
ನಾಗಮಂಗಲ (ಮಾ.10): ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಾಕ್ ಆಗಿದೆ. ಈಗ ನಮ್ಮ ಸರ್ಕಾರದ ಗ್ಯಾರಂಟಿಯನ್ನು ಅವರೂ ಸಹ ಗ್ಯಾರಂಟಿ ಎಂದು ಘೋಷಣೆ ಮಾಡುತ್ತಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು.
ಪಟ್ಟಣದ ಟಿ.ಬಿ.ಬಡಾವಣೆಯ ಎಂಆರ್ಪಿ ಶ್ರೀ ನಂಜುಂಡೇಶ್ವರ ಪ್ಯಾಲೆಸ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ತಾಲೂಕಿನ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಸವಲತ್ತು ವಿತರಣಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಈಗ ಹೊಸದಾಗಿ ಗ್ಯಾರಂಟಿ ಎನ್ನುತ್ತಿದ್ದಾರೆ. ಜಾಹೀರಾತು ಕೊಡಲು ಹಣವಿದೆ. ಅವರ ಪರ ಕೆಲ ಸುದ್ದಿವಾಹಿನಿಗಳ ಮಾಲೀಕರಿದ್ದಾರೆ. ಹಾಗಾಗಿ ಅವರು ಈ ರೀತಿ ಘೋಷಣೆ ಮಾಡಲು ನಿಂತಿದ್ದಾರೆ ಎಂದು ಜರಿದರು.
ಯಾವುದೇ ಜಾತಿ, ಧರ್ಮ, ಮೇಲು ಕೀಳೆಂಬ ತಾರತಮ್ಯವಿಲ್ಲದೆ ಜನಸಾಮಾನ್ಯರಿಗೆ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡುವ ಮೂಲಕ, ಎಲ್ಲ ವರ್ಗಗಳ ಜನರ ಸಬಲೀಕರಣಗೊಳಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಹೇಳಿದರು.
ಜಯಚಾಮರಾಜೇಂದ್ರ ಒಡೆಯರ್ ಅವರು ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರನ್ನು ಬಿಟ್ಟರೆ 70 ವರ್ಷಗಳ ನಂತರ ಸಿಎಂ ಸಿದ್ದರಾಮಯ್ಯ ಜಿಲ್ಲೆಯ ಪ್ರಗತಿಗೆ ಪೂರಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದಾರೆ ಎಂದು ಹೇಳಿದರು.
ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿಯೇ ಮೆಡಿಕಲ್ ಕಾಲೇಜು, ಕೆಎಸ್ಆರ್ಟಿಸಿ ಡಿವಿಜನ್ ಕಚೇರಿ, ಆರ್ಟಿಒ ಕಚೇರಿ, ಪೊಲೀಸ್ ಠಾಣೆಗಳು, ಮಿನಿವಿಧಾನಸೌಧ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಜಿಲ್ಲೆಯಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಾಗಿ ಘೋಷಿಸಲಾಗಿದೆ ಎಂದರು.
Sumalatha V/S Chaluvaraya Swamy: ಯಾರು “ನಾಟಿ”.. ಯಾರು “ಹೈಬ್ರೀಡ್”..? ಏನಿದು ಹೊಸ ಕಥೆ..?
ಜಿಲ್ಲೆಯ ಶಾಸಕರು, ಮತ್ತು ಮುಖಂಡರು ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕೈಜೋಡಿಸಬೇಕು. ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳ ಕುಂದು ಕೊರತೆಗಳಿಗೆ ಸ್ಪಂದಿಸಿ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.