
ಬೆಳಗಾವಿ(ಜೂ.29): ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದು ನಿರಂತರವಾಗಿ ಪಕ್ಷದ ಹಿರಿಯ ಮುಖಂಡರು, ಆರ್ಎಸ್ಎಸ್ ಮುಖಂಡರು, ಮಠಾಧಿಪತಿಗಳನ್ನು ಭೇಟಿಯಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೋರಾಟ ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಅವರ ಆಪ್ತರು ಖಚಿತಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಭಾನುವಾರದಂದು ಸಹೋದರರಾದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ರಮೇಶ್ ಜಾರಕಿಹೊಳಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದರು. ಈ ವೇಳೆ ಸಹೋದರರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಆತುರದ ನಿರ್ಧಾರ ತೆಗೆದುಕೊಳ್ಳದೇ ಕಾಯ್ದು ನೋಡೋಣ. ಮತ್ತೆ ಮಂತ್ರಿಯಾಗುತ್ತಿ, ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ. ಈಗಾಗಲೇ ವರಿಷ್ಠರು ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಮನವರಿಕೆ ಮಾಡೋಣ ಎಂಬ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ?:
ಸೋಮವಾರ ರಾತ್ರಿ ಬೆಂಗಳೂರಿನ ತಮ್ಮ ನಿವಾಸ ತಲುಪಿರುವ ರಮೇಶ ಜಾರಕಿಹೊಳಿ ಜೂ.29ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗುವ ಕುರಿತು ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ನಂತರ ಮತ್ತೆ ಜು.1ರಂದು ಮತ್ತೆ ಗೋಕಾಕಗೆ ರಮೇಶ ಜಾರಕಿಹೊಳಿ ಮರಳಲಿದ್ದಾರೆ. ಅಲ್ಲಿ ಸಹೋದರರಾದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ, ಅಳಿಯ ಅಂಬಿರಾವ್ ಪಾಟೀಲ ಅವರೊಂದಿಗೆ ಜು.3 ಅಥವಾ 4ರಂದು ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ಪ್ರಹಸನಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.