
ಬೆಂಗಳೂರು(ನ. 21) ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)ಸರಣಿ ಟ್ವೀಟ್ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿಗಳೆ ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ (Karnataka Floods) ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ. ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಆಡಳಿತ ಪಕ್ಷ ಮತ್ತು ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಆರೋಪಿಸಿದ್ದಾರೆ.
"
ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ.
ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ಸಂಕಟ
ಸುದ್ದಿ ಮಾದ್ಯಮಗಳಲ್ಲಿ ಮಳೆ ಹಾನಿ ಸಂಬಂಧ ಪ್ರಕಟವಾದ ವರದಿಗಳನ್ನು ಶೇರ್ ಮಾಡಿಕೊಂಡಿರುವ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ್ದಾರೆ. ಕರ್ನಾಟಕದಲ್ಲಿ ನವೆಂಬರ್ ಅಕಾಲಿಕ ಮಳೆ ಸಾಕಷ್ಟು ಸಂಕಷ್ಟ ತಂದಿಟ್ಟಿದೆ.
ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬಳ್ಳಾರಿ, ಉತ್ತರ ಕನ್ನಡ, ಹಾವೇರಿ ಸೇರಿದಂತೆ ಎಲ್ಲ ಕಡೆ ಮಳೆಯಾಗುತ್ತಲೇ ಇದೆ. ಅಡಕೆ ಫಸಲು ಕೊಯ್ಯಲು ಸಾಧ್ಯವಾಗುತ್ತಿಲ್ಲ. ಇನ್ನೊಂದು ಕಡೆ ಭತ್ತ ಕಟಾವಿಗೆ ಬಂದಿದ್ದು ಮಳೆ ಸಂಕಷ್ಟ ತಂದಿಟ್ಟಿದೆ.
ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಬಿಜೆಪಿ ಪಕ್ಷದ ಪ್ರಮುಖ ನಾಯಕರ ನೇತೃತ್ವದಲ್ಲಿ ರಾಜ್ಯಾದ್ಯಂತ ಜನಸ್ವರಾಜ್ ಯಾತ್ರೆ ನಡೆಸುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವುದು ಗುರಿ ಎಂದು ನಾಯಕರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.