
ಮಂಡ್ಯ (ಅ.29): ತಾವು ಮುಖ್ಯಮಂತ್ರಿಯಾಗಿದ್ದ 14 ತಿಂಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆಸಿಲ್ಲವೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಣೆ-ಪ್ರಮಾಣ ಮಾಡುವುದಾದರೆ ನಾವು ಎಲ್ಲಿಗೆ ಬರುವುದಕ್ಕೂ ಸಿದ್ಧರಿದ್ದೇವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸವಾಲು ಹಾಕಿದರು. ಉತ್ತಮ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಷ್ಟಾಚಾರದ ಆರೋಪ ಹೊರಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಜೊತೆಗೆ ಆಣೆ-ಪ್ರಮಾಣಕ್ಕೂ ಕರೆಯುತ್ತಿದ್ದಾರೆ.
ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವರ್ಗಾವಣೆ ಸೇರಿದಂತೆ ಆಡಳಿತದಲ್ಲಿ ಭ್ರಷ್ಟಾಚಾರ ನಡೆಸಿಲ್ಲವೆಂದು ಮೊದಲು ಅವರು ದೇವರ ಎದುರು ಆಣೆ ಪ್ರಮಾಣ ಮಾಡಲಿ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಕುಮಾರಸ್ವಾಮಿ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ ಕೆದಕಲು ಹೋದರೆ ಹಳೆಯದೆಲ್ಲಾ ಬೇಡ ಎನ್ನುತ್ತಾರೆ. ಆಯ್ತು, ೨೦೦೬ರಲ್ಲಿ ಮುಖ್ಯಮಂತ್ರಿಯಾಗಿದ್ದರಿಂದ ಬಿಟ್ಟುಬಿಡೋಣ. ೨೦೧೮ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ 14 ತಿಂಗಳ ಆಡಳಿತ ಅವಧಿಯ ಬಗ್ಗೆ ಪ್ರಮಾಣ ಮಾಡಲಿ ಸಾಕು ಎಂದು ತಿರುಗೇಟು ನೀಡಿದರು.
ಡಿಕೆಶಿ ಸಿಎಂ ಆಗುವುದರಲ್ಲಿ ಯಾವ ಅನುಮಾನವಿಲ್ಲ: ಶಾಸಕ ಉದಯ್
ಹೈಕಮಾಂಡ್ ತೀರ್ಮಾನ: ಅಧಿಕಾರ ಹಂಚಿಕೆ ವಿಚಾರ ನಮ್ಮ ಕೈಯ್ಯಲ್ಲಿಲ್ಲ. ಅದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ನಮ್ಮಲ್ಲಿ 50 ಮಂದಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಇದೆಲ್ಲವನ್ನೂ ಕಾಂಗ್ರೆಸ್ ವರಿಷ್ಠರು ನಿರ್ಧಾರ ಮಾಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲದಿದ್ದರೂ ಜನರನ್ನು ದಿಕ್ಕುತಪ್ಪಿಸಲು ವಿಪಕ್ಷದವರು ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿ ನಿವಾರಣೆಗೆ ಅನುದಾನ ಕೋರಿದ್ದೇವೆ, ಎರಡು ಮೂರು ದಿನ ಕಾಯೋಣ, ಕೇಂದ್ರ ಸ್ಪಂದಿಸಲಿದೆ ಎಂಬ ನಂಬಿಕೆ ಇದೆ. ಈ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.
ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ: ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಹೊಂದಿದೆ. ನಮಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ. ಸರ್ಕಾರ ಸುಭದ್ರ ಸ್ಥಿತಿಯಲ್ಲಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮತದಾರರ ಒಲವಿರುವುದರಿಂದ ಅದನ್ನು ಬೇರೆಡೆಗೆ ತಿರುಗಿಸಲು ವಿಪಕ್ಷದವರು ಆಪರೇಷನ್ ಕಮಲದ ಗುಮ್ಮ ಬಿಡುತ್ತಿದ್ದಾರೆ ಎಂದು ದೂರಿದರು. ನಾಯಕರ ಹಂತದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಬಗ್ಗೆ ಆ ಪಕ್ಷಗಳ ಸ್ಥಳೀಯ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ಅಸಮಾಧಾನವಿದೆ. ಇನ್ನೂ ಹೊಂದಾಣಿಕೆ ಪ್ರಕ್ರಿಯೆ ಪೂರ್ಣವಾಗಿ ಆಗಿಲ್ಲ, ಗೊಂದಲದ ಪರಿಸ್ಥಿತಿ ಎರಡೂ ಪಕ್ಷಗಳಲ್ಲಿದೆ.
ಸಿಎಂ ಬದಲಾವಣೆ ಖರ್ಗೆ, ಸೋನಿಯಾ ಗಾಂಧಿಗಷ್ಟೇ ಗೊತ್ತು: ಬಿ.ಕೆ.ಹರಿಪ್ರಸಾದ್
ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳಿಗೆ ರಾಜಕೀಯ ಚರ್ಚೆ ಬೇಕಾಗಿದೆ, ರಾಜ್ಯ ಸರ್ಕಾರ ನಾಲ್ಕೂವರೆ ತಿಂಗಳಲ್ಲಿ ಅಭಿವೃದ್ಧಿ ಕೆಲಸದ ಜೊತೆಗೆ ಅನುದಾನವನ್ನು ಬಿಡುಗಡೆ ಮಾಡಿದೆ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ. ಕಾವೇರಿ ಸಮಸ್ಯೆಯನ್ನು ಸೂಕ್ಷ್ಮವಾಗಿ ಎದುರಿಸಿದೆ. ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಇದನ್ನು ಸಹಿಸಲು ಪ್ರತಿಪಕ್ಷಗಳಿಗೆ ಆಗುತ್ತಿಲ್ಲ ಹಾಗಾಗಿ ಇಲ್ಲಸಲ್ಲದ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.