
ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ
ಹಾಸನ(ನವೆಂಬರ್ 30): ನಾನು ಸಂಸದನಾಗಲು, ಶಾಸಕನಾಗಲು ಎಂದೂ ಕೂಡ ಹಪಾಹಪಿಸಿಲ್ಲ.ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ, ರಾಜಕಾರಣದಲ್ಲೇ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಿದ್ದೆ, ಈಗ ಸೋತಿದ್ದರೂ ಸುಮ್ಮನೆ ಕೂರಲ್ಲ, ಜನಪರವಾಗಿ ಹೋರಾಡುವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಅರಕಲಗೂಡು ಶಾಸಕ ಎ.ಮಂಜು ಅವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ರಸಮಂಜರಿ ಕಾರ್ಯಕ್ರಮ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ನಮ್ಮ ತಾತ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ನಿಮ್ಮ ಹೃದಯದಲ್ಲಿ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ಗೌರವ ಎಷ್ಟು ಜನ್ಮ ಎತ್ತಿ ಬಂದರೂ ತೀರಿಸಲು ಸಾಧ್ಯವಿಲ್ಲ ಎಂದರು.
ನಿಮ್ಮ ಋಣಕ್ಕಾಗಿ ಪ್ರಾಮಾಣಿಕವಾಗಿ ನಮ್ಮ ಇಡೀ ಪಕ್ಷ ಹಾಗೂ ನಮ್ಮ ಕುಟುಂಬ ನಿಮ್ಮ ಜೊತೆಯಲ್ಲಿ ಸದಾಕಾಲ ಇರಲಿದೆ. ರಾಮನಗರ ಜಿಲ್ಲೆಯ ಜನರೂ ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು.
ಜೆಡಿಎಸ್ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಪತ್ರ; ಸೋತರೂ ಸುಮ್ಮನೆ ಕೂರಲ್ಲವೆಂದು ಸಂದೇಶ!
ಚುನಾವಣೆಯಲ್ಲಿ ಏಳು ಬೀಳು ಸರ್ವೆ ಸಾಮಾನ್ಯ. ನಾನು ರಾಜಕಾರಣದ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರೂ, ಚಿತ್ರರಂಗದಲ್ಲಿ ನನ್ನದೇ ಆದಷ್ಟು ಸವಾಲುಗಳನ್ನು ಸ್ವೀಕಾರ ಮಾಡಿದ್ದೇನೆ. ಜಾಗ್ವಾರ್ ಮೂಲಕ ನಮ್ಮ ತಂದೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ಅದಾದ ಬಳಿಕ ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು.
ನಮ್ಮ ನಾಡಿನ ನೆಲ, ಜಲ, ಭಾಷೆಯ ವಿಚಾರವಾಗಿ ದೇವೇಗೌಡರು ೯೨ ವರ್ಷ ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದ ಸ್ಫೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನ ಅರಿತಿದ್ದೇನೆ. ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತರ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರು ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ ಎಂದು ನೆನಪಿಸಿಕೊಂಡರು.
ಈ ಪಕ್ಷದಲ್ಲಿ ನಾನು ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ೧೯ ಸ್ಥಾನ ಗೆದ್ದು ಈಗ ೧೮ಕ್ಕೆ ಇಳಿದಿದ್ದೇವೆ. ನಿಮ್ಮಲ್ಲೆರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ಹೇಳಿದರು.
ತಮ್ಮ ಸೋಲಿಸಿದವರನ್ನೇ ಗೆಲ್ಲಿಸಿ ಸೇಡು ತೀರಿಸಿಕೊಂಡರಾ ಅಪೂರ್ವ ಸಹೋದರರು?
ನಾನು ಸೋತು ಒಂದು ವಾರ ಆಗಿದೆ. ಎಂದೆಗುಂದಬಾರದು ಎಂದು ಅನೇಕರು ಹೇಳಿದ್ದಾರೆ. ನನಗಿನ್ನೂ ವಯಸ್ಸು ೩೬ ವರ್ಷ. ನನ್ನ ಮುಂದೆ ಇರುವುದು ಜೆಡಿಎಸ್ ಪಕ್ಷವನ್ನು ದಡ ಮುಟ್ಟಿಸಬೇಕು. ಶಾಸಕನಾಗಬೇಕೆನ್ನುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ, ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಹೇಳಿದರು. ನಾನು ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುವೆ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾನ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.