
ಬೆಂಗಳೂರು [ನ.04]: ಸಮ್ಮಿಶ್ರ ಸರ್ಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ ಅನರ್ಹ ಶಾಸಕರ ರಾಜೀನಾಮೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನರ್ಹ ಶಾಸಕರ ಕುರಿತ ನನ್ನ ಹೇಳಿಕೆಯೊಂದನ್ನು ತಿರುಚಿ, ಅದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವ ಮೂಲಕ ಗೊಂದಲ ಹುಟ್ಟಿಸುವ ಷಡ್ಯಂತ್ರ ರೂಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಅನರ್ಹ ಶಾಸಕರು ತಮ್ಮದೇ ಆದ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದರು.
ಟಿಕೆಟ್ ಕೊಡುತ್ತೇವೆ ಎಂದು ಅನರ್ಹ ಶಾಸಕರಿಗೆ ಹೇಳಿಲ್ಲ. ನಾನು ಮಾತನಾಡಿದ್ದು ಎನ್ನಲಾದ ಆಡಿಯೋವನ್ನು ತಿರುಚಿ ಕಾಂಗ್ರೆಸ್ನವರು ಮನಬಂದಂತೆ ವ್ಯಾಖ್ಯಾನಿಸುತ್ತಿದ್ದಾರೆ. ಈ ಆಡಿಯೋ ವಿಚಾರವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಸ್ತಾಪಿಸಿದರೆ ಕಾಂಗ್ರೆಸ್ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಳ್ಳಬೇಕಾಗುತ್ತದೆ. ಮೈತ್ರಿ ಸರ್ಕಾರದಲ್ಲಿ ಶಾಸಕರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣಕ್ಕಾಗಿ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಉಪ ಚುನಾವಣೆ ಬಳಿಕ ಮತ್ತಷ್ಟುಗಟ್ಟಿಯಾಗಲಿದೆ. ನನ್ನ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಭೇಟಿ ಮಾಡಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತಂತ್ರ. ಆಡಿಯೋ ಇಟ್ಟುಕೊಂಡು ರಾಜ್ಯಪಾಲರ ಬಳಿ ಹೋಗಿರುವುದರಲ್ಲಿ ಅರ್ಥ ಇಲ್ಲ. ಸಿದ್ದರಾಮಯ್ಯ ಅವರು ದೊಡ್ಡ ನಾಯಕರಂತೆ ಬಿಂಬಿಸಿಕೊಳ್ಳಲು ಹೋಗುತ್ತಿದ್ದಾರೆ. ಅನರ್ಹಗೊಂಡಿರುವ ಶಾಸಕರು ಮುಂಬೈಗೆ ಹೋಗಿದ್ದು ಇಡೀ ದೇಶಕ್ಕೆ ಗೊತ್ತಾಗಿದೆ. ಇದಕ್ಕೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಏನು ಸಂಬಂಧ? ವಿನಾಕಾರಣ ಅವರ ರಾಜೀನಾಮೆ ಕೇಳುವುದು ಮೂರ್ಖತನದ ಪರಮಾವಧಿ ಎಂದು ಟೀಕಾ ಪ್ರಹಾರ ನಡೆಸಿದರು.
ಕಾಂಗ್ರೆಸಿಗರು ಪ್ರಚಾರ ಪ್ರಿಯರು. ಏನೋ ಹೇಳಿ ಅದನ್ನು ಪತ್ರಿಕೆಯಲ್ಲಿ ಬರುವಂತೆ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಇದಕ್ಕೆ ಗೌರವವೂ ಇಲ್ಲ, ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ಕಾಂಗ್ರೆಸ್ನ ಈ ವರ್ತನೆಗೆ ಉಪ ಚುನಾವಣೆಯಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.