ವಿಶ್ವನಾಥ್‌ ನಾಮನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಅಡ್ಡಿ?

By Kannadaprabha NewsFirst Published Jun 22, 2020, 11:43 AM IST
Highlights

ವಿಶ್ವನಾಥ್‌ ನಾಮನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಅಡ್ಡಿ?| ಚುನಾವಣೆಯಲ್ಲಿ ಆಯ್ಕೆಯಾದರೆ ಮಾತ್ರ ಸಚಿವ ಸ್ಥಾನ ಲಭ್ಯ| ಸಾಹಿತ್ಯ ಕೋಟಾದಡಿ ಆಯ್ಕೆ ಅಸಾಧ್ಯ: ಕಾನೂನು ತಜ್ಞರು

ಬೆಂಗಳೂರು(ಜೂ.22): ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರನ್ನು ಸಾಹಿತ್ಯ ಕ್ಷೇತ್ರದ ಕೋಟಾದಡಿ ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡಲು ಅನರ್ಹತೆ ಕುರಿತಂತೆ ಸುಪ್ರೀಂಕೋರ್ಟ್‌ ನೀಡಿದ ತೀರ್ಪು ಅಡ್ಡಿಯಾಗಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಶಾಸಕರಾಗಿದ್ದ ಎಚ್‌.ವಿಶ್ವನಾಥ್‌ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ಅನರ್ಹತೆ ಮಾಡಿ ಮುಂದಿನ ವಿಧಾನಸಭೆಯ ಚುನಾವಣೆಯವರೆಗೂ ಚುನಾವಣೆಗೆ ಸ್ಪರ್ಧಿಸದಂತೆ ಆದೇಶ ಮಾಡಿದ್ದರು. ಆ ಆದೇಶವನ್ನು ಪ್ರಶ್ನಿಸಿ ವಿಶ್ವನಾಥ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ ಅನರ್ಹತೆ ಆದೇಶವನ್ನು ಎತ್ತಿಹಿಡಿದು, ಉಪ ಚುನಾವಣೆಗೆ ಸ್ಪರ್ಧಿಸಲು ವಿಶ್ವನಾಥ್‌ ಅವರಿಗೆ ಅವಕಾಶ ಮಾಡಿಕೊಟ್ಟಿತು. ಅಲ್ಲದೆ, ಉಪ ಚುನಾವಣೆಯಲ್ಲಿ ಆಯ್ಕೆಯಾದರೆ ಮಾತ್ರ ಸಾಂವಿಧಾನಿಕ ಸ್ಥಾನಮಾನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿತ್ತು.

ಇದೀಗ ವಿಶ್ವನಾಥ್‌ ಅವರನ್ನು ವಿಧಾನಪರಿಷತ್‌ಗೆ ಸಾಹಿತ್ಯ ಕ್ಷೇತ್ರದ ಕೋಟಾದಡಿ ನಾಮನಿರ್ದೇಶನ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂದಿದೆ. ಇದನ್ನು ಸ್ವತಃ ವಿಶ್ವನಾಥ್‌ ಅವರೂ ಹೇಳಿದ್ದಾರೆ. ಆದರೆ, ಅನರ್ಹತೆಗೆ ಗುರಿಯಾಗಿ ಆ ಆದೇಶವನ್ನು ಸುಪ್ರೀಂಕೊರ್ಟ್‌ ಎತ್ತಿಹಿಡಿದಿರುವಾಗ ವಿಶ್ವನಾಥ್‌ ಅವರನ್ನು ರಾಜ್ಯಪಾಲರು ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡಲು ಸಾಧ್ಯವಿಲ್ಲ. ಅದಕ್ಕೆ ಸುಪ್ರೀಂಕೊರ್ಟ್‌ ತೀರ್ಪು ಅಡ್ಡಿಯಿರುತ್ತದೆ. ಒಂದೊಮ್ಮೆ ನಾಮನಿರ್ದೇಶನ ಮಾಡಿದರೂ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಮತ್ತು ನ್ಯಾಯಾಂಗ ವಿಮರ್ಶೆಗೆ ಒಳಪಡಿಸಲು ಮುಕ್ತ ಅವಕಾಶವಿರುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

click me!