ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ನಿಸ್ಸೀಮರು: ಚಲುವರಾಯಸ್ವಾಮಿ ಕಿಡಿ

Published : Oct 20, 2025, 07:38 AM IST
N Cheluvarayaswamy

ಸಾರಾಂಶ

ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ (ಅ.20): ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದು ರುಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಟುವಾಗಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಆರು ತಿಂಗಳೋ, ವರ್ಷಕ್ಕೋ ಒಮ್ಮೆ ಬರುತ್ತಾರೆ. ಏನೋ ತೊಂದರೆಯಾಗಿದೆ ಎಂದು ತೋರಿಸಿಕೊಳ್ಳುತ್ತಾರೆ. ಮತ ಕೊಟ್ಟ ಕ್ಷೇತ್ರದ ಅಭಿವೃದ್ಧಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಬದ್ಧತೆ, ಇಚ್ಛಾಶಕ್ತಿ ಇಲ್ಲ.

ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದೆ ಎಂಬ ಹಳೇ ರಾಗವನ್ನು ಹಾಡಿ ಪಲಾಯನ ಮಾಡುತ್ತಿದ್ದಾರೆ. ಜನರು ಕೆಲಸ ಮಾಡುವವರನ್ನ್ನು ಬಿಟ್ಟು, ಅಂತಹವರನ್ನೇ ಇಷ್ಟಪಡುತ್ತಾರೆ. ಏನು ಮಾಡೋಕಾಗುತ್ತೆ ಎಂದು ಪ್ರಶ್ನಿಸಿದರು. ಸಂಸದರ ಅನುದಾನ ಎಲ್ಲರಿಗೂ ಬಂದೇ ಬರುತ್ತದೆ. ಅದನ್ನೇ ದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳುವುದು ದೊಡ್ಡಸ್ತಿಕೆಯಲ್ಲ. ವಿಶೇಷ ಅನುದಾನ ತಂದಿದ್ದರೆ ಅದನ್ನು ಸಾಧನೆ ಎನ್ನಬಹುದು. ಯಾವುದಾದರೊಂದು ಕಾರ್ಖಾನೆಯನ್ನೋ, ಕೈಗಾರಿಕೆಯನ್ನೋ ತಂದು ಉದ್ಯೋಗ ಸೃಷ್ಟಿಸಿರುವ ಬಗ್ಗೆ ಎಚ್‌ಡಿಕೆ ಪಟ್ಟಿ ಬಿಡುಗಡೆ ಮಾಡಲಿ. ಕೇಂದ್ರ ಸಚಿವರಾದವರು ಸಿಎಸ್‌ಆರ್ ಫಂಡ್ ತಂದಿದ್ದನ್ನು ಅವರ ಮಟ್ಟಕ್ಕೆ ಬಿಂಬಿಸಿಕೊಳ್ಳುವುದು ಯೋಗ್ಯತೆಯಲ್ಲ ಎಂದು ಕಟುವಾಗಿ ಹೇಳಿದರು.

ಮಂಡ್ಯದಲ್ಲಿ ಹಾದುಹೋಗಿರುವ ಬೆಂಗಳೂರು- ಮೈಸೂರು ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಲು ಕುಮಾರಸ್ವಾಮಿ ಅವರಿಂದ ಸಾಧ್ಯವಾಗುತ್ತಿಲ್ಲ. ಪ್ರಧಾನಿ ಬಳಿ ಕುಳಿತು ರಾಜ್ಯದ ಸಮಸ್ಯೆಗಳನ್ನು ವಿವರಿಸಿ ಬಗೆಹರಿಸಲು ಪ್ರಯತ್ನಿಸಬೇಕು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದಾರೆ.? ರಾಜ್ಯದ ಅಭಿವೃದ್ಧಿ ಬಗ್ಗೆ ಯಾವುದಾದರೂ ಒಂದು ಪತ್ರ ಬರೆದಿದ್ದಾರ? ರಾಜ್ಯದ ಕೈಗಾರಿಕಾ ಸಚಿವರನ್ನು ಭೇಟಿಯಾಗಿದ್ದಾರ? ಎಂದು ಪ್ರಶ್ನೆಗಳ ಸುರಿಮಳೆಗರೆದರು.

ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೆ

ರಾಜ್ಯದಿಂದ ಹಲವಾರು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. 2-3 ಬಾರಿ ಮೋದಿ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಗೊಬ್ಬರ ಕೊರತೆಯಾದಾಗ ನಾನು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೆ, ಅವರು ಕೊಡಿಸಲಿಲ್ಲ. ಸಮಯಕ್ಕೆ ತಕ್ಕಂತೆ ಸುಳ್ಳು ಹೇಳುವುದನ್ನು ಕುಮಾರಸ್ವಾಮಿ ಬಿಡಲಿ ಎಂದು ಹೇಳಿದರು. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳ ಅಮಾನತುಗೊಳಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಆರ್‌ಎಸ್‌ಎಸ್ ಪಥ ಸಂಚಲನ ಆ ಸಂಘಟನೆಯ ವೈಯಕ್ತಿಕ ವಿಚಾರ. ಅದು ಬಿಜೆಪಿ ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ಅದರ ಕಾರ್ಯಚಟುವಟಿಕೆ ನಿಷೇಧ ಕುರಿತು ಸರ್ಕಾರದ ತೀರ್ಮಾನವೇ ಅಂತಿಮ ಎಂದಷ್ಟೇ ಹೇಳಿದರು. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ ಎಂದು ಚುಟುಕಾಗಿ ಉತ್ತರಿಸಿದರು. ಈ ಬಾರಿ ಮಳೆಯಿಂದಾಗಿ ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. 15 ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಗದಿಪಡಿಸಿದ ಪರಿಹಾರಕ್ಕಿಂತ 8500 ರು. ಸಾವಿರ ಹೆಚ್ಚು ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನರೇಗಾ ಸಮರ: ಹೆಚ್‌ಡಿಕೆ ಸವಾಲು ಸ್ವೀಕರಿಸಿದ ಡಿಕೆಶಿ; 'ಇಂದೇ ಡಿಬೇಟ್‌ಗೆ ಬರ್ತೀನಿ' ಎಂದು ಪಂಥಾಹ್ವಾನ!
ರಾಗಾ ವಿರುದ್ಧ ಮಿತ್ರರೇ ಸಿಟ್ಟಾಗಿರುವುದೇಕೆ?