
ಬೆಳಗಾವಿ (ಮೇ 31): ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಸತೀಶ್ ಜಾರಕಿಹೊಳಿ ಅವರ ಹೆಸರಿಗೆ ಮಸಿ ಬಳಿಯುವ ಹಾಗೂ ಸಾರ್ವಜನಿಕವಾಗಿ ದ್ವೇಷ ಹುಟ್ಟುಹಾಕುವ ಉದ್ದೇಶದಿಂದ ನಕಲಿ ಪೋಸ್ಟ್ ಹಂಚಿಕೊಂಡವರ ವಿರುದ್ಧ ಈಗ ಬೆಳಗಾವಿ ಜಿಲ್ಲಾ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಕರುನಾಡ ಕುರುಬ ಗೌಡ್ರು' ಎಂಬ ಹೆಸರಿನ ಫೇಸ್ಬುಕ್ ಪುಟದಲ್ಲಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಗಂಭೀರವಾದ ಮತ್ತು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಲಾಗಿತ್ತು. 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಅವರ ಆಪ್ತ ಸತೀಶ್ ಜಾರಕಿಹೊಳಿ ಅವರೇ ಚೂರಿ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಈಗಾಗಲೇ 37 ಜನ ಶಾಸಕರ ಸಹಿ ಸಂಗ್ರಹಿಸಿದ್ದಾರೆ' ಎಂಬ ಒಕ್ಕಣೆಯೊಂದಿಗೆ ಪೋಸ್ಟ್ ಮಾಡಲಾಗಿತ್ತು. ಇದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.
ಸತೀಶ್ ಜಾರಕಿಹೊಳಿ ಅವರ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಅವರ ಆಪ್ತರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರಾದ ರಾಜಶೇಖರ ತಳವಾರ ಅವರು ಬೆಳಗಾವಿ ಸಿಇಎನ್ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪೋಸ್ಟ್ ಕೇವಲ ಸುಳ್ಳು ಮಾಹಿತಿಯಷ್ಟೇ ಅಲ್ಲದೆ, ಎರಡು ಸಮುದಾಯಗಳ ನಡುವೆ ವಿಷಬೀಜ ಬಿತ್ತುವ ಹಾಗೂ ಸಾರ್ವಜನಿಕವಾಗಿ ದೊಂಬಿ ಎಬ್ಬಿಸುವ ಹುನ್ನಾರವನ್ನು ಹೊಂದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ದೂರನ್ನು ಸ್ವೀಕರಿಸಿರುವ ಬೆಳಗಾವಿ ಸಿಇಎನ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ನಕಲಿ ಫೇಸ್ಬುಕ್ ಖಾತೆಯ ಹಿಂದಿರುವ ವ್ಯಕ್ತಿಗಳು ಯಾರು? ಇದರ ಹಿಂದಿರುವ ಉದ್ದೇಶವೇನು? ಎಂಬ ಬಗ್ಗೆ ತಾಂತ್ರಿಕ ತನಿಖೆ ಆರಂಭಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಅಥವಾ ವೈಯಕ್ತಿಕ ದ್ವೇಷಕ್ಕಾಗಿ ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಅಪರಾಧವಾಗಿದ್ದು, ಸಾರ್ವಜನಿಕರು ಇಂತಹ ದಾರಿ ತಪ್ಪಿಸುವ ಮಾಹಿತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.