
ಬೆಂಗಳೂರು(ನ.07): ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ವಿಚಾರಗಳ ಚರ್ಚೆ ಹೆಚ್ಚಾಗಿದ್ದು, ರಾಜ್ಯದ ಅಭಿವೃದ್ಧಿ ಕಾರ್ಯಗಳು, ಬಡವರು, ದಲಿತರು, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳು ಹಿಂದೆ ಬಿದ್ದಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಯಾರು ಮುಖ್ಯಮಂತ್ರಿ ಆಗುತ್ತಾರೆ, ಯಾರು ಉಪಮುಖ್ಯಮಂತ್ರಿ ಆಗುತ್ತಾರೆ, ರಾಜಕೀಯ ಸ್ಥಿತಿ ಏನಾಗುತ್ತಿದೆ ಎನ್ನುವುದಕ್ಕಿಂತ ರಾಜ್ಯದ ಮೂಲಭೂತ ಸಮಸ್ಯೆಗೆ ಸರ್ಕಾರದ ಸ್ಪಂದನೆ ಸಿಗುತ್ತಿದೆಯಾ ಅನ್ನುವುದು ಮುಖ್ಯ. ಇದು ಆಗದಿರುವುದಕ್ಕೆ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ನವರು ವಿಷಯಾಂತರ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದರು.
ಕಾಂಗ್ರೆಸ್ಸ್ಸಿಗರು ನಮ್ಮ ಶಾಸಕರ ಮನೆ ಬಾಗಿಲು ಕಾಯೋದು ಬೇಡ, ನಾನೇ ಎಲ್ಲರನ್ನೂ ಕಳಿಸ್ತೇನೆ: ಎಚ್.ಡಿ. ಕುಮಾರಸ್ವಾಮಿ
ದಲಿತರು, ಹಿಂದುಳಿದವರು, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಾರಕವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಅನೇಕ ರಾಜ್ಯಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಕರ್ನಾಟಕದಲ್ಲೂ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಮಸ್ಯೆಯಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ಹಿಂದೆ ಬಿದ್ದಿದೆ ಎಂದರು.
ಪ್ರತಿಪಕ್ಷ ನಾಯಕ ಆಯ್ಕೆ ವಿಚಾರದಲ್ಲಿ ಲೋಪ
ರಾಜ್ಯದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ನಮ್ಮ ಪಕ್ಷ ಎಡವಿದೆ. ಇದರಿಂದ ಹಿನ್ನಡೆಯಾಗುತ್ತಿರುವುದು ನಿಜ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಒಪ್ಪಿಕೊಂಡಿದ್ದಾರೆ. ಈ ವಿಚಾರದಲ್ಲಿ ನಾವು ಎಡವಿದ್ದೇವೆ. ಇದರಿಂದ ಹಿನ್ನಡೆಯಾಗುತ್ತಿರುವುದೂ ನಿಜ. ಯಾವ ಕಾರಣಕ್ಕೆ ವರಿಷ್ಠರು ವಿಳಂಬ ಮಾಡಿದ್ದಾರೆ ಗೊತ್ತಿಲ್ಲ. ಬಹುಶಃ ಪಂಚರಾಜ್ಯಗಳ ಚುನಾವಣೆ ಮುಗಿದ ಮೇಲೆ ಪ್ರತಿಪಕ್ಷದ ನಾಯಕನ ಆಯ್ಕೆ ಆಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.