
ಬೆಂಗಳೂರು(ಜ.22): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಮ್ಮನೆ ಕ್ಷೇತ್ರದಲ್ಲಿ ಸುತ್ತು ಹಾಕುತ್ತಿದ್ದು, ಸಚಿವರ ಮನೆಗೆ ಓಡಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ಅವರ ಬಗ್ಗೆ ಅಯ್ಯೋ ಪಾಪ ಅನಿಸುತ್ತದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ.
ರಾಮನಗರ, ಚನ್ನಪಟ್ಟಣ ಎರಡು ಕಣ್ಣುಗಳು ಇದ್ದಂತೆ ಎಂಬ ಹೇಳಿಕೆಗೆ ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಿರುಗೇಟು ನೀಡಿದ ಅವರು, ಪಾಪ ಕುಮಾರಸ್ವಾಮಿ ಆಗಾಗ್ಗೆ ಈ ರೀತಿ ಹೇಳುತ್ತಿರುತ್ತಾರೆ. ಮೊದಲು ಬಿಜೆಪಿಯನ್ನು ಪ್ರೀತಿ ಮಾಡುತ್ತಿದ್ದರು. ಈಗ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೇ ಮಾತನಾಡುತ್ತಾರೆ. ಅವರ ಜತೆ ಅಡ್ಜೆಸ್ಟ್ಮೆಂಟ್ ರಾಜಕಾರಣ ಮಾಡಬಾರದು ಎಂದು ನಮ್ಮ ನಾಯಕರಿಗೆ ಹೇಳಿದ್ದೆ. ನಾನು ಮೊದಲಿನಿಂದಲೂ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಕುಮಾರಸ್ವಾಮಿ ಅವರಿಗೆ ಆತಂಕ ಎದುರಾಗಿದ್ದು, ಮುಖ್ಯಮಂತ್ರಿಯಾಗಿದ್ದ ವೇಳೆ ಯಾವುದೇ ಕೆಲಸ ಮಾಡಲಿಲ್ಲ. ಈಗ ಸುಮ್ಮನೆ ಕ್ಷೇತ್ರದಲ್ಲಿ ಸುತ್ತು ಹಾಕುತ್ತಿದ್ದಾರೆ. ಸಚಿವರ ಮನೆಗಳಿಗೆ ಓಡಾಡುತ್ತಿದ್ದಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನೆಗೂ ಹೋಗಿದ್ದರು ಎಂದು ಲೇವಡಿ ಮಾಡಿದರು.
ಪೂರ್ಣಾವಧಿ ಆಡಳಿತಕ್ಕೆ ಒಕ್ಕಲಿಗರಿಗೆ ಶಾಪವಿದೆ : ಇವರದ್ದೆಲ್ಲಾ ಅರ್ಧದ ಅಧಿಕಾರ
ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನಗೆ ಸಮಾನ ಶತ್ರುಗಳು. ನಾನು ಸಚಿವನಾಗಿರುವುದರಿಂದ ಅವರಿಗೆ ಭಯ ಆಗಿದೆ ಎಂದು ಹೇಳಿದರು.
ಖಾತೆ ಬಗ್ಗೆ ಖುಷಿ ಇದೆ
ಮುಖ್ಯಮಂತ್ರಿಗಳು ನೀಡಿರುವ ಖಾತೆ ಬಗ್ಗೆ ಖುಷಿ ಇದೆ. ನಾನು ಮೂಲತಃ ಕೃಷಿಕ ಕುಟುಂಬದಿಂದ ಬಂದವನು. ನೀರಾವರಿ ಇಲಾಖೆ ನನಗೆ ಇಷ್ಟವಾದ ಖಾತೆ. ನನಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ನೀರಾವರಿ ವಿಚಾರದಲ್ಲಿ ನಮ್ಮ ತಾಲೂಕು ಇಡೀ ರಾಜ್ಯಕ್ಕೆ ಮಾದರಿ ಎಂದು ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.