ಶಿವಮೊಗ್ಗ: ಯಡಿಯೂರಪ್ಪ ತವರಲ್ಲಿಂದು ಪ್ರಧಾನಿ ಮೋದಿ ಸಮಾವೇಶ

By Kannadaprabha NewsFirst Published Mar 18, 2024, 4:19 AM IST
Highlights

ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ರಾಜ್ಯದಲ್ಲಿ ಮೋದಿಯವರ ಮೊದಲ ಪ್ರಚಾರ ಸಭೆ ಇದಾಗಿದೆ. ಶನಿವಾರದ ಕಲಬುರಗಿ ಸಮಾವೇಶದ ಬೆನ್ನಹಿಂದೆಯೇ ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬಿಜೆಪಿ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಲಿದ್ದಾರೆ.

ಶಿವಮೊಗ್ಗ(ಮಾ.18):  ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು(ಸೋಮವಾರ) ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತವರು ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ರಾಜ್ಯದಲ್ಲಿ ಮೋದಿಯವರ ಮೊದಲ ಪ್ರಚಾರ ಸಭೆ ಇದಾಗಿದೆ. ಶನಿವಾರದ ಕಲಬುರಗಿ ಸಮಾವೇಶದ ಬೆನ್ನಹಿಂದೆಯೇ ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬಿಜೆಪಿ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಲಿದ್ದಾರೆ.

ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಧ್ಯಾಹ್ನ 1.15ಕ್ಕೆ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕಾಗಿ ಬಿಜೆಪಿ ಧ್ವಜದ (ಕೇಸರಿ) ಬಣ್ಣದ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯ ಎರಡೂ ಬದಿಯಲ್ಲಿ ಮೆಟಲ್‌ ಡಿಟೆಕ್ಟರ್‌ ಅಳವಡಿಸಲಾಗಿದ್ದು, ವೇದಿಕೆ ಹಿಂಭಾಗ ಮತ್ತು ಅಕ್ಕಪಕ್ಕದಲ್ಲಿ ತಾತ್ಕಾಲಿಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ವೇದಿಕೆ ಮುಂಭಾಗ ಬೃಹತ್‌ ಪೆಂಡಾಲ್‌ ಹಾಕಲಾಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. 5 ಲೋಕಸಭಾ ಕ್ಷೇತ್ರಗಳ ಸಂಸದರು, ಶಾಸಕರು, ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಿವಮೊಗ್ಗ: ಬಿರುಸಿನ ಸಂಪರ್ಕ ಅಭಿಯಾನ ಆರಂಭಿಸಿದ ಅಪ್ಪ, ಮಗ

ಸಮಾವೇಶದ ವೇದಿಕೆ ಮೇಲೆ ಮೋದಿ ಜೊತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ನಾರಾಯಣಸ್ವಾಮಿ, ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ, ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಉಡುಪಿ– ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡದ ಅಭ್ಯರ್ಥಿ ಬ್ರಿಜೇಶ್ ಚೌಟ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರಗ ಜ್ಞಾನೇಂದ್ರ, ಸಿ.ಟಿ.ರವಿ ಉಪಸ್ಥಿತರಿರಲಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈ ಮಧ್ಯೆ, ಮೋದಿ ಅವರನ್ನು ವಿಶಿಷ್ಟ ರೀತಿಯಲ್ಲಿ ವೇದಿಕೆಗೆ ಕರೆ ತರಲು ಪ್ಲ್ಯಾನ್‌ ಮಾಡಿಕೊಳ್ಳಲಾಗುತ್ತಿದೆ. ಮೋದಿಯವರು ತೆರೆದ ವಾಹನದಲ್ಲಿ ಬೃಹತ್ ಪೆಂಡಾಲ್‌ ಮಧ್ಯಭಾಗದಿಂದ ಸಾಗಲಿದ್ದು, ಸಮಾವೇಶದಲ್ಲಿ ಸೇರಿರುವ ಜನರತ್ತ ಕೈಬೀಸಿ ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

click me!