ಸೆ.2ರಂದು ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ

Published : Aug 19, 2022, 03:24 PM IST
 ಸೆ.2ರಂದು ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ

ಸಾರಾಂಶ

ಸೆ.2ರಂದು ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗ ನಗರಕ್ಕೆ ಭೇಟಿ ಸರ್ಕಾರಿ ಇಲಾಖೆಗಳ ವಿವಿಧ ನೂತನ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಲಿರುವ ಸಿಎಂ  ಡಿಸಿ ಡಾ. ಆರ್‌.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಜಿಲ್ಲೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ

ಶಿವಮೊಗ್ಗ (ಆ.19) : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ.2ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್‌.ಈಶ್ವರಪ್ಪ ಅವರು ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳುತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.

ಸಿದ್ದರಾಮಯ್ಯ ಎಂಬ ಕೆಟ್ಟಪದ ಕೇಳಿ ಸಾಕಾಗಿ ಹೋಗಿದೆ: ಈಶ್ವರಪ್ಪ

ಲೋಕಾರ್ಪಣೆಗೆ ಸಿದ್ಧವಾಗಿರುವ ಕಟ್ಟಡಗಳು, ಸಮುದಾಯ ಭವನಗಳು, ಶಾಲೆ- ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆ.25 ರೊಳಗೆ ಜಿಲ್ಲಾಧಿಕಾರಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಿಂದ ನೀಡಲಾಗುವ ಸವಲತ್ತುಗಳಿಗೆ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸೌಲಭ್ಯಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸೆ.2ರಂದು ಬೆಳಗ್ಗೆ 11 ಗಂಟೆಗೆ ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ನಡೆಯಲಿರುವ ಭವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರೊಂದಿಗೆ ಸಂಬಂಧಿಸಿದ ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳು ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿ ಅವರು ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಚಟುವಟಿಕೆಗಳಿಗೆ ತಲಾ .52 ಕೋಟಿ ಬಿಡುಗಡೆಗೊಳಿಸಿ, ಅವಶ್ಯಕ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಈಗಾಗಲೇ ಕೆಲವು ಕಾರ್ಯಕ್ರಮಗಳನ್ನು ಆರಂಭಗೊಳಿಸಲಾಗಿವೆ. ಇನ್ನೂ ಕೆಲವು ಉದ್ಘಾಟನೆಗೆ ಸಿದ್ಧವಾಗಿವೆ ಎಂದರು.

ವಿಶೇಷವಾಗಿ ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ್ಮಾರ್ಚ್‌ಸಿಟಿ ಕಾಮಗಾರಿಗಳು, ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಕಾರ್ಯಕ್ರಮಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಳ್ಳಲಿವೆ. ಅದಕ್ಕಾಗಿ ಆಹ್ವಾನ ಪತ್ರಿಕೆಯೊಂದಿಗೆ ಇಲಾಖೆ ಕಾರ್ಯಕ್ರಮಗಳ ಎಲ್ಲ ವಿವರಗಳನ್ನು ಹೊಂದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

ಕಾರ್ಯಕ್ರಮಗಳಲ್ಲಿ ಜಿಲ್ಲೆ ಎಲ್ಲ ಸಮುದಾಯದ ಮುಖಂಡರು, ಗಣ್ಯರು, ಹಿರಿಯರನ್ನು ಆಹ್ವಾನಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು ಆಗಸ್ಟ್‌ 25 ರೊಳಗೆ ಮಾಹಿತಿಯನ್ನು ಒದಗಿಸಲು ಸೂಚಿಸಿರುವುದಾಗಿ ಅವರು ನುಡಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೇಪ್ರಸಾದ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎನ್‌.ಡಿ.ಪ್ರಕಾಶ್‌, ಅಪರ ಜಿಲ್ಲಾಧಿಕಾರಿ ಡಾ

ನಾಗೇಂದ್ರ ಎಫ್‌. ಹೊನ್ನಳ್ಳಿ, ಮೇಯರ್‌ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ನಾಗರಾಜ್‌, ಮೂಕಪ್ಪ ಕರಭೀಮಣ್ಣನವರ್‌, ಚಿದಾನಂದ ಎಸ್‌. ವಟಾರೆ, ಮಾಯಣ್ಣಗೌಡ, ದೊಡ್ಡಗೌಡರ್‌, ಶ್ರೀಧರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ