ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ಸಚಿವ ಎಂ.ಬಿ.ಪಾಟೀಲ್‌

Published : May 23, 2023, 04:09 AM IST
ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ಸಚಿವ ಎಂ.ಬಿ.ಪಾಟೀಲ್‌

ಸಾರಾಂಶ

ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಎಐಸಿಸಿ ಮಟ್ಟದಲ್ಲಿ ಯಾವುದೇ ಮಾತುಕತೆ ನಡೆದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. 

ಮೈಸೂರು (ಮೇ.23): ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಎಐಸಿಸಿ ಮಟ್ಟದಲ್ಲಿ ಯಾವುದೇ ಮಾತುಕತೆ ನಡೆದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿದ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ಹಂಚಿಕೆ ಸುದ್ದಿಗಳೆಲ್ಲ ಸುಳ್ಳು ಎಂಬ ಸಂದೇಶ ರವಾನಿಸಿದರು. ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕವೂ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆಯೇ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್‌ ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಎಲ್ಲ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪೊಲೀಸ್‌, ಆರೋಗ್ಯ, ನೀರಾವರಿ ಹಾಗೂ ಇತರೆ ಇಲಾಖೆಯಲ್ಲಿ ನಡೆದಿರುವ ಹಗರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ನೊಂದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದರು. ಇದೇ ವೇಳೆ ಗ್ಯಾರೆಂಟಿ ಕಾರ್ಡ್‌ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ಮೊದಲ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ವಿಚಾರ ಚರ್ಚೆ ಆಗಿದ್ದು, ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು. ಜತೆಗೆ, ಗ್ಯಾರೆಂಟಿ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ತಿಳಿಸಿದರು.

ಸರ್ಕಾರ ಪಿಎಸ್‌ಐ ಹಗರಣ ತನಿಖೆ ನಡೆ​ಸ​ಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

ಗುರುವಾರ, ಶುಕ್ರವಾರ ಖಾತೆ ಹಂಚಿಕೆ: ಮುಂದಿನ ಗುರುವಾರ ಅಥವಾ ಶುಕ್ರವಾರ ಮುಖ್ಯಮಂತ್ರಿಗಳು ಖಾತೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಯಾರಿಗೆ ಯಾವ ಖಾತೆ ನೀಡಬೇಕೆಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟವಿಚಾರ. ಇಂತಹ ಖಾತೆ ಇದ್ದರೆ ಜನರ ಸೇವೆ ಮಾಡಲು ಹೆಚ್ಚು ಅನುಕೂಲ ಎಂಬ ಮನದಾಳದ ಮಾತನ್ನು ಈಗಾಗಲೇ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಸ್ಪೀಕರ ಯಾರಾಗುತ್ತಾರೆ ಎಂಬುದು ಇದುವರೆಗೂ ಚರ್ಚೆಯಾಗಿಲ್ಲ. ಮೇ 24ರಂದು ಅಧಿವೇಶನದಲ್ಲಿಯೇ ತೀರ್ಮಾನವಾಗಲಿದೆ ಎಂದರು.

ಬಿಜೆಪಿಯವರು ಶೇ.40 ಕಮಿಷನ್‌ ಆರೋಪಕ್ಕೆ ಆಧಾರ ಕೊಡಲಿ ಎಂದು ಕೇಳುತ್ತಿದ್ದಾರೆ. ಆದರೆ ಈ ಆರೋಪ ಮಾಡಿದ್ದು ನಾವಲ್ಲ. ಈ ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ. ಇದುವರೆಗೂ ಅವರ ವಿರುದ್ಧ ಸರ್ಕಾರ ಯಾವುದೇ ತನಿಖೆಗೆ ಮುಂದಾಗಿಲ್ಲ ಎಂದರೆ ಅವರ ಆರೋಪವನ್ನು ಒಪ್ಪಿಕೊಂಡಂತೆ ಅಲ್ಲವೇ ಎಂದು ಪ್ರಶ್ನಿಸಿದ ಅವರು ಕೆಂಪಣ್ಣ ಅವರು ಬಿಜೆಪಿ ಪಕ್ಷದ ಮೇಲೆ ಆರೋಪ ಮಾಡಿ ಎರಡು ವರ್ಷ ಆಗಿದೆ. ಸಣ್ಣಪುಟ್ಟವಿಚಾರಗಳಿಗೂ ಐಟಿ, ಇಡಿ ದಾರಿ ಹಿಡಿಯುವ ಪ್ರಧಾನ ಮಂತ್ರಿಗಳು, ಈ ವಿಚಾರದಲ್ಲಿ ಏಕೇ ಮೌನವಹಿಸಿದ್ದಾರೆ. ಇದರ ಹಿಂದಿನ ಗುಟ್ಟೇನು ಎಂಬುದನ್ನು ಮಾಜಿ ಮುಖ್ಯಮಂತ್ರಿಗಳೇ ಬಹಿರಂಗ ಪಡಿಸಬೇಕು. ಓರ್ವ ನಿಗಮದ ಅಧ್ಯಕ್ಷನ ಮನೆಯಲ್ಲಿಯೇ ಕೋಟಿ, ಕೋಟಿ ಹಣ ಸಿಕ್ಕಿದೆ ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಎಂ.ಬಿ.ಪಾಟೀಲ್‌ ನುಡಿದರು.

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ಬೇಕು ಎನ್ನುವವರು ರಾಜ್ಯದಲ್ಲಿ ನಿಮ್ಮ ಸರ್ಕಾರವಿದ್ದಾಗ ಎಷ್ಟುಜನ ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆ ನಡೆಸಲಿ, ಅಲ್ಲದೆ ಒಂದು ಸರ್ಕಾರ ಡಿಜಿಪಿ ಹುದ್ದೆಯಲ್ಲಿದ್ದ ವ್ಯಕ್ತಿಯೇ ಪಿಎಸ್‌ಐ ಹಗರಣದಲ್ಲಿ ಬಂಧಿಯಾಗಿದ್ದು, ಇದುವರೆಗೂ ಜಾಮೀನು ದೊರೆತಿಲ್ಲ. ನೇಮಕಾತಿ ಮತ್ತು ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ, ಅದನ್ನು ಆಧಾರವಾಗಿಟ್ಟುಕೊಂಡು ತನಿಖೆ ನಡೆಸುತ್ತೇವೆ ಎಂದರು. ಮೀಸಲಾತಿ ಹಂಚಿಕೆಯಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಎಡವಿದೆ. ಸುಪ್ರಿಂೕಕೋರ್ಟಿನ ಆದೇಶ ಶೇ.50 ಎಂಬುದನ್ನು ಮೀರಿದೆ. ಹೀಗಾಗಿ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ. ಈಗಾಗಲೇ ಮಹಾರಾಷ್ಟ್ರ, ಆಂಧ್ರ ಸೇರಿದಂತೆ ಹಲವಡೆ ನ್ಯಾಯಾಲಯ ತಡೆ ಹಿಡಿದಿದೆ. ಈ ಎಲ್ಲಾ ಅಂಶಗಳನ್ನು ತುಲನೆ ಮಾಡಿ, ನಾವು ಮೀಸಲಾತಿ ಘೋಷಿಸಬೇಕಿದೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವೇಳೆ ಸಚಿವ ಎಂ.ಬಿ.ಪಾಟೀಲ್‌ ಪತ್ನಿ ಆಶಾಪಾಟೀಲ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಿಹುಲಿಕುಂಟೆ ಮಠ್‌, ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರರವಿಕುಮಾರ್‌, ಪುಟ್ಟರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. ತದನಂತರ ತುಮಕೂರು ನಗರ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್‌,ಉಪಾಧ್ಯಕ್ಷ ಚಂದ್ರಮೌಳಿ, ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮೋಹನ್‌ ಪಟೇಲ್‌ ಸೇರಿದಂತೆ ಹಲವರು ಸಚಿವರನ್ನು ಭೇಟಿಯಾಗಿ, ಸಮುದಾಯದ ಪರವಾಗಿ ಗೌರವಿಸಿದರು.

ಸ್ಥಳೀಯ ಸಮ​ಸ್ಯೆ​ಗಳ ಪರಿ​ಹಾ​ರಕ್ಕೆ ಹೆಚ್ಚಿನ ನಿಗಾ: ಶಾಸಕ ವಿಜ​ಯೇಂದ್ರ ಭರ​ವ​ಸೆ

‘ಶೆಟ್ಟರ್‌ಗೆ ಸೂಕ್ತ ಸ್ಥಾನಮಾನ ಕೊಡುವುದು ನಿಶ್ಚಿತ’: ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರಿ ಸೋಲುಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಎಐಸಿಸಿ ಮತ್ತು ಕೆಪಿಸಿಸಿ ಮುಖಂಡರು ಚರ್ಚೆ ನಡೆಸಿದ್ದಾರೆ. ಅವರಿಗೆ ಸೂಕ್ತ ಸ್ಥಾನ ಮಾನ ಕೊಡುವುದು ನಿಶ್ಚಿತ. ವೀರೇಂದ್ರಪಾಟೀಲ್‌ ನಂತರ ಇದೇ ಪ್ರಥಮ ಬಾರಿಗೆ ಬಿಜೆಪಿಯ ಅಪಪ್ರಚಾರವನ್ನು ಮೆಟ್ಟಿನಿಂತು ಲಿಂಗಾಯತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಇದರ ಜೊತೆಗೆ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದ್ದಾರೆ. ಹಾಗಾಗಿ ಎಲ್ಲರನ್ನು ಒಳಗೊಂಡ ಮಂತ್ರಿ ಮಂಡಲ ಇದಾಗಬೇಕು. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಆಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌