
ಹುಬ್ಬಳ್ಳಿ (ನ.17): ನನ್ನ ಪಕ್ಷಾಂತರದ ಪ್ರಭಾವ ಈಗ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಬಿಜೆಪಿ ಟಿಕೆಟ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಿರಿಯರ ನಿರ್ಲಕ್ಷಿಸಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೀಗಾಗಿ ಪಂಚರಾಜ್ಯಗಳ ಚುನಾವಣೆಯಲ್ಲಿ ಈಗ ಹಿರಿಯರಿಗೆ ಮಣೆ ಹಾಕಲಾಗಿದೆ. ಎಲ್ಲ ರಾಜ್ಯಗಳಲ್ಲೂ ನಿಯಮ ಒಂದೇ ಅನ್ವಯ ಆಗಬೇಕಲ್ಲವೆ? ಎಂದವರು ಪ್ರಶ್ನಿಸಿದರು.
ಹಿರಿಯರ ನಿರ್ಲಕ್ಷ್ಯ: ಈಚೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ದೆಹಲಿಗೆ ಕರೆಸಿ 3 ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯ ವರಿಷ್ಠರು ತೋರಲಿಲ್ಲ ವೇಕೆ? ಇನ್ನು, ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, 3-4 ಮಾಜಿ ಮುಖ್ಯಮಂತ್ರಿಗಳೂ ಸೇರಿ, ಈಗ 80 ವರ್ಷ ಆದವರಿಗೂ ಟಿಕೆಟ್ ನೀಡಿದ್ದಾರೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದವರು ಪ್ರತಿಪಾದಿಸಿದರು.
ಯಾರೂ ಬರಲಿಲ್ಲ: ಬಿಜೆಪಿಯು ಇಂದು ಹೀನಾಯ ಸ್ಥಿತಿಗೆ ತಲುಪಿದೆ. ಬಿ.ವೈ.ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರೂ ಬರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ಇನ್ನು, ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿಗಳ್ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ ಎಂದರು.
ಆಪರೇಷನ್ ಕಮಲ ಮಾಡುವುದಿಲ್ಲ, ಭಯ ಬೇಡ: ಬಿ.ವೈ.ವಿಜಯೇಂದ್ರ
ಏನೂ ಆಗದು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಏನೂ ಆಗಲ್ಲ. ಬಿಜೆಪಿ ಕುಸಿಯುತ್ತಿರುವ ಸಂದರ್ಭದಲ್ಲಿ ಹೆಚ್ಚಿನ ಶಕ್ತಿ ತೋರಿಸಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರು ಭರವಸೆ ಕಳೆದುಕೊಂಡಿದ್ದಾರೆ. ಇನ್ನು, ಆಪರೇಷನ್ ಕಮಲ ಪ್ರಕ್ರಿಯೆ ಇಂದಿಗೂ ನಡೆಯುತ್ತಿದೆ. ಅವರ ಆಪರೇಷನ್ ಕಮಲ ಪ್ರಯತ್ನ ಸಫಲವಾಗುವುದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.