಮಿ ಕೋರ್ಚ್ಗೆ ಹೋದರು. 2011ರಲ್ಲಿ ಇ.ಡಿ. ತನಿಖೆ ಆರಂಭವಾಯಿತು. ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಆದ್ದರಿಂದ ತನಿಖೆಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಹಸ್ತಕ್ಷೇಪ ಇಲ್ಲ. ಕಾಂಗ್ರೆಸ್ನ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ತೋಟಗಾರಿಕಾ ಸಚಿವ ಮುನಿರತ್ನ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.