
ರಾಮನಗರ (ಏ.15): ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸೂಚನೆ ಸಿಗುತ್ತಿದೆ. ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರ ಮರಳುವಿಕೆ ಮತ್ತು ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಜೊತೆಗೆ, ಸಚಿವ ಜಮೀರ್ ಅಹಮದ್ ಖಾನ್ ಅವರು ವಾಪಸ್ ಜೆಡಿಎಸ್ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, '2023ರ ಚುನಾವಣೆಯಲ್ಲಿ ಚನ್ನಪಟ್ಟಣದ ಜನರು ಕುಮಾರಣ್ಣನನ್ನು ಆಶೀರ್ವದಿಸಿ ಆಯ್ಕೆ ಮಾಡಿದ್ದರು. ಆದರೆ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದಾಗಿ ಅವರು ಸಂಸತ್ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಬೇಕಾಯಿತು. ಈಗ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರು ಕುಮಾರಣ್ಣ ಮತ್ತೆ ಚನ್ನಪಟ್ಟಣದಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಜನರ ಹಂಬಲ ಕೂಡ ಹೌದು. ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಬಂದೇ ಬರುತ್ತಾರೆ, ಈ ಬಗ್ಗೆ ಕಾಲವೇ ನಿರ್ಧಾರ ಮಾಡಲಿದೆ' ಎಂದು ತಿಳಿಸಿದರು. 2028ರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಡಿಯಲ್ಲಿ ಯಾವ ಕ್ಷೇತ್ರ ಯಾರಿಗೆ ಎಂಬುದು ಅಂತಿಮವಾಗಲಿದೆ ಎಂದರು.
ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಕಾರ್ಯಕರ್ತರ ಕೂಗಿನ ಬಗ್ಗೆ ಪ್ರತಿಕ್ರಿಯಿಸಿದ ನಿಖಿಲ್, "ರಾಜ್ಯದ ಜನರ ಮತ್ತು ಪಕ್ಷದ ಕಾರ್ಯಕರ್ತರ ಮನಸ್ಸಿನಲ್ಲಿ ಕುಮಾರಣ್ಣ ಸಿಎಂ ಆಗಬೇಕು ಎಂಬ ಬಲವಾದ ಭಾವನೆ ಇದೆ. ಆದರೆ ನಾವು ಈಗ ಎನ್ಡಿಎ ಮೈತ್ರಿಕೂಟದಲ್ಲಿದ್ದೇವೆ. ಮೈತ್ರಿಕೂಟದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ಸಿಎಂ ಆಗುವ ವಿಚಾರ ಇನ್ನೂ ದೂರವಿದೆ, ಅಲ್ಲಿಯವರೆಗೆ ಕಾದು ನೋಡೋಣ," ಎಂದು ಸಂಯಮದ ಉತ್ತರ ನೀಡಿದರು.
ಚನ್ನಪಟ್ಟಣವನ್ನು ಹೆಚ್ಡಿಕೆ ಅಭಿವೃದ್ಧಿ ಮಾಡಿಲ್ಲ ಎಂಬ ಎಸ್ಟಿ ಸೋಮಶೇಖರ್ ಅವರ ಟೀಕೆಗೆ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 'ನಾನ್ಯಾಕೆ ಅವನಿಗೆ (ಸೋಮಶೇಖರ್) ಉತ್ತರ ಕೊಡಲಿ? ಅವರಿಗೆ ಮುಂದಿನ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಜನರೇ ಉತ್ತರ ನೀಡುತ್ತಾರೆ. ಅಭಿವೃದ್ಧಿಯ ಆಧಾರದ ಮೇಲೆ ಅವರು ಗೆಲ್ಲುತ್ತಿಲ್ಲ, ಬದಲಾಗಿ ಒಂದು ವರ್ಗದ ಮುಗ್ಧ ಜನರಿಗೆ ರಾತ್ರೋರಾತ್ರಿ ಕೂಪನ್ ಮತ್ತು ಫುಡ್ ಕಿಟ್ ಕೊಟ್ಟು ವೋಟ್ ಹಾಕಿಸಿಕೊಳ್ಳುತ್ತಿದ್ದಾರೆ' ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ ಕುಮಾರಸ್ವಾಮಿ ಅವರ ಅವಧಿಯಲ್ಲಿ ಚನ್ನಪಟ್ಟಣದಲ್ಲಿ 1,200 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕೆಲಸಗಳಾಗಿವೆ ಎಂದು ಸಮರ್ಥಿಸಿಕೊಂಡ ನಿಖಿಲ್, 'ಸೋಮಶೇಖರ್ ಅವರಿಗೆ ಮಾಹಿತಿ ಕೊರತೆ ಇದ್ದರೆ, ಚನ್ನಪಟ್ಟಣದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನು ನಾನೇ ಅವರ ಮನೆಗೆ ‘ಕೊರಿಯರ್’ ಮಾಡುತ್ತೇನೆ' ಎಂದು ವ್ಯಂಗ್ಯವಾಡಿದರು.
ಸಚಿವ ಜಮೀರ್ ಅಹಮ್ಮದ್ ಜೆಡಿಎಸ್ಗೆ ಮರಳುತ್ತಾರೆ ಎಂಬ ಸುದ್ದಿಯ ಬಗ್ಗೆ ಕೇಳಿದ ಪ್ರಶ್ನೆಗೆ, 'ಇದು ನನಗೆ ಹೊಸ ವಿಷಯ. ಕೇವಲ ಮಾಧ್ಯಮಗಳಲ್ಲಿ ಈ ಬಗ್ಗೆ ನೋಡಿದ್ದೇನೆ ಅಷ್ಟೇ, ನನ್ನ ಬಳಿ ಯಾವುದೇ ಅಧಿಕೃತ ಮಾಹಿತಿ ಇಲ್ಲ' ಎಂದು ಸ್ಪಷ್ಟಪಡಿಸಿದರು.
ಒಟ್ಟಾರೆಯಾಗಿ, ನಿಖಿಲ್ ಕುಮಾರಸ್ವಾಮಿ ಅವರ ಈ ಹೇಳಿಕೆಗಳು ಚನ್ನಪಟ್ಟಣ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದು, ಮುಂದಿನ ಉಪಚುನಾವಣೆ ಅಥವಾ ಸಾರ್ವತ್ರಿಕ ಚುನಾವಣೆಯ ಹೊತ್ತಿಗೆ ಮೈತ್ರಿಕೂಟದಲ್ಲಿ ಯಾವ ರೀತಿಯ ಬದಲಾವಣೆಗಳಾಗಲಿವೆ ಎಂಬ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.