
ಬೆಂಗಳೂರು (ಮಾ.25): ಹನಿಟ್ರ್ಯಾಪ್ ಬೆನ್ನಲ್ಲೇ ರಾಜ್ಯದಲ್ಲಿ ಇದೀಗ ಫೋನ್ ಕದ್ದಾಲಿಕೆ ವಿಚಾರದ ಚರ್ಚೆ ಮುನ್ನಲೆಗೆ ಬಂದಿದ್ದು, ತಮ್ಮ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವರ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಕಳೆದ ಎರಡು ವರ್ಷಗಳಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ.
ಆಡಳಿತ ಮತ್ತು ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆಯಾಗುತ್ತಿದೆ. ಫೋನ್ ಕದ್ದಾಲಿಕೆ ವಿಚಾರವನ್ನು ಆಡಳಿತ ಪಕ್ಷದ ಶಾಸಕರೇ ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕು ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದ್ದು, ಇದರಲ್ಲಿ ಅನುಮಾನವೇ ಬೇಡ ಎಂದು ಹೇಳಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತು ಅವರ ಪುತ್ರರೂ ಆಗಿರುವ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಟ್ರ್ಯಾಕ್ ಮಾಡಲು ಕದ್ದಾಲಿಕೆ ಮಾಡಿಸಿರುತ್ತಾರೆ. ಈ ಬಗ್ಗೆ ನಾನು ಮತ್ತು ಎಚ್.ಡಿ.ಕುಮಾರಸ್ವಾಮಿ ಮೊದಲಿಂದಲೂ ಆರೋಪ ಮಾಡುತ್ತಿದ್ದೇವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ.
ಸ್ಮಾರ್ಟ್ಮೀಟರ್ ಶುಲ್ಕ ಹೆಚ್ಚಳಕ್ಕೆ ಆರ್ಡಿಎಸ್ಎಸ್ ನಿಯಮ ಕಾರಣ: ಗೌರವ್ ಗುಪ್ತಾ ಸ್ಪಷ್ಟನೆ
ಆಡಳಿತ ಪಕ್ಷದವರೇ ಹೇಳಿಕೆ ನೀಡಿರುವುದರಿಂದ ಇನ್ನಾದರೂ ಎಚ್ಚೆತ್ತುಕೊಂಡು ಸರ್ಕಾರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹನಿಟ್ರ್ಯಾಪ್ ವಿಚಾರವಾಗಿ ಸಚಿವ ರಾಜಣ್ಣ ಮತ್ತು ಅವರ ಮಗ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಮಾತನಾಡಿದ್ದಾರೆ. ಸಚಿವರಿಂದಲೇ ವಿಷಯ ಪ್ರಸ್ತಾಪವಾಗಲು ಏನೆಲ್ಲಾ ನಡೆದಿದೆ ಎಂಬುದೂ ಗೊತ್ತಿದೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದು ಬಂದಿದೆ. ಈ ಬಗ್ಗೆ ಇದೀಗ ಕಾಂಗ್ರೆಸ್ನವರೇ ಸೂತ್ರಧಾರ ಯಾರೆಂಬುದನ್ನು ಹೇಳಬೇಕು ಎಂದರು.
ರೇಷನ್ ಕಾರ್ಡ್ ನೀಡಿ: ವಿಧಾನಮಂಡಲ ಕಲಾಪ ಪ್ರಾರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್ ಕಾರ್ಡ್ ವಾಪಸ್ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಭೇಟಿ ಮಾಡಿ ಅಹವಾಲು ಆಲಿಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರೇಷನ್ ಕಾರ್ಡ್ ವಾಪಸ್ ನೀಡಲು ಕ್ರಮ ಕೈಗೊಳ್ಳಲಿದ್ದರೆ ಬಿಜೆಪಿಯು ರಾಜ್ಯದಲ್ಲಿ ತೀವ್ರ ಹೋರಾಟ ನಡೆಸಲಿದೆ. ಸರ್ಕಾರಿ ಕಚೇರಿಗಳಿಗೆ ಮತ್ತು ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಂವಿಧಾನ ಬದಲಾವಣೆ ಬಗ್ಗೆ ನಾನು ಹೇಳಿಕೆ ನೀಡಿಲ್ಲ: ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್ ಕಾರ್ಡ್ ಇದ್ದರೂ, 12 ಲಕ್ಷ ಜನರ ಕಾರ್ಡ್ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಆಹಾರ ಸಚಿವರು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.