
ನವದೆಹಲಿ/ ಬೆಂಗಳೂರು, (ಡಿ.18): ಬಹುನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಬಿಬಿಎಂಪಿ ಚುನಾವಣೆಗೆ ತಡೆ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ, ಚುನಾವಣೆ ಪ್ರಕ್ರಿಯೆಗೆ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
6 ವಾರಗಳಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಬಿಬಿಎಂಪಿ ಚುನಾವಣೆ ಭವಿಷ್ಯ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!
ಬಿಬಿಎಂಪಿಗೆ ಹೊಸ ರೂಪ ನೀಡಲಾಗುತ್ತಿದೆ. ಅಲ್ಲದೇ 1976ರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಬೆಂಗಳೂರಿನಲ್ಲಿ ವಾರ್ಡ್ ಗಳ ಸಂಖ್ಯೆ ಹೆಚ್ಚು ಮಾಡಲಾಗುತ್ತಿದೆ. 198 ವಾರ್ಡ್ ಗಳಿಂದ 243 ವಾರ್ಡ್ ಗಳಿಗೆ ಹೆಚ್ಚಿಸಲಾಗುತ್ತದೆ. ಇದಕ್ಕೆ ಸಮಯ ಬೇಕಿದ್ದು ಹೈಕೋರ್ಟ್ ಆದೇಶದಂತೆ 6 ವಾರಗಳಲ್ಲಿ ಚುನಾವಣಾ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿದರು.
ದೂರುದಾರ ಮಾಜಿ ಕಾರ್ಪೋರೇಟರ್ ಶಿವರಾಜ್ ಮತ್ತು ಇತರರು ಕೇವಿಯೇಟ್ ಸಲ್ಲಿಸಿದ್ದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಗೆ ಡಿಸೆಂಬರ್ 19 ರಿಂದ ಕ್ರಿಸ್ ಮಸ್ ರಜೆ ಶುರುವಾಗಲಿದ್ದು, ಬಳಿಕ ವಿಸ್ತೃತ ವಿಚಾರಣೆ ನಡೆಸಲಿದೆ.
ಒಟ್ಟಿನಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.