ಬೆಂಗಳೂರು (ಜು.02): ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಿದ ಸರ್ಕಾರ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಆಲೋಚಿಸಿದೆ. ಬುಧವಾರ ನಂದಿಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ.
ಪ್ರತಿಪಕ್ಷಗಳ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಸರ್ಕಾರ ಬದಲಾವಣೆ ಮಾಡಿತ್ತು. ಇದರ ಬಳಿಕ ತುಮಕೂರು ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರಿಸಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿ ಕೆಲವರು ಒತ್ತಾಯಿಸಿದರು. ಆದರೆ, ಸರ್ಕಾರ ಇದೀಗ ಬೆಂ.ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾಯಿಸುವ ಸಂಬಂಧ ಬುಧವಾರ ನಡೆಯುವ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಿದೆ.
ಅಧಿವೇಶನಕ್ಕೆ ದಿನಾಂಕ ನಿಗದಿ: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸಮಾವೇಶಗೊಳಿಸಲು ಬುಧವಾರದ ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿಪಡಿಸುವ ಸಾಧ್ಯತೆ ಇದೆ. ಅಧಿವೇಶನವನ್ನು ಯಾವಾಗ ಆರಂಭಿಸಬೇಕು, ಎಷ್ಟು ದಿನ ನಡೆಸಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗೆ ಭರ್ಜರಿ ಕೊಡುಗೆ: ನಂದಿಬೆಟ್ಟದಲ್ಲಿ ಬುಧವಾರ ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 456 ಕೋಟಿ ರು.ಗಳ ಹಲವು ಮಹತ್ವದ ಯೋಜನೆಗಳನ್ನು ನೀಡುವ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ. ಜೊತೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಸಂಪುಟ ಸಭೆಯಲ್ಲಿ ನಿರ್ಧಾರವಾಗುವ ನಿರೀಕ್ಷೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.