
ದಾವಣಗೆರೆ (ಮಾ.04): ಜನರ ಸಮಸ್ಯೆ, ಕುಂದು ಕೊರತೆ ಇತ್ಯರ್ಥಪಡಿಸುವ ಉದ್ದೇಶದಿಂದ ಅಧಿಕಾರಿಗಳ ತಂಡವೇ ಜನರ ಮನೆ ಬಾಗಿಲಿಗೆ ಬಂದು, ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿ ಜನರ ಕುಂದು ಕೊರತೆ ನಿವಾರಿಸುವ ಕೆಲಸ ಮಾಡುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ದೊಡ್ಡ ಬಾತಿ ಹಾಗೂ ಹಳೆ ಬಾತಿ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ, ಜನರ ಅಹವಾಲು ಸ್ವೀಕಾರ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.
ಐದೂ ಗ್ಯಾರಂಟಿ ಯೋಜನೆಗಳ ಸರ್ಕಾರ ನೀಡುತ್ತಿದ್ದು, ಯಾವುದೇ ಕುಟುಂಬ, ಫಲಾನುಭವಿಗಳಿಗೆ ಯೋಜನೆಗಳ ಪಡೆಯಲು ಸಾಧ್ಯವಾಗದಿದ್ದರೆ ಅಂತಹವರಿಗೆ ತಕ್ಷಣವೇ ಸೌಲಭ್ಯ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ. ಜನರಿಗೆ ಅಗತ್ಯ ಆಹಾರ ಧಾನ್ಯ, ಆರೋಗ್ಯ ರಕ್ಷಣೆ, ಕುಡಿಯುವ ನೀರು, ವಸತಿ, ಶಿಕ್ಷಣ, ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮುನ್ನುಗ್ಗುತ್ತಿದೆ ಎಂದು ಹೇಳಿದರು. ಕೆಲ ಕೌಟುಂಬಿಕ ಸಮಸ್ಯೆ, ವ್ಯಾಜ್ಯಗಳ ಕಾರಣ ಕೆಲ ಅರ್ಜಿ ಇತ್ಯರ್ಥವಾಗಿಲ್ಲ. ಅಮೃತ ನಗರದಲ್ಲಿ ಅನೇಕ ವರ್ಷದಿಂದ ಮನೆಗಳಿಗೆ ಹಕ್ಕುಪತ್ರ ನೀಡಲಾಗಿರಲಿಲ್ಲ. ಆದರೆ, ಈ ಜನತಾ ದರ್ಶನದಲ್ಲಿ ಇತ್ಯರ್ಥಪಡಿಸಿ, ಎಲ್ಲಾ ಮನೆ ಮಾಲೀಕರಿಗೆ ಇ ಸ್ವತ್ತು ದಾಖಲೆ ನೀಡಲಾಗಿದೆ ಎಂದು ತಿಳಿಸಿದರು.
ಪೂರ್ವ ತಯಾರಿ ಇಲ್ಲದೇ ಕಾಂಗ್ರೆಸ್ನಿಂದ ಜಾತಿ ಗಣತಿ ವರದಿ: ಪ್ರಲ್ಹಾದ್ ಜೋಶಿ
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಮಾತನಾಡಿ, ದೊಡ್ಡಬಾತಿ, ಹಳೆಬಾತಿಯಲ್ಲಿ 3 ದಿನದಿಂದ ಮನೆ ಮನೆಗೆ ಭೇಟಿ ನೀಡಿ ಜನರ ಕುಂದು ಕೊರತೆ ಅಹವಾಲು ಸ್ವೀಕರಿಸಿದೆ. 2 ಗ್ರಾಮಗಳಿಂದ 908 ಅರ್ಜಿ ಸ್ವೀಕೃತವಾಗಿವೆ. ಜ್ವಲಂತ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ನೀಲಾನಹಳ್ಳಿಯಲ್ಲಿ ಗ್ರಾಮಠಾಣಾ ಅಧಿಸೂಚನೆ ಹೊರಡಿಸಿ ಇ-ಸ್ವತ್ತು ನೀಡಲು ಕ್ರಮ ಕೈಗೊಂಡಿದೆ. ಜಿಲ್ಲಾ ಸಹಕಾರ ಬ್ಯಾಂಕ್ ಮೂಲಕ 89 ಜನರಿಗೆ ಹೈನುಗಾರಿಕೆ ಮಾಡಲು ಹಸು ಕೊಡಿಸಲಾಗಿದೆ ಎಂದರು. ಜಿಪಂ ಸಿಇಒ ಡಾ.ಸುರೇಶ ಬಿ.ಇಟ್ನಾಳ್ ಮಾತನಾಡಿ, ಅಂಗನವಾಡಿ ಕೇಂದ್ರ, ನರೇಗಾದಡಿ ದನದ ಕೊಟ್ಟಿಗೆ, ಸಚಿವರ ನಿರ್ದೇಶನದಂತೆ ದೊಡ್ಡಬಾತಿ ಗ್ರಾಮದಲ್ಲಿ ಎಲ್ಲಾ ಕಡೆ ಚರಂಡಿ ನಿರ್ಮಿಸಲು ಕ್ರಮ ವಹಿಸಲಾಗುತ್ತದೆ. ಗ್ರಾಮ ಪಂಚಾಯಿತಿ ಸೇವೆಗಳ ಇನ್ನು ಮುಂದೆ ವಾಟ್ಸಪ್ ಮೂಲಕ ಪಡೆಯಬಹುದು ಎಂದರು.
ದೊಡ್ಡಬಾತಿ ಗ್ರಾಪಂ ಅಧ್ಯಕ್ಷರಾದ ಡಿ.ಮಂಜುಳಾ ಅಧ್ಯಕ್ಷತೆ ವಹಿಸಿದ್ದರು. ಹಳೆಬಾತಿ ಗ್ರಾಪಂ ಅಧ್ಯಕ್ಷರಾದ ಆರ್.ಸೀತಾ, ಉಪಾಧ್ಯಕ್ಷರಾದ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಎ.ಪುಷ್ಪ, ಅಪರ ಡಿಸಿ ಸೈಯ್ಯದಾ ಅಫ್ರೀನ್ ಭಾನು ಎಸ್. ಬಳ್ಳಾರಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮುದೇಗೌಡ್ರ ಗಿರೀಶ, ಬಿ.ಕರಿಬಸಪ್ಪ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಗ್ರಾಮದ ಮುಖಂಡರು, ಗ್ರಾಮಸ್ಥರು, ಫಲಾನುಭವಿಗಳಿದ್ದರು. ಈ ವೇಳೆ ಗರ್ಭಿಣಿಯರಿಗೆ ಸೀಮಂತ, ವಿಕಲ ಚೇತನರಿಗೆ ಸಾಧನಾ ಸಲಕರಣೆ, ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ನಿವೇಶನ ಹಕ್ಕುಪತ್ತ ವಿತರಣೆ ಸೇರಿ ಇನ್ನಿತರೆ ಸೌಲಭ್ಯಗಳ ವಿತರಿಸಲಾಯಿತು. ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞೆ ಸ್ವೀಕರಿಸಲಾಯಿತು.
ಪ್ರತಿ ಹಳ್ಳಿಗೆ ಮೂಲ ಸೌಕರ್ಯ ಒದಗಿಸುವುದೆ ಸರ್ಕಾರದ ಉದ್ದೇಶ: ಸಚಿವ ಬೋಸರಾಜು
ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಹೆಚ್ಚುವರಿಯಾಗಿ 100 ಕೊಠಡಿ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಆವರಗೊಳ್ಳ, ಕಾಡಜ್ಜಿಯಲ್ಲಿ ಹೊಸದಾಗಿ ಪಶು ಆಸ್ಪತ್ರೆ ಮಂಜೂರಾಗಿವೆ. ಮುಂದಿನ ದಿನಗಳಲ್ಲಿ ಬಾತಿ ಕೆರೆ ಅಭಿವೃದ್ಧಿ ಮಾಡಿ, ಈ ಭಾಗ ಹಾಗೂ ಸುತ್ತಲಿನ ಜನರಿಗೆ, ಗ್ರಾಮಗಳಿಗೆ ನೀರಿನ ಅನುಕೂಲ ಕಲ್ಪಿಸಲುದ್ದೇಶಿಸಲಾಗಿದೆ. ಕಡ್ಲೇಬಾಳು ಗ್ರಾಮದ ಮೊದಲ ಜನತಾ ದರ್ಶನದಲ್ಲಿ ಸ್ವೀಕರಿಸಿದ್ದು ಅರ್ಜಿಗಳ ಪೈಕಿ ಶೇ.98 ವಿಲೇ ಮಾಡಲಾಗಿದೆ.
-ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.