
ಬೆಂಗಳೂರು (ಏ.14): ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ನಾನು ಟಿಕೆಟ್ ಆಕಾಂಕ್ಷಿಯಲ್ಲ. ಪಕ್ಷ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದಾರೆ. ಗುರುವಾರ ಅವರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂತೇಶ್, ಬಿಜೆಪಿ ಪಕ್ಷ ನಮ್ಮ ತಂದೆ ಅವರನ್ನು ಬೂತ್ ಮಟ್ಟದಿಂದ ಉಪಮುಖ್ಯಮಂತ್ರಿ ಸ್ಥಾನದವರೆಗೆ ಕರೆತಂದಿದೆ. ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಯಿ ಎಂದು ಭಾವಿಸಿರುವ ನಮ್ಮ ತಂದೆಗೆ 75 ವರ್ಷ ಆಗಿದೆ. ಯುವಕರಿಗೆ ಅವಕಾಶ ನೀಡಲು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರ ಈ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಇದರ ಹಿಂದೆ ಯಾವುದೇ ಒತ್ತಡ ಇಲ್ಲ. ಬಿಜೆಪಿ ಪಕ್ಷ ನಮಗೆ ಶ್ರೀರಕ್ಷೆಯಾಗಿದೆ ಎಂದರು. ನಾನು ಶಿವಮೊಗ್ಗ ನಗರ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಯಲ್ಲ. ನಾನು ಆಕಾಂಕ್ಷಿ ಎಂದು ಎಲ್ಲೂ ಹೇಳಿಲ್ಲ. ಈಗಲೂ ಹೇಳುವುದಿಲ್ಲ.
ವಿಜಯಪುರ ಜಿಲ್ಲೆಯ 2 ಕ್ಷೇತ್ರಗಳ ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಶಮನಕ್ಕೆ ನಾಯಕರರ ಸತತ ಪ್ರಯತ್ನ
ಪಕ್ಷ ನೀಡಿದ ಕೆಲಸವನ್ನು ಮಾಡುತ್ತೇನೆ. ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ ಏಳು ಚುನಾವಣೆಗಳಲ್ಲಿ ಸ್ಪರ್ಧಿಸಿ ಐದರಲ್ಲಿ ಗೆದ್ದು ಎರಡರಲ್ಲಿ ಸೋತಿದ್ದಾರೆ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಶಿವಮೊಗ್ಗ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಕುರುಬ ಸಮುದಾಯದ ಜನಸಂಖ್ಯೆ ಕಡಿಮೆ. ನಮ್ಮ ತಂದೆ ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ಸಮುದಾಯ ಜನಸಂಖ್ಯೆ 8-9 ಸಾವಿರ ಇತ್ತು. ಕಳೆದ ಚುನಾವಣೆಯಲ್ಲಿ ನಮ್ಮ ತಂದೆ 47 ಸಾವಿರ ಮತಗಳ ಲೀಡ್ನಲ್ಲಿ ಗೆದ್ದಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಕಾರ್ಯಕರ್ತರು ನಮ್ಮ ಕುಟುಂಬ ಇದ್ದಂತೆ. ಬಿಜೆಪಿ ಪಕ್ಷ ನಮ್ಮನ್ನು ಕೈ ಬಿಡಲ್ಲ. ನಾವೆಲ್ಲಾ ಬಿಜೆಪಿಗೆ ಗೆಲುವಿಗೆ ದುಡಿಯುತ್ತೇವೆ ಎಂದು ಹೇಳಿದರು.
ಸೋನಿಯಾ, ರಾಹುಲ್ ಬಿಟ್ಟ ಮುರುಕಲು ಕುರ್ಚಿಗೆ ಖರ್ಗೆ ಅಧ್ಯಕ್ಷ: ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ
ಈ ಹಿಂದೆ ನನಗೆ ರಾಣೆಬೆನ್ನೂರಿನಿಂದ ಸ್ಪರ್ಧಿಸಲು ಅವಕಾಶವಿತ್ತು. ವಿಧಾನ ಪರಿಷತ್ ಸದಸ್ಯನಾಗುವ ಅವಕಾಶವೂ ಇತ್ತು. ಆದರೆ, ನಮ್ಮ ತಂದೆ ಅವರು ನಾನು ಚುನಾವಣಾ ರಾಜಕೀಯದಲ್ಲಿ ಇರುವವರೆಗೂ ನೀನು ಸ್ಪರ್ಧಿಸಬೇಡ ಎಂದು ಹೇಳಿದ್ದರು. ಇಷ್ಟುದಿನ ಅವರ ಮಾತನ್ನು ಪಾಲಿಸಿಕೊಂಡು ಬಂದಿದ್ದೇನೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕಾಂತೇಶ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.