ಸಿದ್ದರಾಮಯ್ಯರಿಂದ 1 ಟ್ರಿಲಿಯನ್ ಆರ್ಥಿಕ ರಾಜ್ಯ ಮಾಡುವ ಪ್ರಯತ್ನ: ಸಚಿವ ಈಶ್ವರ ಖಂಡ್ರೆ

By Kannadaprabha NewsFirst Published Feb 17, 2024, 9:01 PM IST
Highlights

ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರು. ವೆಚ್ಚದಲ್ಲಿ ಇಂಟರ್ ಪ್ರಿಟೇಷನ್ ಕೇಂದ್ರ ನಿರ್ಮಿಸಲು 25 ಕೋಟಿ ನೀಡಲಾಗಿದ್ದರೆ, ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಪ್ರಕಟಿಸಿರುವುದು ಪರಿಸರ ಪ್ರವಾಸೋದ್ಯಮಕ್ಕೆ ಇಂಬು ನೀಡುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರು (ಫೆ.17): ಹಣಕಾಸು ಸಚಿವರಾದ ಸಿದ್ದರಾಮಯ್ಯ ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಸರ್ವಸ್ಪರ್ಷಿ ಬಜೆಟ್‌ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 15ನೇ ಬಾರಿಗೆ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ಆಗದು ಎಂದು ಕೈಕಟ್ಟಿ ಕೂರದೆ, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಎಲ್ಲ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ ಮತ್ತು ಗೃಹಜ್ಯೋತಿ ಗ್ಯಾರಂಟಿಗಳ ಅನುಷ್ಠಾನದ ಯಶಸ್ವಿ ಜಾರಿ ಮತ್ತು ಸ್ಪಷ್ಟ ಮುನ್ನೋಟದೊಂದಿಗೆ ಸಾಬೀತು ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರು. ವೆಚ್ಚದಲ್ಲಿ ಇಂಟರ್ ಪ್ರಿಟೇಷನ್ ಕೇಂದ್ರ ನಿರ್ಮಿಸಲು 25 ಕೋಟಿ ನೀಡಲಾಗಿದ್ದರೆ, ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಪ್ರಕಟಿಸಿರುವುದು ಪರಿಸರ ಪ್ರವಾಸೋದ್ಯಮಕ್ಕೆ ಇಂಬು ನೀಡುತ್ತದೆ ಎಂದು ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಡುವ ಪ್ರಶ್ನೆಯೇ ಇಲ್ಲ: ಶೋಭಾ ಕರಂದ್ಲಾಜೆ

ಆನೆ ಮತ್ತು ಚಿರತೆ ಕಾರ್ಯಪಡೆಗಳ ಉನ್ನತೀಕರಣ: ಈಗಾಗಲೇ ರಚಿಸಲಾಗಿರುವ 7 ಆನೆ ಕಾರ್ಯಪಡೆ ಮತ್ತು 2 ಚಿರತೆ ಕಾರ್ಯಪಡೆ ಕಾರ್ಯಕ್ಷಮತೆ ಹೆಚ್ಚಿಸಲು 40 ಕೋಟಿ ರು. ಅನುದಾನ ಒದಗಿಸಲಾಗಿದೆ. ಜೊತೆಗೆ ಪ್ರಸಕ್ತ ಸಾಲಿನಲ್ಲಿ ಕೂಡ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡುವುದಾಗಿ ಪ್ರಕಟಿಸಿರುವುದು ಮಾನವ-ವನ್ಯಜೀವಿ ಸಂರಕ್ಷಣೆಯ ತ್ವರಿತ ಸ್ಪಂದನೆಗೆ ಸಹಕಾರಿಯಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೀದರ್ ಜಿಲ್ಲೆ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವ ವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟಿ ರು. ಅನುದಾನ ಒದಗಿಸಿರುವುದನ್ನು ಸಚಿವರು ಸ್ವಾಗತಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ರು.: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದ್ದು 5000 ಕೋಟಿ ರು. ಒದಗಿಸಲಾಗಿದೆ. ಕೆಕೆಆರ್‌ಡಿಬಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸುವ ಘೋಷಣೆ ಹಾಗೂ ಕೆಕೆಆರ್‌ಡಿಬಿ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲೂಕು ಕೇಂದ್ರದಲ್ಲಿ ಸ್ಥಾಪಿಸುವ ಸಂಕಲ್ಪ ನಮ್ಮ ಭಾಗದ ಶೈಕ್ಷಣಿಕ ಪ್ರಗತಿಗೆ ಕಾರಣವಾಗಲಿದೆ.

ಬೀದರ್ ನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ದಿಗೆ 1ಕೋಟಿ ರು., ಔರಾದ್ ನೀರಾವರಿ ಯೋಜನೆ, ಬೀದರ್- ಬೆಂಗಳೂರು ನಡುವಿನ ಆರ್ಥಿಕ ಕಾರಿಡಾರ್, ಬೀದರ್ ಜಿಲ್ಲಾ ಸಂಕಿರ್ಣ ಜಿಲ್ಲೆಗೆ ಬಜೆಟ್ ಕೊಡುಗೆಯಾಗಿದೆ. ಕಲ್ಯಾಣ ಕರ್ನಾಕದಲ್ಲಿ ಹಿಮೋಫೀಲಿಯಾ ಮತ್ತು ತಲಸ್ಮೇನಿಯಾ ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಕಲಬುರಗಿ ಮತ್ತು ಕೊಪ್ಪಳದ ಐಸಿಡಿಟಿ ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರು. ಒದಗಿಸಿರುವುದನ್ನು ಈಶ್ವರ ಖಂಡ್ರೆ ಸ್ವಾಗತಿಸಿದ್ದಾರೆ. ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು1150 ಕಿ.ಮೀ. ರಸ್ತೆಗಳನ್ನು 1000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ನಿರ್ಧಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಸಂಪರ್ಕ ಕ್ರಾಂತಿ ಆಗಲಿದೆ ಎಂದು ತಿಳಿಸಿದ್ದಾರೆ.

ಬರ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯವಾಗಬಾರದು: ಸಂಸದ ಪ್ರಜ್ವಲ್ ರೇವಣ್ಣ

ಅನುಭವದ ಧಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಸಚಿವರಾಗಿ ತಾವು ಪಡೆದ ಸುದೀರ್ಘ ಅನುಭವವನ್ನು ಈ ಬಜೆಟ್‌ನಲ್ಲಿ ಧಾರೆ ಎರೆದಿದ್ದು, ಕಲ್ಯಾಣ ರಾಜ್ಯದ ಕನಸು ನನಸು ಮಾಡುವ ಸಂಯಮ ನೋಟ ಮುಂದಿಟ್ಟಿದ್ದಾರೆ. 1 ಟ್ರಿಲಿಯನ್ ಆರ್ಥಿಕ ರಾಜ್ಯ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

click me!