
ವಿಜಯಪುರ (ಮೇ.18): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಸೇರಿದಂತೆ ಕೆಲವು ಸುಳ್ಳು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಮತ್ತು ಇತರರು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಸಿದರು.
ಆದರೆ, ಅದು ಸಾಕಾರಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರು ರಾಜ್ಯವಷ್ಟೇ ಅಲ್ಲ, ಇಡೀ ದೇಶ ಕಂಡ ಅತ್ಯಂತ ಪ್ರಾಮಾಣಿಕ ರಾಜಕೀಯ ನೇತಾರ. ರಾಜ್ಯದಲ್ಲಿ ಒಟ್ಟು 16 ಬಾರಿ ಬಜೆಟ್ ಅನ್ನು ಮಂಡಿಸುವ ಮೂಲಕ ತಳ ವರ್ಗದ ಸಮುದಾಯಗಳೂ ಸೇರಿ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗೆ ಅವರ ಸೇವೆ ಅನನ್ಯವಾಗಿದೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಇದರರ್ಥ ನಮ್ಮ ಸರ್ಕಾರ ಜನಪರ ಯೋಜನೆಗಳನ್ನು ನೀಡಿ ಜನರಿಗಾಗಿ ಸೇವೆ ಸಲ್ಲಿಸುತ್ತಿರುವ ಸರ್ಕಾರ. ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಹೈಕಮಾಂಡ್ ನೀಡುವ ನಿರ್ದೇಶನಗಳಡಿಯಲ್ಲಿ ನಾವೆಲ್ಲರೂ ಮುನ್ನಡೆಯುತ್ತೇವೆ. ಹೀಗಾಗಿ, ರಾಜ್ಯದಲ್ಲಿ ಹೈಕಮಾಂಡ್ ಆದೇಶ ಮತ್ತು ದಲಿತರು, ಹಿಂದುಳಿದವರು ಹಾಗೂ ಎಲ್ಲಾ ವರ್ಗದ ಜನರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರವಾಗಿ ಇರುವವರೆಗೂ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಟ್ರಂಪ್ ಹೆಸರು ಹೇಳುವುದಕ್ಕೆ ಪ್ರಧಾನಿ ಮೋದಿಗೆ ಭಯ: ಸಚಿವ ದಿನೇಶ್ ಗುಂಡೂರಾವ್
ಬಿ-ಖಾತಾ ವಿತರಣೆ ಅವಧಿ ಮೂರು ತಿಂಗಳು ವಿಸ್ತರಣೆ: ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸರ್ಕಾರದ ನಾಗರಿಕ ಸ್ನೇಹಿ ಸೌಲಭ್ಯ ಹೆಚ್ಚಿನ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ವಿತರಣೆ ಪ್ರಕ್ರಿಯೆಯನ್ನು ಮೂರು ತಿಂಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ. ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ-ಖಾತಾ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ-ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತಹಂತವಾಗಿ ಬಿ-ಖಾತಾ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.