
ಹೊಸಕೋಟೆ (ಆ.18): ಮುಡಾ ಹಗರಣದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಮೂಲಕ ರಾಜ್ಯಪಾಲರು ಬಿಜೆಪಿಯವರ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ರಾಜ್ಯಪಾಲರ ನಡೆಗೆೆ ಆಕ್ರೋಶವನ್ನು ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಅಧಿಕಾರ ಲಾಲಸೆಯಿಂದ ಪ್ರಜಾಪ್ರಭುತ್ವದಲ್ಲಿರುವ ತನಿಖಾ ಸಂಸ್ಥೆಗಳಾದ ಸಿಬಿಐ, ಐಟಿ, ಇಡಿಯನ್ನು ದುರ್ಬಳಕೆ ಮಾಡಿಕೊಂಡಿದ್ದನ್ನು ನೋಡಿದ್ದೇವೆ. ಆದರೆ ರಾಜ್ಯಪಾಲರ ಪೀಠವನ್ನು ಅಧಿಕಾರದ ಹಿತಾಸಕ್ತಿಗೆ ಬಳಕೆ ಮಾಡಿಕೊಳ್ಳುವುದಿಲ್ಲ ಎಂದು ನಂಬಿದ್ದೆವು.
ಆದರೆ ಈಗ ರಾಜ್ಯಪಾಲರು ಬಿಜೆಪಿ ಕಾರ್ಯಕರ್ತರಂತೆ ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಯಾವುದೇ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಲು ಅವರ ವಿರುದ್ಧ ತನಿಖೆ ನಡೆದು ಯಾವುದಾದರೂ ನ್ಯಾಯಾಲಯದಲ್ಲಿ ಅವರ ವಿರುದ್ಧ ತೀರ್ಪು ಬಂದಿರಬೇಕು. ಆದರೆ ಮುಡಾ ವಿಚಾರದಲ್ಲಿ ಯಾವುದೇ ಹಗರಣ ನಡೆದಿಲ್ಲ. ಇದರ ವಿಚಾರವಾಗಿ ಸಮಿತಿಯ ತನಿಖೆ ನಡೆಯುತ್ತಿದೆ. ಇದರ ನಡುವೆ ಕಳಂಕ ರಹಿತ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿ ಅವರ ಶಕ್ತಿ ಕುಂದಿಯುವ ಯತ್ನ ನಡೆದಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ 136 ಶಾಸಕರನ್ನ ಹೊಂದಿ ಸ್ಥಿರವಾಗಿರುವ ಸರ್ಕಾರ ರಾಜ್ಯದಲ್ಲಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಸಲು ಸಂಚು: ಸಚಿವ ಪ್ರಿಯಾಂಕ್ ಖರ್ಗೆ
ಬಡವರ ಮಧ್ಯಮ ವರ್ಗದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ದೃಷ್ಟಿಯಿಂದ ಜನಪರ ಯೋಜನೆಗಳನ್ನ ರೂಪಿಸಿ ಜನರಿಗೆ ಕೊಟ್ಟಿದ್ದೇವೆ. ಆದರೆ ಪ್ರಜೆಗಳಿಂದ ಆಯ್ಕೆಯಾಗಿ ಅಧಿಕಾರ ಪಡೆದುಕೊಂಡಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ದೃಷ್ಟಿಯಿಂದ ಹಾಗೂ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ದೃಷ್ಟಿಯಿಂದ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಿಸಿದ್ದಾರೆ. ಆದರೆ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗಲಿದೆ. ದುರುದ್ದೇಶದಿಂದ ನೀಡಿರುವ ಪ್ರಾಸಿಕ್ಯೂಷನ್ಗೆ ಅನುಮತಿಗೆ ನ್ಯಾಯಾಲಯದಲ್ಲಿ ರದ್ದುಪಡಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.