ಎಲ್ಲರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಡಿಕೆಶಿಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್‌

Published : Nov 23, 2025, 11:57 PM IST
Satish Jarkiholi

ಸಾರಾಂಶ

ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನೂ ಕೂಡ ಒಪ್ಪುವುದಿಲ್ಲ. ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಟಾಂಗ್‌ ನೀಡಿದ್ದಾರೆ.

ಬೆಳಗಾವಿ (ನ.23): ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನೂ ಕೂಡ ಒಪ್ಪುವುದಿಲ್ಲ. ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ತಪ್ಪು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್‌ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ದುಡಿದಿದ್ದಾರೆ. 1960ರಲ್ಲಿ ತೇನ್ ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲಾ ಪತ್ರಿಕೆಗಳು ತೇನ್‌ಸಿಂಗ್ ಹಿಮಾಲಯ ಏರಿದರು ಎಂದು ಬರೆದರು. ಅವರ ಜೊತೆಗೆ ಇನ್ನೂ 14 ಜನರಿದ್ದರು. ಅವರ ಹೆಸರು ಬರಲಿಲ್ಲ. ಇದು ಹಾಗೆಯೇ ಆಗಿದೆ ಎಂದು ಹೇಳಿದರು.

ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಮೊದಲ‌ ಬಾರಿಗೆ ಗೆದ್ದವರು ಸೇರಿ ಬಹಳಷ್ಟು ಶಾಸಕರಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಬಂದಿದೆ. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇರುತ್ತದೆ. ಅದರ ಶ್ರೇಯಸ್ಸು ಕೆಲವೇ ಜನರು ತೆಗೆದುಕೊಳ್ಳುವುದನ್ನು ಒಪ್ಪುವುದಿಲ್ಲ. ಸ್ವಾಭಾವಿಕವಾಗಿ ಎಲ್ಲರೂ ಹಕ್ಕು ಮಂಡಿಸುತ್ತಾರೆ. ಎಲ್ಲರಿಗೂ ಅಧಿಕಾರ ಸಿಗಬೇಕು. ಡಾ.ಜಿ.ಪರಮೇಶ್ವರ್‌ 7 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರು ಬಹಳಷ್ಟು ಕಾರ್ಯಕ್ರಮ‌ ಮಾಡಿದ್ದರಿಂದ ನಮ್ಮ‌ ಸರ್ಕಾರ ಬಂತು. ಆ ರೀತಿ ಆಗಬೇಕು ಎಂಬುದು ನಮ್ಮ ಭಾವನೆ ಎಂದು ಪ್ರತಿಪಾದಿಸಿದರು.

ನಾನು ಸಿಎಂ ಸ್ಥಾನದ ಆಕಾಂಕ್ಷಿರ ಎಂದು ಪರಮೇಶ್ವರ್‌ ಅವರು ಮುಂಚೆಯೂ ಕೂಡ ಹೇಳಿದ್ದಾರೆ. ಅದರಲ್ಲೇನು ತಪ್ಪಿದೆ. ನಾನೂ ಕೂಡ ಆಕಾಂಕ್ಷಿ ಆಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕು ಎಂದು ಹೇಳಿದರು. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನವೆಂಬರ್ ಕ್ರಾಂತಿ ಹೇಳಿಕೆಗೆ ಪ್ರತಿಕ್ರಿಯಿಸಿ ಯಾವುದೇ ಕ್ರಾಂತಿ ಉದ್ಭವ ಆಗುವುದಿಲ್ಲ.‌ ಯಥಾಸ್ಥಿತಿ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದರು. ಡಿ.ಕೆ. ಶಿವಕುಮಾರ್‌ ಜೈಲಿಗೆ ಹೋಗಿ ಶಾಸಕರನ್ನು ಭೇಟಿಯಾದ ಕುರಿತು ಮಾತನಾಡಿ, ಅವರು ನಮ್ಮ ಪಕ್ಷದ ಶಾಸಕರು ಹಾಗಾಗಿ, ಭೇಟಿಯಾಗಿ ಬಂದಿದ್ದಾರೆ.

ಪಕ್ಷಕ್ಕೆ ಒಂದು ಲಿಮಿಟ್ ಇರುತ್ತದೆ

ಹಿಂದೆಯೂ ಒಂದು ಬಾರಿ ಭೇಟಿಯಾಗಿದ್ದರು. ಇದರಲ್ಲಿ ಅಂಡರ್ ಕರೆಂಟ್ ಶಾಕ್ ಏನಿಲ್ಲ. ಎಲ್ಲವೂ ಸರಿ ಇದೆ. ನಮ್ಮದೂ ಕರೆಂಟ್ ಏನಿಲ್ಲ. ಎಲ್ಲವನ್ನು ರಾಷ್ಟ್ರೀಯ ಅಧ್ಯಕ್ಷರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದರು. ಡಿ‌.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಾಗ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, ಪಕ್ಷಕ್ಕೆ ಒಂದು ಲಿಮಿಟ್ ಇರುತ್ತದೆ. ಯಾವುದೇ ಹುದ್ದೆ ಇದ್ದರೂ ಬದಲಾವಣೆ ಮಾಡುವ ಕಾಲ ಬಂದೇ ಬರುತ್ತದೆ. ಇವತ್ತು ಬರಬಹುದು, ಒಂದು ವರ್ಷ ಬಿಟ್ಟು ಬರಬಹುದು. ಯಾವುದೇ ಸಂದರ್ಭದಲ್ಲಿ ಬರಬಹುದು ಎಂದು ಉತ್ತರಿಸಿದ ಅವರು, ಸಿಎಂ ರೇಸ್‌ನಲ್ಲಿ ತಾವು ಇದ್ದಿರಾ ಎಂಬ ಪ್ರಶ್ನೆಗೆ, ಅದನ್ನು ಕೇಳಲು ಹೋಗಬೇಡಿ. ಹೇಳುವ ಅವಶ್ಯಕತೆಯೂ‌ ಈಗಿಲ್ಲ ಎಂದರು.

ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಏನೇ ಮಾತುಕತೆ ಆಗಿದ್ದರೂ ಅದು ದೆಹಲಿಯಲ್ಲಿ ಆಗಿರುತ್ತದೆ. ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನಮ್ಮ ಉನ್ನತ ಮಟ್ಟದ ನಾಯಕರು ಯಾರಾದರೂ ಕರೆದರೆ ಹೋಗುತ್ತೇವೆ. ಇಲ್ಲದಿದ್ದರೆ ಬೆಳಗಾವಿಯಲ್ಲಿ ಇರುತ್ತೇವೆ. ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲೇ ಇದ್ದಾರೆ. ಇಬ್ಬರು ಮುಖಂಡರ ಜೊತೆಗೆ ನಿನ್ನೆ ಸಭೆ ಮಾಡಿದ್ದಾರೆ. ಒಂದು ಇತ್ಯರ್ಥಕ್ಕೆ ಬರುತ್ತದೆ ಎನ್ನುವ ಆಶಾಭಾವನೆ ಇದೆ.
- ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ