
ಬೆಂಗಳೂರು (ಏ.17): ರಾಜ್ಯ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ವದಂತಿಗಳ ನಡುವೆಯೇ, ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಭೇಟಿಯಲ್ಲಿ ರಾಜಕೀಯ ಅಜೆಂಡಾ ಮಾತ್ರವಲ್ಲದೆ, ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯೂ ಚರ್ಚಿಸಲಾಗಿದೆ.
ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪ್ರಮುಖವಾಗಿ ಅಬ್ದುಲ್ ಜಬ್ಬಾರ್ ಅವರ ಅಮಾನತು ವಿಚಾರವನ್ನು ಪ್ರಸ್ತಾಪಿಸಿದ್ದಾರೆ. 'ಅಬ್ದುಲ್ ಜಬ್ಬಾರ್ ಅವರ ಅಮಾನತನ್ನು ವಾಪಸ್ ಪಡೆಯುವಂತೆ ನಾನು ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ. ಅಲ್ಪಸಂಖ್ಯಾತರು ಮತ್ತು ದಲಿತರು ನಮ್ಮ ಪ್ರಮುಖ ಮತದಾರರು. ಪಕ್ಷದ ಹಿತದೃಷ್ಟಿಯಿಂದ ಕೆಲವೊಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಸರಿಪಡಿಸಬೇಕಾಗುತ್ತದೆ. ಹೈಕಮಾಂಡ್ ಒಪ್ಪಿಗೆ ಪಡೆದು ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಸೂಚಿಸಿದ್ದೇನೆ,' ಎಂದು ತಿಳಿಸಿದರು. ಈ ಮೂಲಕ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಹೋಗಲಾಡಿಸಲು 'ಡ್ಯಾಮೇಜ್ ಕಂಟ್ರೋಲ್' ಮಾಡುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿತ್ತು ಎಂಬುದು ಸ್ಪಷ್ಟವಾಗಿದೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರೆ ಎಂಬ ಕೆ.ಎನ್. ರಾಜಣ್ಣ ಅವರ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ರಾಜತಾಂತ್ರಿಕವಾಗಿ ಉತ್ತರಿಸಿದರು. 'ರಾಜಣ್ಣ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿಗಳು ಅಸಹಾಯಕರು ಎಂದು ಅವರು ಎಲ್ಲಿಯೂ ನೇರವಾಗಿ ಹೇಳಿಲ್ಲ. ಪಕ್ಷದಲ್ಲಿ ಎಲ್ಲರಿಗೂ ಸ್ಥಾನಮಾನ ನೀಡಲು ಸಾಧ್ಯವಿಲ್ಲ, ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ' ಎಂದರು.
ಸತೀಶ್ ಜಾರಕಿಹೊಳಿ ಅವರೊಂದಿಗಿನ ಭೇಟಿಯ ಬಗ್ಗೆ ಮಾಹಿತಿ ನೀಡಿದ ಡಿ.ಕೆ. ಶಿವಕುಮಾರ್, ಕೇವಲ ರಾಜಕಾರಣ ಮಾತ್ರವಲ್ಲದೆ ಆಡಳಿತಾತ್ಮಕ ವಿಚಾರಗಳ ಬಗ್ಗೆಯೂ ಚರ್ಚಿಸಿದ್ದಾಗಿ ತಿಳಿಸಿದರು. 'ನೆಲಮಂಗಲ ಭಾಗದಲ್ಲಿ ವಾಹನ ಸಂಚಾರ ದಟ್ಟಣೆ ವಿಪರೀತವಾಗುತ್ತಿದೆ. ಅರ್ಧ-ಮುಕ್ಕಾಲು ಗಂಟೆ ಟ್ರಾಫಿಕ್ ಜಾಮ್ ಆಗುತ್ತಿದ್ದು, ಇದನ್ನು ತಪ್ಪಿಸಲು ಬೆಂಗಳೂರು ಸಿಟಿಗೆ ಬರುವ ವಾಹನಗಳನ್ನು ಹೇಗೆ ನಿಯಂತ್ರಿಸಬಹುದು ಎಂಬ ಬಗ್ಗೆ ಚರ್ಚಿಸಿದ್ದೇವೆ. ನಮ್ಮ ಬ್ಯುಸಿನೆಸ್ ಕಾರಿಡಾರ್ ಯೋಜನೆ ಹಾಗೂ ರಾಜ್ಯದ ಒಟ್ಟಾರೆ ಅಭಿವೃದ್ಧಿಯ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ' ಎಂದು ಹೇಳಿದರು.
ಒಟ್ಟಾರೆಯಾಗಿ, ಈ ಭೇಟಿಯು ಮೇಲ್ನೋಟಕ್ಕೆ ಅಭಿವೃದ್ಧಿ ಕಾಮಗಾರಿಗಳ ಚರ್ಚೆಯಂತೆ ಕಂಡರೂ, ಆಂತರಿಕವಾಗಿ ಪಕ್ಷದೊಳಗೆ ನಡೆಯುತ್ತಿರುವ ಕಿತ್ತಾಟಗಳನ್ನು ಶಮನಗೊಳಿಸುವ ಪ್ರಯತ್ನವೆಂದೇ ವಿಶ್ಲೇಷಿಸಲಾಗುತ್ತಿದೆ. ಕೆ.ಎನ್. ರಾಜಣ್ಣ ಅವರ ಆಕ್ರೋಶದ ನುಡಿಗಳ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರನ್ನೂ ಆಗಿರುವ ಡಿಕೆಶಿ ಅವರನ್ನು ಭೇಟಿಯಾಗಿರುವುದು ಹೈಕಮಾಂಡ್ ಸೂಚನೆಯೋ ಅಥವಾ ಸ್ಥಳೀಯ ಹೊಂದಾಣಿಕೆಯೋ ಎಂಬ ಚರ್ಚೆ ಈಗ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.