
ವಿಜಯಪುರ(ಜೂ.11): ವಿಧಾನ ಪರಿಷತ್ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಕೆಲ ಪಕ್ಷೇತರ ಅಭ್ಯರ್ಥಿಗಳು ಮತದಾರರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಆರೋಪಿಸಿದರು.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳು ಮತದಾರರ ಮೇಲೆ ಹಣದ ಪ್ರಭಾವ ಬೀರುವುದು ಗಂಭೀರ ವಿಷಯ. ಇದನ್ನು ನಮ್ಮ ಪಕ್ಷದ ಮುಖಂಡರ ಗಮನಕ್ಕೆ ತಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.
ಬಿಜೆಪಿ ಅಭಿವೃದ್ಧಿ ಪರವಾಗಿ ಕೆಲಸ ಮಾಡುತ್ತಿದೆ. ನಾವು ಮತದಾರರರಿಗೆ ಯಾವುದೇ ಆಮಿಷ ಒಡ್ಡುವುದಿಲ್ಲ. ಅಭಿವೃದ್ಧಿ ನೋಡಿ ಮತ ನೀಡಲಿ. ವಾಯವ್ಯ ಶಿಕ್ಷಕರ ಕ್ಷೇತ್ರದ ಅರುಣ ಶಹಪುರ ಹಾಗೂ ಪದವೀಧರ ಕ್ಷೇತ್ರದ ಹನಮಂತ ನಿರಾಣಿ ಅವರು ಬಹುಮತದಿಂದ ಪುನರಾಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದ ಜನರೇ ಕಾಂಗ್ರೆಸ್ ಚಡ್ಡಿ ಕಳಚಿದ್ದಾರೆ: ಕೇಂದ್ರ ಸಚಿವ ಜೋಶಿ
ಕೆಲ ಅಭ್ಯರ್ಥಿಗಳು ಹಣದ ಆಮಿಷ ಒಡ್ಡಿ ಗೆಲುವಿನ ಕನಸು ಕಾಣುತ್ತಿದ್ದಾರೆ. ಆದರೆ ಮತದಾರರು ಬುದ್ಧಿವಂತರಿದ್ದು, ಯಾರು ಕೆಲಸಗಾರರಿದ್ದಾರೆ? ಯಾರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ? ಎಂಬುದನ್ನು ಮತದಾರರು ಅರ್ಥ ಮಾಡಿಕೊಂಡು ಖಂಡಿತವಾಗಿಯೂ ಕೆಲಸಗಾರರಿಗೆ ಮತ ನೀಡುತ್ತಾರೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗಳ ಗೆಲವು ನಿಶ್ಚಿತ ಎಂದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟುಕೊಡುಗೆ ನೀಡುತ್ತಿವೆ. ದೇಶದಲ್ಲಿ ವಿನೂತನ ಸುಧಾರಣೆಗಳು, ಹೊಸ ಹೊಸ ಯೋಜನೆಗಳ ಮೂಲಕ ಶಿಕ್ಷಣದಲ್ಲಿ ಬದಲಾವಣೆ ತರಲು ಸರ್ಕಾರಗಳು ಶ್ರಮಿಸುತ್ತಿವೆ. ಶಿಕ್ಷಣ ಹಾಗೂ ಅಭಿವೃದ್ಧಿ ಕುರಿತು ಪಕ್ಷದ ನೆಲೆಗಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ ನಮ್ಮ ಇಬ್ಬರೂ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಪೂ ನೌಕರರ ಸಂಘದ ಗೌರವಾಧ್ಯಕ್ಷ ಎ.ಎಸ್.ಪಾಟೀಲ, ಬಿ.ಡಿ.ಈ ಸೊಸೈಟಿ ಪ್ರಾಚಾರ್ಯ ಪಿ.ಟಿ.ಕೊಟ್ನಿಸ್, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.