
ಮಡಿಕೇರಿ (ಜ.03): ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುತ್ತಿರುವುದಕ್ಕೂ, ಗಲಭೆ ಸಂಬಂಧ ಹಳೆಯ ಪ್ರಕರಣಗಳ ಕುರಿತು ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ, ಈ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಬಿಜೆಪಿ ಜನರದ ಹಾದಿ ತಪ್ಪಿಸುವ ಮೂಲಕ ಧರ್ಮದ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಆರೋಪಿಸಿದ್ದಾರೆ.
ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಹಳೆ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎದುರು ನಿಂತು ಕರ್ನಾಟಕ ರಾಜ್ಯಕ್ಕೆ ಏನು ಬೇಕು ಎಂದು ಕೇಳಲಾಗದ ಬಿಜೆಪಿ ಮಂದಿ, ಜನರ ಹಾದಿ ತಪ್ಪಿಸುವುದಕ್ಕಾಗಿ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡಿಲ್ಲ, ವಿಪಕ್ಷದಲ್ಲಿದ್ದ ವಾಜಪೇಯಿ, ಆಡ್ವಾಣಿ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದೆ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್ ಶಾ ಅವರು ಸಿಬಿಐ, ಇಡಿ, ಚುನಾವಣಾಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇವರ ಎದುರು ನಿಲ್ಲಲು ಧೈರ್ಯವಿಲ್ಲದ ಸಂಸದರು ಇಲ್ಲಸಲ್ಲದ ವಿಚಾರಣೆಗಳನ್ನು ಎಳೆದು ತಂದು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ರಾಮ ಎನ್ನೋರಿಗೆ ಕೇಂದ್ರ ನಾಯಕರು ಆಹ್ವಾನ ಕೊಟ್ಟಿಲ್ಲ: ಕೆ.ಎಸ್.ಈಶ್ವರಪ್ಪ
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಜಿಎಸ್ಟಿ ಪಾಲಿನ ಹಣ ನೀಡಿಲ್ಲ, ಉದ್ಯೋಗ ಖಾತ್ರಿಯ ಕಾರ್ಮಿಕರ ಹಣವನ್ನು ಬಿಡುಗಡೆ ಮಾಡಿಲ್ಲ, ಬರ ಪರಿಹಾರವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ 25 ಮಂದಿ ಬಿಜೆಪಿ ಸಂಸದರಿದ್ದರೂ ಇದನ್ನು ಕೇಳುವ ಧೈರ್ಯ ಅವರಿಗಿಲ್ಲ. ಮುಖ್ಯಮಂತ್ರಿಗಳು ಹಾಗೂ ಸಚಿವರು ಕೇಂದ್ರ ಸರ್ಕಾರದ ಬಳಿ ತೆರಳಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರೂ ಇಲ್ಲಿಯವರೆಗೆ ಹಣ ನೀಡಿಲ್ಲವೆಂದು ಎಂದು ಭೋಸರಾಜು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.