
ಸೇಡಂ(ಆ.27): ನ್ಯಾಯಯುತವಾಗಿ ದಲಿತರ, ಹಿಂದುಳಿದವರ ವಿವಿಧ ಯೋಜನೆಗಳಿಗಾಗಿ ಮೀಸಲಾಗಿರುವ ಹಣವನ್ನು ಗ್ಯಾರಂಟಿ ಯೋಜನೆಗಳನ್ನು ಪೂರೈಸುವುದಕ್ಕಾಗಿ ಹಾಗೂ ಅನ್ಯ ಯೋಜನೆಗಳಿಗೆ ನೀಡುತ್ತಿರುವ ಕಾಂಗ್ರೆಸ್ನ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ಇದು ದಲಿತ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ಸರಕಾರವಾಗಿದೆ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಬಳಕೆ ಆಗಬೇಕಾದ ಹಣವನ್ನು ಕಾಂಗ್ರೆಸ್ ನುಂಗಿಹಾಕಿದೆ. ಅದೇರೀತಿ ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಬಳಸಬೇಕಾದ ಎಸ್ಇಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ ದೊಡ್ಡ ಪ್ರಮಾಣದಲ್ಲಿ ಎರಡು ಸಮುದಾಯಗಳಿಗೆ ಈ ಸರ್ಕಾರ ಅನ್ಯಾಯ ಮಾಡಿದೆ. ಮಾತು ಎತ್ತಿದರೆ ನಾವು ದಲಿತ ಪರ, ಹಿಂದುಳಿದವರ ಪರ ಎಂದು ಹೇಳುವ ಕಾಂಗ್ರೆಸ್ ಸರ್ಕಾರವು ದಲಿತರ ಹೆಸರನ್ನು ಹೇಳುತ್ತ ದಲಿತರ ಹಣವನ್ನು ನುಂಗುತ್ತಿರುವ ಭ್ರಷ್ಟ ಸರ್ಕಾರವಾಗಿದೆ ಎಂದು ಆರೋಪಿಸಿದ್ದಾರೆ.
ಕೋಟಿ ಕೋಟಿ ಒಡೆಯನಾದರೂ ಮೀಸಲಾತಿಯಡಿ ಸಿಎ ನಿವೇಶನ ಪಡೆದ ಖರ್ಗೆ ಪುತ್ರ!
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಎಸ್.ಇ/ಎಸ್.ಟಿ ಸಮುದಾಯಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಇರುವ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು ಸಹ ಈ ಸರ್ಕಾರ ನೇಮಕ ಮಾಡಿಲ್ಲ ಎಂದು ದೂರಿದ್ದಾರೆ.
ರಾಜ್ಯದಲ್ಲಿ ಇಲ್ಲದಂತಾದ ದಲಿತರ ರಕ್ಷಣೆ:
ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬಂದಾದ ಮೇಲೆ ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ. ಅಧಿಕಾರಕ್ಕಾಗಿ ದಲಿತರ ಹೆಸರು ಬಳಸುವ ಕಾಂಗ್ರೆಸ್ಸಿಗರಿಗೆ ದಲಿತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂಬುದು ಅನೇಕ ಘಟನೆಗಳಿಂದ ಸಾಬೀತಾಗಿದೆ ಎಂದು ತೇಲ್ಕೂರ್ ದೂರಿದ್ದಾರೆ.
ರಾಜ್ಯದ ನಾನಾ ಭಾಗಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಕೆವಲ ದಲಿತ ಸಮುದಾಯ ಮಾತ್ರವಲ್ಲ ಕಾಂಗ್ರೆಸ್ ಸರ್ಕಾರದಲ್ಲಿ ಒಟ್ಟಾರೆಯಾಗಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ತೇಲ್ಕೂರ್ ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.