
ಮೈಸೂರು (ಫೆ.02): ಗೆಲ್ಲುವ ಮಾನದಂಡ ಆಧರಿಸಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಬಿಜೆಪಿ ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದರು. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ಗೆ ತಿಳಿಸಿದ್ದೇನೆ. ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ನಾನು ಎಂದೂ ಹೋಗಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಲೋಕಸಭಾ ಕ್ಷೇತ್ರಗಳಿಗೆ ನನ್ನನ್ನು ಕ್ಲಸ್ಟರ್ ಮಾಡಿದ್ದಾರೆ. ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮಾತ್ರ ನನ್ನದು.
ಈ ಬಾರಿಯ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟ 400 ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದೆ ಎಂದರು. ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಾಗ ಎಲ್ಲಾ ಅಂಶವನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುತ್ತದೆ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ಬದ್ಧರಾಗಿರುತ್ತೇವೆ. ಯಾರಿಗೆ ಟಿಕೆಟ್ ದೊರೆತರೂ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಗೆಲ್ಲಿಸುತ್ತೇವೆ ಎಂದು ಅವರು ಹೇಳಿದರು.
ಮೋದಿ ಮತ್ತೆ ಪ್ರಧಾನಿಯಾಗಿಸಲು 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ: ಬಿ.ವೈ.ವಿಜಯೇಂದ್ರ
ವೇಣುಗೋಪಾಲಸ್ವಾಮಿ ದೇವಸ್ಥಾನ ರಾಜಗೋಪುರ ನಿರ್ಮಾಣಕ್ಕೆ ಗುದ್ದಲಿಪೂಜೆ: ನಗರದ ತ್ಯಾಗರಾಜ ರಸ್ತೆಯಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ರಾಜಗೋಪುರ ಹಾಗೂ ಶ್ರೀ ಚಾಮರಾಜ ಒಡೆಯರ್ ಭವನ ನಿರ್ಮಾಣಕ್ಕೆ ಉದ್ಯಮಿ ಎಂ. ಜಗನ್ನಾಥ ಶೆಣೈ ಅವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು. ನಂತರ ಜಗನ್ನಾಥ ಶೆಣೈ ಮಾತನಾಡಿ, ಆದಷ್ಟು ಬೇಗ ರಾಜಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕು. ರಾಜಗೋಪುರ ನಿರ್ಮಾಣಕ್ಕೆ ನನ್ನ ಕೈಲಾದ ಸೇವೆ ನೀಡುವುದಾಗಿ ಹೇಳಿದರು.
ಮಾಜಿ ಸಚಿವ ಎಸ್.ಎ. ರಾಮದಾಸ್ ಮಾತನಾಡಿ, ‘ಗೋಪುರ ನಿರ್ಮಾಣ ಕಾರ್ಯಕ್ಕೆ ಅವಶ್ಯವಿರುವ ಹಣಕಾಸು ಕ್ರೋಢೀಕರಣಕ್ಕೆ ವೇಣುಗೋಪಾಲ ಸ್ವಾಮಿಯೇ ದಯೆ ತೋರುತ್ತಾನೆ. ಇದರಿಂದ ಆದಷ್ಟು ಬೇಗ ಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಕ್ಕೆ ಮೈಸೂರು ಮಹಾರಾಜರು ಸ್ಮರಣೀಯ ಕೊಡುಗೆ ನೀಡಿದ್ದಾರೆ. ದೂರದೃಷ್ಟಿ ಇಟ್ಟುಕೊಂಡು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಹತ್ತು ಹಲವು ಕೊಡುಗೆ ನೀಡಿದ ಮೈಸೂರು ಮಹಾರಾಜರು ಎಂದೆಂದೂ ನೆನಪಾಗಿ ಉಳಿಯುತ್ತಾರೆ ಎಂದು ಅವರು ಸ್ಮರಿಸಿದರು.
ನುಡಿದಂತೆ ನಡೆಯದ ಬಜೆಟ್ ಘೋಷಣೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ: ಸಚಿವ ಮಹದೇವಪ್ಪ
ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಗೋಪುರವು ಸುಮಾರು 10 ಅಡಿ ಇದೆ. ಆದ ಕಾರಣ ಈ ಗೋಪುರವನ್ನು ನೆಲಸಮಗೊಳಿಸಿ 25 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ರಾಜಗೋಪುರ ನಿರ್ಮಿಸಲಾಗುತ್ತಿದೆ. ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಶ್ರೀಧರರಾಜ ಅರಸ್, ವರ್ಚಸ್ವಿ ಸಿದ್ದಲಿಂಗರಾಜೇ ಅರಸ್, ಖಜಾಂಚಿ ಎಂ.ಆರ್. ನಾಗಲಲಿತ, ಟ್ರಸ್ಟಿಗಳಾದ ಮದನಗೋಪಾಲ ರಾಜೇ ಅರಸ್, ಸ್ವರೂಪ ಆನಂದ, ದತ್ತ ಅರಸ್, ಎಚ್.ಎಸ್. ಮಹೇಶ್ವರಿ, ನಗರ ಪಾಲಿಕೆ ಮಾಜಿ ಸದಸ್ಯ ಬಿ.ವಿ. ಮಂಜುನಾಥ್, ಚುಟುಕು ಸಾಹಿತಿ ಡಾ.ಎಂ.ಜಿ.ಆರ್. ಅರಸ್ ಮೊದಲಾದವರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.