
ದಾವಣಗೆರೆ (ಅ.24): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುತ್ತಾರೆಂದು ಯಾರಿಗಾದರೂ ಗೊತ್ತಿತ್ತಾ? ಅದಕ್ಕಿಂತಲೂ ಮುಂದೆ ಜಗದೀಶ ಶೆಟ್ಟರ್ ಸಹ ಅದೇ ರೀತಿ ಮುಖ್ಯಮಂತ್ರಿಯಾದರು. ನಮ್ಮ ಪಕ್ಷದಲ್ಲೂ ಬಹಳಷ್ಟು ಜನರು ಮುಖ್ಯಮಂತ್ರಿ ಆಗಿದ್ದಾರೆ. ಯಾರ ಹಣೆಬರಹದಲ್ಲಿ ಏನಿದೆಯೋ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನೀವೂ ಆಕಾಂಕ್ಷಿಯೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಯಾರ ಹಣೆ ಬರಹದಲ್ಲಿ ಏನಿದೆಯೋ ಅದನ್ನು ತಪ್ಪಿಸುವುದಕ್ಕೆ ಸಾಧ್ಯವಿಲ್ಲ.
ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಾವೇನೂ ತಲೆಕೆಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೋಡಿ ಮಠದ ಸ್ವಾಮೀಜಿ ನಮ್ಮ ಮನೆಗೆ ಭೇಟಿ ನೀಡಿದ್ದು ನಿಜ. ತಮ್ಮ ತಂದೆ ಶಾಮನೂರು ಶಿವಶಂಕರಪ್ಪ ಅವರ ಭೇಟಿ ಮಾಡಲೆಂದು ಬಂದಿದ್ದರು. ತಂದೆಯವರ ಆರೋಗ್ಯ ವಿಚಾರಿಸಿದ ಸ್ವಾಮೀಜಿ ಸ್ವಲ್ಪ ಹೊತ್ತು ಇದ್ದು, ಹೋದರು. ಇದನ್ನು ಹೊರತುಪಡಿಸಿದರೆ ಬೇರಾವುದೇ ವಿಚಾರವನ್ನೂ ಕೋಡಿ ಮಠದ ಸ್ವಾಮೀಜಿ ಬಳಿ ಚರ್ಚೆ ನಡೆಸಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ, ಅರ್ಹ, ಸಮರ್ಥವಾಗಿ ಇದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಯಾಕಾಗಬಾರದು ಎಂದಿದ್ದಾರೆ. ಜಾರಕಿಹೊಳಿ ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರಷ್ಟೇ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ ಎಂದು ಎಂಎಲ್ಸಿ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿಯೂ ಇಲ್ಲ. ನಮ್ಮದು ಎಲ್ಲ ಹೈಕಮಾಂಡ್ ನಿರ್ಧರಿಸುವ ಪಕ್ಷವಾಗಿದೆ. ನಮ್ಮ ದೆಹಲಿಯ ನಾಯಕರು ಇದನ್ನೆಲ್ಲಾ ನಿರ್ಧಾರ ಮಾಡುತ್ತಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಬಿಹಾರ ಚುನಾವಣೆಗೆ ಹಣವನ್ನು ಹೊಂದಿಸಲು ಡಿನ್ನರ್ ಪಾರ್ಟಿ ಅಂದಿದ್ದಾರೆ. ಅದೆಲ್ಲಾ ಆರ್. ಅಶೋಕ್ರ ಪಕ್ಷದಲ್ಲಿದೆ. ನಮ್ಮ ಪಕ್ಷದಲ್ಲಲ್ಲ ಎಂದು ಎಸ್.ಎಸ್. ಮಲ್ಲಿಕಾರ್ಜುನ ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.