
ಬೆಳಗಾವಿ (ಜೂ.25): ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಟ್ನಾದಲ್ಲಿ ತೃತೀಯ ರಂಗದ ನಾಯಕರ ಸಭೆ ನಡೆಸಲಾಗಿದೆ. ಅಲ್ಲಿ ದೇಶದ ಅಭಿವೃದ್ಧಿಗೆ ಚರ್ಚೆ ಮಾಡದೇ, ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ. ಮೋದಿ ಸೋಲಲ್ಲ, ರಾಹುಲ್ ಮದುವೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
ಬೆಳಗಾವಿಯ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಟ್ನಾದಲ್ಲಿ ತೃತೀಯ ರಂಗದ ನಾಯಕರ ಸಭೆ ನಡೆಸಲಾಗಿದೆ. ದೇಶದ ಉದ್ಧಾರ ಬಗ್ಗೆ ಚರ್ಚೆ ಆಗಿಲ್ಲ, ನರೇಂದ್ರ ಮೋದಿ ಹೇಗೆ ಸೋಲಿಸಬೇಕು, ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ. ಮೋದಿ ಸೋಲಲ್ಲ, ರಾಹುಲ್ ಮದುವೆ ಆಗಲ್ಲ. ನರೇಂದ್ರ ಮೋದಿ ಎದುರಿಸಲು ವಿರೋಧ ಪಕ್ಷದಲ್ಲಿ ಒಬ್ಬ ನಾಯಕ ಇಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರ ಕಚ್ಚಾಟ ಬಹಿರಂಗ: ಬುದ್ಧಿ ಹೇಳಿದ ಯತ್ನಾಳ್ಗೆ ತಿರುಗೇಟು ಕೊಟ್ಟ ಬೊಮ್ಮಾಯಿ
ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಮತ್ತೆ 25 ಸ್ಥಾನಗಳನ್ನು ಗೆಲ್ಲುತ್ತೇವೆ. ವಿಧಾನಸಭೆ ಚುನಾವಣೆ ಸೋಲಿಗೆ ನಾನೇ ಹೊಣೆಯಾಗಿದ್ದೇನೆ. ಪ್ರಾಮಾಣಿಕ ಕೆಲಸ ಮಾಡಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇವೆ. ಐದು ಸಾವಿರ ಕೋಟಿ ಅನುದಾನದವನ್ನು ಉತ್ತರ ಕರ್ನಾಟಕ ನೀರಾವರಿ ಕೊಟ್ಟಿದ್ದೇನೆ. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯ ಘೋಷಣೆ ಮಾಡಿದ್ದೇನೆ. ನಮ್ಮ ಅಭಿವೃದ್ಧಿ ಕಾರ್ಯ ಜನರಿಗೆ ತಲುಪಿಸುವುದರಲ್ಲಿ ನಾವು ವಿಫಲ ಆಗಿದ್ದೇವೆ. ಆಸೆ, ಆಮಿಷಗಳಿಂದ ಏನಾಗಲಿದೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದರು.
ಪಾಕಿಸ್ತಾನದ ಸೊಕ್ಕಡಗಿಸಿದ ಪ್ರಧಾನಿ ಮೋದಿ: ಲೋಕಸಭೆ, ವಿಧಾನಸಭೆಯೇ ಬೇರೆ ಬೇರೆ ಆಗಿದೆ. ಮತ್ತೆ ಪ್ರಧಾನಿ ಮೋದಿಯವರನ್ನ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು. ನರೇಂದ್ರ ಮೋದಿ ಬಂದ ಮೇಲೆ ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಗೆ ನೀರನ್ನು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದಾರೆ. 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದೇವೆ. ದೇಶ ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು.
ಕೆಎಸ್ಆರ್ಟಿಸಿ ಮುಚ್ಚಲಿದೆ: ರಾಜ್ಯ ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ. ಡೀಸೆಲ್ ಇಲ್ಲದೇ ಬಸ್ ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ, ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು. ದೇಶದಲ್ಲಿ ದೆಹಲಿಯ ಕಾಂಗ್ರೆಸ್ ನಾಯಕರಿಗೆ ಈಗ ಕರ್ನಾಟಕ ಎಟಿಎಂ ಆಗಿದೆ. ಎಲ್ಲ ಕಡೆಗಳ ಪರ್ಸಂಟೇಜ್ ಫಿಕ್ಸ್ ಆಗುತ್ತಿವೆ ಎಂದರು.
ಮಳೆಗಾಗಿ ಸ್ಮಶಾನದಲ್ಲಿ ಹೂತಿದ್ದ ಶವದ ಬಾಯಿಗೆ ನೀರು ಬಿಟ್ಟ ಗ್ರಾಮಸ್ಥರು
ಒಂದೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡ ಸರ್ಕಾರ: ರಾಜ್ಯದಲ್ಲಿ ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್, ಈಗ ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು. ರಾಜ್ಯದಲ್ಲಿ ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಚಿಂತನೆ ಇಲ್ಲ. ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಸರ್ಕಾರದಲ್ಲಿದ್ದುಕೊಂಡು ಇವರು ಪ್ರತಿಭಟನೆ ಮಾಡ್ತಿದ್ದಾರೆ. ಅಕ್ಕಿ ಖರೀದಿಯಲ್ಲಿ ಹುನ್ನಾರ ಆಗಿದೆ, ಏನಾಗಿದೆ ಎಂಬುದು ನನಗೆ ಗೊತ್ತು. ಕೆಲವೇ ದಿನಗಳಲ್ಲಿ ಇವರ ಬಣ್ಣ ಬಯಲು ಆಗಲಿದೆ ಎಂದು ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.