ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ?: ಸಚಿವ ಚಲುವರಾಯಸ್ವಾಮಿ

By Govindaraj SFirst Published Feb 7, 2024, 10:03 AM IST
Highlights

ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಅನುದಾನದಲ್ಲಿ ಅನ್ಯಾಯ ಮಾಡಿರುವ ಕಾರಣವನ್ನು ಮುಂದಿಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.
 

ಮಂಡ್ಯ (ಫೆ.07): ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಅನುದಾನದಲ್ಲಿ ಅನ್ಯಾಯ ಮಾಡಿರುವ ಕಾರಣವನ್ನು ಮುಂದಿಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು. ಮೋದಿ ಎದುರು ನಿಲ್ಲೋಕೇ ರಾಜ್ಯ ಬಿಜೆಪಿಯವರು ಹೆದರುತ್ತಾರೆ. ಇನ್ನು ಪ್ರತಿಭಟನೆಗೆ ಬರುತ್ತಾರೆಯೇ..?, ಒಮ್ಮೆ ಅವರು ಪ್ರತಿಭಟನೆ ಬಂದರೆ ಸಂತೋಷ. ನಮ್ಮ ಜೊತೆ ಬರಲಾಗದಿದ್ದರೆ ಅವರೇ ಹೋಗಿ ಸತ್ಯಾಗ್ರಹ ಮಾಡುತ್ತೇವೆ ಎಂದು ಕುಳಿತರೂ ಸಂತೋಷ. ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಸುಮಲತಾ ಅವರೂ ಬರಲಿ. ಸ್ವಾಭಿಮಾನಿ ಸಂಸದೆ ಆಗಿದ್ದರೆ ನಮಗಿಂತ ಮೊದಲೇ ಪ್ರತಿಭಟನೆಯಲ್ಲಿ ಇರಬೇಕು ಎಂದು ಸುದಿಗಾರರೊಂದಿಗೆ ಮಾತನಾಡುತ್ತಾ ಛೇಡಿಸಿದರು.

ನಮ್ಮ ಪ್ರತಿಭಟನೆ ವಿರೋಧ ಮಾಡುವುದಕ್ಕೆ ಬಿಜೆಪಿಯವರಿಗೆ ಏನು ಹಕ್ಕಿದೆ. ನಮ್ಮ ಹಕ್ಕನ್ನು ಅವರನ್ನು ಕೇಳಿಕೊಂಡು ಪಡೆಯಬೇಕಾ. ಅವರೇನು ನಮ್ಮ ಯಜಮಾನರಾ. ನಮ್ಮ ಯಜಮಾನರು ರಾಜ್ಯದ ಜನರು. ಜನರು ಹೇಳಿದ್ದನ್ನು ನಾವು ಕೇಳಬೇಕು, ಬಿಜೆಪಿ, ಜೆಡಿಎಸ್ ಹೇಳಿದ್ದನ್ನಲ್ಲ. ನಮಗೆ ಬರಪರಿಹಾರ ನೀಡದೇ ವಿಳಂಬ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಆರ್ಥಿಕ ಸಹಕಾರವನ್ನೂ ನೀಡುತ್ತಿಲ್ಲ. ಈ ಕಾರಣಕ್ಕೆ ನಾವು ಹೋರಾಟ ಮಾಡುತ್ತಿದ್ದೇವೆ. ನಾಚಿಕೆ ಇದ್ದರೆ ಬಿಜೆಪಿ ನಾಯಕರು ರಾಜಕೀಯ ಹೊರತುಪಡಿಸಿ ಮಾತನಾಡಲಿ ಎಂದು ಆಕ್ರೋಶದಿಂದ ನುಡಿದರು.

ಗೋಹತ್ಯೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ಶಾಸಕ ಪ್ರಭು ಚವ್ಹಾಣ್‌

ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ರೈತರು ಒಂದೇ ಬೆಳೆಗೆ ಸೀಮಿತವಾಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ತುಮಕೂರು ಹಾಗೂ ಶಿರಾ ತಾಲೂಕು ಕೃಷಿ ಇಲಾಖೆ ವತಿಯಿಂದ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮಶ್ವರಸ್ವಾಮಿ ಮಠದ ಆವರಣದಲ್ಲಿ ನಡೆದ 21 ನೇ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಸಮಗ್ರ ಕೃಷಿ ಪದ್ಧತಿಗಳ ಹಾಗೂ ಶೂನ್ಯ ಬಂಡವಾಳ ಕೃಷಿ ವಿಚಾರಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೂ ಕಳೆದರೂ ರೈತರ ಸಮಸ್ಯೆಗಳಿಗೆ ಪರಿಪೂರ್ಣವಾಗಿ ಪರಿಹಾರ ಸಿಕ್ಕಿಲ್ಲ, ಅತ್ಯಂತ ಕಷ್ಟಕರ ಕಸುಬು ಎಂದರೆ ಅದು ಕೃಷಿ, ಈ ಬಾರಿ ಹಾಕಿದ ಶೇ.90 ರಷ್ಟು ಬೆಳೆ ನಷ್ಟವಾಗಿದೆ. ಇದರಿಂದಾಗಿ ರೈತರು ಇನ್ನಷ್ಟೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರಾಜ್ಯದ 273 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರದಿಂದ ಬೆಳೆ ಪರಿಹಾರ ಹಣ ಇನ್ನೂ ಕೂಡ ಬಂದಿಲ್ಲ, ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ೪ ಲಕ್ಷ ಕೋಟಿ ರು. ತೆರಿಗೆ ಕಟ್ಟುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ 50 ಸಾವಿರ ಕೋಟಿ ಮಾತ್ರ ಅನುದಾನ ನೀಡುತ್ತಿದೆ. 

ಕಳೆದ 5 ವರ್ಷದಿಂದ 1 ಲಕ್ಷ 28 ಸಾವಿರ ಕೋಟಿ ಬಾಕಿ ಹಣ ಬರಬೇಕಿದೆ. ಕೊಬ್ಬರಿ ಖರೀದಿ ಕೇಂದ್ರಗಳನ್ನು 12 ತಿಂಗಳು ಕೂಡ ತೆಗೆಯುವಂತೆ ಮನವಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತು ಮಹಿಳೆಯರಿಗೆ ೫ ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಗಾಗಿ 70 ಸಾವಿರ ಕೋಟಿ ಖರ್ಚು ಮಾಡಲಾಗಿದೆ, ಈ ಯೋಜನೆಗಳಿಂದ ಅನೇಕ ಬಡ ಕುಟುಂಬಗಳು ಸ್ವಾವಲಂಬನೆಯಿಂದ ಜೀವನ ಸಾಗಿಸುತ್ತಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಸಚಿವ ಈಶ್ವರ ಖಂಡ್ರೆ

ಶಾಸಕ ಎಸ್.ಆರ್‌. ಶ್ರೀನಿವಾಸ್ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ರೈತರು ಭಾಗವಹಿಸಬೇಕು, ಶೂನ್ಯ ಬಂಡವಾಳದಿಂದ ಹೇಗೆ ಕೃಷಿ ಮಾಡಬೇಕು ಎಂಬುದನ್ನು ತಿಳಿದುಕೊಂಡು ತಮ್ಮ ಕೃಷಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡದೆ ಕಡೆಗಣಿಸಲಾಗಿದೆ. ಕೈಗಾರಿಕೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಶೇ.೪೦ರಷ್ಟು ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗಾಗಿ ಬಳಸಲಾಗುತ್ತಿದೆ. ಕೃಷಿ ಮತ್ತು ಕೈಗಾರಿಕೆಗಳು ಸಮಾನಾಂತರದಲ್ಲಿ ಬೆಳೆದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

click me!