
ಬಾಗಲಕೋಟೆ (ಆ.05): ಪರಿಶಿಷ್ಟ ಜಾತಿ ಸಮುದಾಯಗಳ ಒಳಮೀಸಲಾತಿಯನ್ನ ರಾಜ್ಯ ಸರ್ಕಾರ ಜಾರಿಗೊಳಿಸದಿದ್ದರೆ ಕಾವೇರಿಯಿಂದ-ಭೀಮಾ ನದಿಯವರೆಗೆ ಜನಾಂದೋಲನ ಹಮ್ಮಿಕೊಳ್ಳಲಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯನವರಿಗೆ ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಎಚ್ಚರಿಕೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಠ ಜಾತಿ ಸಮುದಾಯಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು,ರಾಜ್ಯ ಸರ್ಕಾರಕ್ಕೆ ಎಚ್ವರಿಕೆ ನೀಡಿದ್ದಾರೆ.
ಪರಿಶಿಷ್ಠ ಜಾತಿಸಮುದಾಯಗಳ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತಂದು ಅನುಷ್ಠಾನಗೊಳಿಸಬೇಕು. ಇಲ್ಲವಾದಲ್ಲಿ ಕಾವೇರಿಯಿಂದ ಭೀಮಾನದಿಯವರೆಗೆ ಜನಾಂದೋಲನ ನಡೆಯುತ್ತದೆ ಎಂದು ಹೇಳಿದ್ದಾರೆ. ಇನ್ನು ಪರಿಶಿಷ್ಠ ಜಾತಿ ಸಮುದಾಯಗಳ ಒಳಮೀಸಲಾತಿಗಾಗಿ ಶ್ರಮಿಸಿದ ಹಿನ್ನೆಲೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನ ಪರಿಶಿಷ್ಠ ಜಾತಿ ಸಮುದಾಯಗಳ ವತಿಯಿಂದ ಸನ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ,ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ-ಜೆಡಿಎಸ್ನವರಿಂದ ದ್ವೇಷದ ರಾಜಕಾರಣ: ಸಚಿವ ಕೃಷ್ಣ ಬೈರೇಗೌಡ
ಒಳಮೀಸಲಾತಿ ಬಗ್ಗೆ ತಕ್ಷಣ ಕ್ರಮ ಕೈಗೊಂಡರೆ ನ್ಯಾಯ: ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡರೆ ಆ ಸಮುದಾಯಗಳಿಗೆ ನ್ಯಾಯ ನೀಡಿದಂತಾಗುತ್ತದೆ. ಮತ್ತೆ ಸಂವಿಧಾನದ 341ನೇ ಕಲಂ ತಿದ್ದುಪಡಿ ನೆಪ ಹೇಳಿದರೆ ಮೂಗಿಗೆ ತುಪ್ಪ ಸವರಿದಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುಪ್ರೀಂಕೋರ್ಟ್ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ಕುರಿತು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಮತ್ತು ಮಾದಾರ ಚನ್ನಯ್ಯ ಗುರು ಪೀಠದ ಪೀಠಾಧ್ಯಕ್ಷ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವದಲ್ಲಿ ಪರಿಶಿಷ್ಟ ಸಮುದಾಯದ ಮುಖಂಡರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಹೋರಾಟ ಮಾಡಲು ಸಿದ್ದ: ಸಿಎಂ ಸಿದ್ದರಾಮಯ್ಯ
ನಾವು ಹಲವಾರು ಕ್ರಾಂತಿಕಾರಿಯಾದ ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ. ನಾವು ಸಂವಿಧಾನ ಬದ್ದವಾಗಿಯೇ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿಯೇ ನಾವು ವಿಧಾನಸಭೆಯಲ್ಲಿಯೇ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಸ್ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ಹಾಗೂ ಎಸ್ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅದು ಕೂಡ ಬರುವ ದಿನಗಳಲ್ಲಿ ಸಂಸತ್ತಿನಲ್ಲಿಯೂ ಚರ್ಚೆಯಾಗಿ ಇತ್ಯರ್ಥಕ್ಕೆ ಬರುವ ಸಂದರ್ಭ ಇದೆ ಎಂದರು. ಈ ಸಮುದಾಯಗಳಲ್ಲಿಯೂ ಪ್ರತಿಭೆ ಇದೆ. ಅವರಿಗೆ ಅವಕಾಶ ಕೊಡಬೇಕಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವರಿಗೆ ಹೆಚ್ಚಿನ ಅವಕಾಶ ಸಿಕ್ಕರೆ ಸಂಪೂರ್ಣ ಭಾರತದ ಅಭಿವೃದ್ಧಿಯಾಗುತ್ತದೆ. ಈ ಸಮುದಾಯಗಳು ಅಭಿವೃದ್ಧಿ ಹೊಂದಿ ಸ್ವಾವಲಂಬನೆಯ ಸ್ವಾಭಿಮಾನದ ಬದುಕು ನಡೆಸಿದಾಗ ಸಂಪೂರ್ಣ ಭಾರತದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.