
ಬೆಳಗಾವಿ (ಆ.30): ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ. ಆದರೆ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಈ ವಿಚಾರದ ಬಗ್ಗೆ ಮತ್ತಷ್ಟು ಚರ್ಚೆ ನಡೆಸುವುದು ಅನಾವಶ್ಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗೇಂದ್ರ ಅವರ ಸ್ಥಾನವನ್ನು ಅವರ ಸಮಾಜದವರಿಗೇ ನೀಡಲಾಗುವುದು. ಆದರೆ, ಯಾವಾಗ ನೀಡಬೇಕು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ನಾಗೇಂದ್ರ ಅವರು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ವಿಚಾರ ಈಗ ಮುಕ್ತಾಯಗೊಂಡಿದೆ. ರಾಜ್ಯದಲ್ಲಿನ ನಮ್ಮ ಸರ್ಕಾರ ಸುಭದ್ರವಾಗಿದ್ದು, ಮುಂದೆಯೂ ಸುಭದ್ರವಾಗಿರಲಿದೆ ಎಂದರು.
ಉಪಮುಖ್ಯಮಂತ್ರಿ ಸ್ಥಾನದ ವಿಚಾರ ಸದ್ಯ ಪಕ್ಷದಲ್ಲಿ ಎಲ್ಲಿಯೂ ಚರ್ಚೆಯಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನಸು ಮಾಡಿದರೆ ತಾವು ಡಿಸಿಎಂ ಆಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಒಬ್ಬರೇ ಡಿಸಿಎಂ ಇದ್ದರು. ಈಗಲೂ ಒಬ್ಬರೇ ಡಿಸಿಎಂ ಇದ್ದಾರೆ. ಡಿಸಿಎಂ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿಗಳೇ. ಸಮಯ ಬಂದಾಗ ಎಲ್ಲವೂ ನಿರ್ಧಾರವಾಗಲಿದೆ. ಇನ್ನೂ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದೇವೆ. ನಾಲ್ಕೈದು ಮಂದಿಯನ್ನು ಡಿಸಿಎಂ ಮಾಡಿದರೆ ಆ ಹುದ್ದೆಯ ಮಹತ್ವವೇ ಇರುವುದಿಲ್ಲ ಎಂದು ಹೇಳಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮಾಜಿ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ರಮೇಶ ಅವರು ಆರು ತಿಂಗಳಿಗೊಮ್ಮೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಾರೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.