
ಬೆಂಗಳೂರು (ಅ.04): ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಹಲವಾರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಬಲವಾಗಿ ನಿಲ್ಲಲು ತೀರ್ಮಾನಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಗುರುವಾರ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಸಚಿವರು, ವಿಧಾನಸಭೆ ಹಾಗೂ ಪರಿಷತ್ತಿನ ಸದಸ್ಯರು ಸಭೆ ಸೇರಿ ಈ ತೀರ್ಮಾನ ಕೈಗೊಂಡರು ಎಂದು ಮೂಲಗಳು ಹೇಳಿವೆ. ಇದೇ ವೇಳೆ, ಹಿಂದುಳಿದ ವರ್ಗಗಳ ಪ್ರಬಲ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಪಕ್ಷಗಳು ರಾಜಕೀಯವಾಗಿ ಷಡ್ಯಂತ್ರ ನಡೆಸಿವೆ.
ನಿರಂತರವಾಗಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಆದರೆ, ಯಾವುದೇ ಕಾರಣಕ್ಕೂ ಈ ಷಡ್ಯಂತ್ರಕ್ಕೆ ಮುಖ್ಯ ಮಂತ್ರಿ ಅವರು ಬಲಿಯಾಗಬಾರದು. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗದ ಎಲ್ಲ ಶಾಸಕರೂ ಗಟ್ಟಿಯಾಗಿ ಅವರ ಬೆನ್ನಿಗೆ ನಿಲ್ಲಬೇಕು ಎಂದು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ. ಸಭೆಯಲ್ಲಿ ಸಚಿವರಾದ ಬೈರತಿ ಸುರೇಶ್, ಸಂತೋಷ್ ಲಾಡ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಪಕ್ಷದ ಹಿಂದುಳಿದ ವರ್ಗಕ್ಕೆ ಸೇರಿದ ಶಾಸಕರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.
ಇನ್ನೊಂದು ವರ್ಷದವರೆಗೂ ಚಾಮುಂಡೇಶ್ವರಿ ಆಶೀರ್ವಾದ ಇರಲಿ: ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ!
ಕಾಂಗ್ರೆಸ್ ಸರ್ಕಾರ ಉರುಳಿಸುವುದು ಅಸಾಧ್ಯ: ರಾಜ್ಯದಲ್ಲಿ 136 ಶಾಸಕರ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿರುವ ಸಿದ್ದರಾಮಯ್ಯ ಸರ್ಕಾರವನ್ನು ಕುತಂತ್ರದಿಂದ ಉರುಳಿಸಲು ಸಾಧ್ಯವಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ತಾಲೂಕಿನ ತವಟಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾಲ್ಕೈದು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಸ್ವಚ್ಛಂದವಾಗಿ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಮೇಲೆ ಮಾಡದ ತಪ್ಪಿನ ಮುಡಾ ನಿವೇಶನ ಹೆಸರಿನಲ್ಲಿ ಸಿದ್ದರಾಮಯ್ಯ ಶಕ್ತಿಯನ್ನು ಕುಂದಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದೆ.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಐ.ಟಿ, ಇ.ಡಿ ಜೊತೆಗೆ ರಾಜ್ಯಪಾಲರ ಕಚೇರಿಯನ್ನೆ ದುರ್ಬಳಕೆ ಮಾಡಿಕೊಂಡು ಸರ್ಕಾರ ಉರುಳಿಸುವ ಯತ್ನ ನಡೆದಿದೆ. ಆದರೆ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಕುತಂತ್ರ ಎಂದಿಗೂ ಫಲ ಕೊಡಲ್ಲ. ಅಂತಿಮವಾಗಿ ಡಿಸೆಂಬರ್ ತಿಂಗಳಿನಲ್ಲಿ ಮುಡಾ ಪ್ರಕರಣದ ತನಿಖೆ ನಂತರ ಎಸ್ಐಟಿ ವರದಿ ಬರಲಿದ್ದು ಸಿದ್ದರಾಮಯ್ಯ ಅವರ ಮೇಲಿನ ಕುತಂತ್ರಕ್ಕೆ ತಕ್ಕ ಉತ್ತರ ಸಿಗಲಿದೆ. ಎಂದರು.
ಸರ್ಕಾರ ಬೀಳಿಸೋ ದುರಾಲೋಚನೆ ಬರದಿರಲಿ: ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ
ಕಾಂಗ್ರೆಸ್ ಸರ್ಕಾರ 5 ವರ್ಷ ಪೂರೈಸಲಿದೆ: ಸಿದ್ದರಾಮಯ್ಯ ಸರ್ಕಾರ ಬಡವರ ಅಭಿವೃದ್ಧಿ ದೃಷ್ಟಿಯಿಂದ ಐದು ಗ್ಯಾರಂಟಿಗಳನ್ನ ಅನುಷ್ಠಾನ ಮಾಡಿ ಬಡವರ ಪಾಲಿನ ಸರ್ಕಾರ ಎನಿಸಿಕೊಂಡಿದೆ. ಆದರೆ ಬಿಜೆಪಿಯವರು ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವ ಹಗಲು ಗನಸು ಹಾಗೆಯೇ ಉಳಿಯಲಿದ್ದು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಐದು ವರ್ಷ ಯಶಸ್ವಿಯಾಗಿ ಪೂರೈಸಲಿದೆ. ಹಾಗೆಯೇ ಗ್ಯಾರಂಟಿ ಯೋಜನೆಗಳು ಸಹ ಐದು ವರ್ಷ ಬಡವರಿಗೆ ದಕ್ಕಲಿವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.