
ಬೆಂಗಳೂರು (ಅ.31): ನಗರದಲ್ಲಿ ಕಾನೂನು ಬಾಹಿರ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದೆ. ಕಂದಾಯ ಬಡಾವಣೆಗಳಲ್ಲಿ ಹಾಗೂ ಬಿ ಖಾತಾ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯುತ್ತಿಲ್ಲ. ಸೆಟ್ ಬ್ಯಾಕ್ ಬಿಡದೆ ಅಕ್ರಮವಾಗಿ 6 ರಿಂದ 8 ಮಹಡಿ ಕಟ್ಟುತ್ತಿದ್ದಾರೆ. ಇಂತಹ ಅಕ್ರಮ ನಿರ್ಮಾಣದಿಂದ ಇತ್ತೀಚೆಗೆ ಕಟ್ಟಡ ನೆಲಸಮ ಆಗಿ 8 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಅಕ್ರಮ ನಿರ್ಮಾಣಗಳನ್ನು ನಿಯಂತ್ರಿಸಲು ಕಾನೂನು ಭದ್ರ ಮಾಡುತ್ತಿದ್ದೇವೆ ಎಂದು ಹೇಳಿದರು.
ರೈತರಿಗೆ ನೀಡಿದ ವಕ್ಫ್ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ
ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಅಧಿಕಾರ: ಅಕ್ರಮ ಕಟ್ಟಡಗಳ ನಿರ್ಮಾಣ ನಿಯಂತ್ರಿಸಲು ಬಿಬಿಎಂಪಿ, ಬಿಎಂಆರ್ಡಿಎ ಹಾಗೂ ಬಿಡಿಎಗೆ ಹೆಚ್ಚು ಅಧಿಕಾರ ನೀಡುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ನಿಯಮ ಬಾಹಿರವಾಗಿ ಆಗುವ ಕಟ್ಟಡ ನಿರ್ಮಾಣ ತಡೆಯಲು ಹಾಗೂ ಅದರ ಅನಾಹುತ ತಡೆಯಲು ಕಾನೂನು ಬಿಗಿ ಮಾಡುತ್ತೇವೆ ಎಂದರು.
ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ತೆರವು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ನಗರದಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ಪೊಲೀಸ್ ಅಧಿಕಾರಿಗಳಿಗೆ ನಮ್ಮ ಸರ್ಕಾರ ಪೂರ್ಣ ಅಧಿಕಾರ ನೀಡಿದೆ ಎಂದು ಹೇಳಿದರು.
ಭಗೀರಥ ಅಂತ ಹೇಳಿಕೊಳ್ಳದೆ ಚುನಾವಣೆ ಎದುರಿಸಲಿ: ಯೋಗೇಶ್ವರ್ಗೆ ಡಿವಿಎಸ್ ಸವಾಲು
ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ. ಕೂಡಲೇ ಇಂತಹ ಆಸ್ತಿಗಳ ನೋಂದಣಿ ಸಹ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಈ ವಿಚಾರದಲ್ಲಿ ನಾವು ಮಹತ್ವದ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.