ಪ್ರಜಾಧ್ವನಿ ಯಾತ್ರೆ: ಹಾವೇರಿಯಲ್ಲಿ ಇಂದು ಕಾಂಗ್ರೆಸ್‌ ಶಕ್ತಿ ಪ್ರದರ್ಶನ

By Kannadaprabha NewsFirst Published Jan 19, 2023, 10:59 AM IST
Highlights

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ‘ಪ್ರಜಾಧ್ವನಿ’ ಯಾತ್ರೆ ಮೂಲಕ ಕಾಂಗ್ರೆಸ್‌ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ನಗರದ ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿ ಜ. 19ರಂದು ಬೆಳಗ್ಗೆ 10 ಗಂಟೆಗೆ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹತ್ತಾರು ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ನಾರಾಯಣ ಹೆಗಡೆ

 ಹಾವೇರಿ (ಜ.19) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ‘ಪ್ರಜಾಧ್ವನಿ’ ಯಾತ್ರೆ ಮೂಲಕ ಕಾಂಗ್ರೆಸ್‌ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ನಗರದ ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿ ಜ. 19ರಂದು ಬೆಳಗ್ಗೆ 10 ಗಂಟೆಗೆ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹತ್ತಾರು ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮುಂಬರುವ ವಿಧಾನಸಭೆ ಚುನಾವಣೆ(Assembly election) ಪ್ರಚಾರಕ್ಕೆ ನಾಂದಿ ಹಾಡಿರುವ ಕಾಂಗ್ರೆಸ್‌(Congress), ಸಾಮೂಹಿಕ ನಾಯಕತ್ವದಲ್ಲಿ ಸಂಘಟನೆ ಬಲಪಡಿಸುವತ್ತ ಚಿತ್ತ ನೆಟ್ಟಿದೆ. ಅಲ್ಲದೇ ಆಡಳಿತಾರೂಢ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ, ವೈಫಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್‌ನಿಂದ ಪ್ರಜಾಧ್ವನಿ(Prajadhwani yatre) ಯಾತ್ರೆ ಆಯೋಜಿಸಿದೆ. ಈ ಬಸ್‌ ಯಾತ್ರೆ ಗುರುವಾರ ಹಾವೇರಿಗೆ ಆಗಮಿಸುತ್ತಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿದೆ.

Haveri: ಮದ್ಯ ಮುಕ್ತ ಗ್ರಾಮಕ್ಕಾಗಿ ಪ್ರತಿಭಟನೆ, ಎಣ್ಣೆ ಹೊಡೆಯಲು ಬಂದ ತಾತನ ಬಾಟಲ್ ನೆಲಕ್ಕೆಸೆದು ಮಹಿಳೆಯರ ಆಕ್ರೋಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ(KPCC president DK Shivakumar), ರಾಜ್ಯ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲಾ(Randeep surjewala), ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ(MB Patil), ಬಿ.ಕೆ. ಹರಿಪ್ರಸಾದ್‌, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಪ್ರಮುಖರಾದ ಎಚ್‌.ಕೆ. ಪಾಟೀಲ, ಕೆ.ಎಚ್‌. ಮುನಿಯಪ್ಪ ಇನ್ನಿತರ ಕೈ ನಾಯಕರು ಪಾಲ್ಗೊಳ್ಳುತ್ತಿದ್ದಾರೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಮುಖಂಡರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹತ್ತಾರು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಭರ್ಜರಿ ಸಿದ್ಧತೆ:

ಪ್ರಜಾಧ್ವನಿ ಸಮಾವೇಶಕ್ಕಾಗಿ ಇಲ್ಲಿಯ ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿ ಬೃಹತ್‌ ಪೆಂಡಾಲ್‌ ಹಾಕಲಾಗಿದ್ದು, ವೇದಿಕೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. 20 ಸಾವಿರ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಕಾಂಗ್ರೆಸ್‌ ನಾಯಕರಿಗೆ ಸ್ವಾಗತ ಕೋರುವ ಬ್ಯಾನರ್‌ಗಳು, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ ಆಕಾಂಕ್ಷಿತರು ಬ್ಯಾನರ್‌ಗಳಲ್ಲಿ ತಮ್ಮ ನೆಚ್ಚಿನ ನಾಯಕರ ಫೋಟೋ ಹಾಕಿ ಗಮನ ಸೆಳೆಯುತ್ತಿದ್ದಾರೆ. ನಗರದ ತುಂಬೆಲ್ಲ ಕಾಂಗ್ರೆಸ್‌ ಪ್ರಜಾಧ್ವನಿ ಕಾರ್ಯಕ್ರಮದ ಬ್ಯಾನರ್‌ಗಳು ಕಾಣಿಸುತ್ತಿವೆ. ಜಿಲ್ಲೆಯ ಎಲ್ಲ ತಾಲೂಕುಗಳಿಂದ ಕಾರ್ಯಕರ್ತರು ಸಮಾವೇಶಕ್ಕೆ ಬರಲು ಕಾತರರಾಗಿದ್ದಾರೆ.

ಮುನ್ಸಿಪಲ್‌ ಮೈದಾನಕ್ಕೆ ಸಮಾವೇಶಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಬುಧವಾರ ಪರಿಶೀಲಿಸಿದರು. ವೇದಿಕೆ, ಸಾರ್ವಜನಿಕರಿಗೆ ಆಸನ ವ್ಯವಸ್ಥೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಪ್ರಜಾಧ್ವನಿ ಯಾತ್ರೆ ಮೂಲಕ ಜಿಲ್ಲೆಗೆ ಒಂದು ಸಂದೇಶ ಹೋಗಬೇಕಿದೆ. ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಜನವಿರೋಧಿ ನೀತಿಗಳನ್ನು ಈ ಸಮಾವೇಶದ ಮೂಲಕ ಜನರಿಗೆ ತಿಳಿಸುತ್ತೇವೆ. ಜತೆಗೆ ಕಾಂಗ್ರೆಸ್‌ ಸಿದ್ಧಾಂತಗಳನ್ನು ತಿಳಿಸಿ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಆಶೀರ್ವಾದ ಮಾಡುವಂತೆ ಕೇಳಿಕೊಳ್ಳುತ್ತೇವೆ. ಕಳೆದ ನಾಲ್ಕು ವರ್ಷಗಳ ಬಿಜೆಪಿಯ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆಯೇರಿಕೆ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ರೈತರಿಗೆ ಯಾವ ನೆರವು ನೀಡಿಲ್ಲ. ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಈ ಎಲ್ಲ ವಿಷಯಗಳನ್ನು ತಿಳಿಸುವ ಮೂಲಕ ಸರ್ಕಾರವನ್ನು ಬೆತ್ತಲುಗೊಳಿಸುತ್ತೇವೆ. ಬಿಜೆಪಿ ಸರ್ಕಾರ ಜನರಿಗೆ ಬೇಡವಾಗಿದೆ. ಬಿಜೆಪಿಯ ಪಾಪದ ಕೊಡ ತುಂಬಿದೆ. ಕಾಂಗ್ರೆಸ್‌ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯಾದ್ಯಂತ ಯಾತ್ರೆ ಕೈಗೊಂಡಿದ್ದೇವೆ. ಬಿಜೆಪಿಯ ಭ್ರಷ್ಟಸರ್ಕಾರದ ವಿರುದ್ಧದ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗಲಿ: ವಚನಾನಂದ ಸ್ವಾಮೀಜಿ

ಈಗಾಗಲೇ ಉಚಿತ ವಿದ್ಯುತ್‌ ಮತ್ತು ಗೃಹಲಕ್ಷ್ಮೀ ಎಂಬ ಎರಡು ವಾಗ್ದಾನವನ್ನು ಕಾಂಗ್ರೆಸ್‌ ಮಾಡಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಮೊದಲ ಕ್ಯಾಬಿನೆಟ್‌ನಲ್ಲೇ ಎರಡೂ ಆಶ್ವಾಸನೆಗಳನ್ನು ಜಾರಿಗೆ ತರುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಘೋಷಣೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಇವರಿಗೆ ಅಧಿಕಾರದಲ್ಲಿದ್ದಾಗ ಏನೂ ಮಾಡಲು ಸಾಧ್ಯವಾಗಿಲ್ಲ ಎಂದು ಸಲೀಂ ಅಹ್ಮದ್‌ ವಾಗ್ದಾಳಿ ನಡೆಸಿದರು.

ಮಾಜಿ ಸಚಿವ ಬಸವರಾಜ ಶಿವಣ್ಣನವರ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಮುಖರಾದ ನಾರಾಯಣಸ್ವಾಮಿ, ಪ್ರಕಾಶಗೌಡ ಪಾಟೀಲ ಮೊದಲಾದವರು ಇದ್ದರು.

click me!